ಬೆಂಗಳೂರು, ಆಗಸ್ಟ್ 28: ಕೆಪಿಎಸ್ಸಿ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳ ಕಣ್ತಪ್ಪಿಸಿ ದೆಹಲಿಗೆ ತೆರಳಿದ್ದರು ಎನ್ನಲಾದ 2016ನೇ ಬ್ಯಾಚ್ನ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಗಂಗವಾರ್ ಇದೀಗ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಸಿಐಡಿ ನೋಟಿಸ್ ನೀಡಿದ ಬೆನ್ನಲ್ಲೇ ಶುಕ್ರವಾರ ಅವರು ತನಿಖಾಧಿಕಾರಿ ರಾಘವೇಂದ್ರ ಹೆಗಡೆ ಅವರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಗ್ಯಾನೇಂದ್ರ ಕುಮಾರ್ ಅವರು ಕೆಪಿಎಸ್ಸಿಯಲ್ಲಿ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವಧಿಯಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಕೂಡ ತನಿಖೆ ನಡೆಸುತ್ತಿದ್ದು, ಬೆಂಗಳೂರಿನ ಜಯಮಹಲ್ನಲ್ಲಿರುವ ಅವರ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಲಖನೌ ಬಳಿಯ ಸ್ವಗ್ರಾಮದ ಮನೆಯ ಮೇಲೂ ಶೋಧ ನಡೆಸಿತ್ತು.
ED ದಾಳಿಯ ಸುಳಿವಿನ ಬಳಿಕ ದೆಹಲಿಗೆ ಪ್ರಯಾಣ?
ತನಿಖಾ ಸಂಸ್ಥೆಗಳ ದಾಳಿ ನಡೆಯುವ ಮುನ್ಸೂಚನೆ ಸಿಕ್ಕ ಬಳಿಕ ಗ್ಯಾನೇಂದ್ರ ಕುಮಾರ್ ಅವರು ತಮ್ಮ ಮೊಬೈಲ್, ಲ್ಯಾಪ್ಟಾಪ್ ಹಾಗೂ ಕೆಲವು ಪ್ರಮುಖ ದಾಖಲೆಗಳೊಂದಿಗೆ ದೆಹಲಿಗೆ ತೆರಳಿದ್ದರು ಎನ್ನಲಾಗಿದೆ. ಇದೇ ವೇಳೆ ತಂದೆಗೆ ಹೃದಯಾಘಾತವಾಗಿದ್ದು, ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿಸಿ 15 ದಿನಗಳ ತುರ್ತು ರಜೆಗೆ ಸರ್ಕಾರಕ್ಕೆ ಮನವಿ ಮಾಡಿದ್ದರು ಎನ್ನಲಾಗಿದೆ.
ಆದರೆ, ಲಖನೌನಲ್ಲಿದ್ದ ಅವರ ತಂದೆ ತಾನು ಆರೋಗ್ಯವಾಗಿರುವುದಾಗಿ ಹಾಗೂ ಪುತ್ರ ಮನೆಗೆ ಬಂದಿಲ್ಲ ಎಂದು ಹೇಳಿರುವುದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿತ್ತು. ಇದರಿಂದ ಗ್ಯಾನೇಂದ್ರ ಕುಮಾರ್ ಅವರ ದೆಹಲಿ ಪ್ರಯಾಣ ಮತ್ತು ರಜೆ ಮನವಿಯ ಕುರಿತು ಹಲವು ಅನುಮಾನಗಳು ಮೂಡಿದ್ದವು.
CID ನೋಟಿಸ್ಗೆ ಮಣಿದ ಅಧಿಕಾರಿ
ED ಶೋಧದ ಬಳಿಕ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ CID ಅಧಿಕಾರಿಗಳು ಗ್ಯಾನೇಂದ್ರ ಕುಮಾರ್ ಅವರ ಬೆಂಗಳೂರಿನ ನಿವಾಸ ಹಾಗೂ ಕಚೇರಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೋಟಿಸ್ ನೀಡಿದ್ದಾರೆ. ತನಿಖೆಗೆ ಸಹಕರಿಸುವಂತೆ ಸೂಚಿಸಿದ ಬಳಿಕವೂ ಅವರು ವಿಚಾರಣೆಗೆ ಹಾಜರಾಗದ ಹಿನ್ನೆಲೆ ಪ್ರಕರಣ ಮತ್ತಷ್ಟು ಕುತೂಹಲ ಮೂಡಿಸಿತ್ತು.
ಇದೀಗ ಕೊನೆಗೂ ಗ್ಯಾನೇಂದ್ರ ಕುಮಾರ್ CID ಕಚೇರಿಗೆ ಆಗಮಿಸಿದ್ದು, ತನಿಖಾಧಿಕಾರಿ ರಾಘವೇಂದ್ರ ಹೆಗಡೆ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ. KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಅವರಿಂದ ಪ್ರಮುಖ ಮಾಹಿತಿ ಪಡೆಯಲು CID ಅಧಿಕಾರಿಗಳು ಮುಂದಾಗಿದ್ದಾರೆ. ನೇಮಕಾತಿ ಪ್ರಕ್ರಿಯೆಯಲ್ಲಿ ಅವರ ಪಾತ್ರವೇನು, ದಾಖಲೆಗಳು ಮತ್ತು ಪರೀಕ್ಷಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಏನಾದರೂ ಅಕ್ರಮ ನಡೆದಿದೆಯೇ ಎಂಬುದರ ಕುರಿತು ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.
