ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

Untitled design (57)

ಬೆಂಗಳೂರು (ಆಗಸ್ಟ್ 14): ಬೆಂಗಳೂರು ರಾಜರಾಜೇಶ್ವರಿ ನಗರದಲ್ಲಿ ನಡೆದ ದುರಂತ ಘಟನೆಯೊಂದು ನಗರವನ್ನು ಬೆಚ್ಚಿಬೀಳಿಸಿದೆ. ಮೂರು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ದಂಪತಿಯ ಜೀವನ ಕೌಟುಂಬಿಕ ಕಲಹದ ನಡುವೆ ದುರಂತ ಅಂತ್ಯ ಕಂಡಿದ್ದು, ಪತ್ನಿ ಮೃತಪಟ್ಟಿರುವ ಸ್ಥಿತಿಯಲ್ಲಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ದಾಖಲಾಗಿದೆ. ರಾಜಗೋಪಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮೃತ ಮಹಿಳೆಯನ್ನು ಪದ್ಮಾವತಿ (29) ಎಂದು ಗುರುತಿಸಲಾಗಿದ್ದು, ಅವರು ವೈಟ್‌ಫೀಲ್ಡ್ ಸಮೀಪದ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಪತಿ ಸುಮಂತ್ ಜೈನ್ (32) ದಕ್ಷಿಣ ಕನ್ನಡ ಮೂಲದವರಾಗಿದ್ದು, ಸಿವಿಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ದಂಪತಿ ಕಳೆದ ಒಂದೂವರೆ ವರ್ಷದಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಗುರುವಾರ ರಾತ್ರಿ ದಂಪತಿ ನಡುವೆ ಕೌಟುಂಬಿಕ ವಿಚಾರವಾಗಿ ಜಗಳ ನಡೆದಿತ್ತು. ಮಾತಿನ ಚಕಮಕಿ ತೀವ್ರಗೊಂಡು ಪತಿ ಸುಮಂತ್ ಜೈನ್ ಕಪಾಳಕ್ಕೆ ಹೊಡೆದಿದ್ದಾನೆ ಇದರಿಂದ ಪದ್ಮಾವತಿ ಗಂಭೀರವಾಗಿ ಗಾಯಗೊಂಡಿದ್ದು, ಬಳಿಕ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಬಳಿಕ ಸುಮಂತ್ ತನ್ನ ತಾಯಿಗೆ ವಾಯ್ಸ್ ಮೆಸೇಜ್ ಕಳುಹಿಸಿ, ಕುಟುಂಬದ ಹಣಕಾಸು ಮತ್ತು ಮನೆಯ ವಸ್ತುಗಳ ಕುರಿತು ಮಾಹಿತಿ ನೀಡಿದ್ದಾನೆ ಎಂದು ತಿಳಿದುಬಂದಿದೆ. ನಂತರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ದಂಪತಿ ಈ ತಿಂಗಳ ಕೊನೆಯಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲು ಯೋಜನೆ ರೂಪಿಸಿಕೊಂಡಿದ್ದು, ಅದನ್ನು ಸ್ನೇಹಿತರೊಂದಿಗೆ ಹಂಚಿಕೊಂಡಿದ್ದರು ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ರಾಜಗೋಪಾಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಮೊಬೈಲ್, ಧ್ವನಿ ಸಂದೇಶ ಹಾಗೂ ಇತರ ಸಾಕ್ಷ್ಯಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ.

Exit mobile version