ಬೆಂಗಳೂರು (ಜುಲೈ 8): ಬೆಂಗಳೂರು ಉತ್ತರ ತಾಲೂಕಿನ ಕಾಡಯರಪ್ಪನಹಳ್ಳಿಯ ಸ್ಟ್ರಲಿಂಗ್ ಇಂಗ್ಲೀಷ್ ವಸತಿ ಶಾಲೆಯಲ್ಲಿ ಓದುತ್ತಿದ್ದ 6ನೇ ತರಗತಿ ವಿದ್ಯಾರ್ಥಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ತೀವ್ರ ಆತಂಕಕ್ಕೆ ಕಾರಣವಾಗಿದೆ. ಮೃತ ವಿದ್ಯಾರ್ಥಿಯನ್ನು ಗುರುಕಿರಣ್ (12) ಎಂದು ಗುರುತಿಸಲಾಗಿದ್ದು, ಯಲಹಂಕ ತಾಲೂಕಿನ ಸುಬೇದಾರ್ ಪಾಳ್ಯದ ರಾಘವೇಂದ್ರ ಅವರ ಪುತ್ರನಾಗಿದ್ದಾನೆ. ಮಗನ ಸಾವಿನ ಸುದ್ದಿ ತಿಳಿದ ತಕ್ಷಣ ಕುಟುಂಬಸ್ಥರು ಹಾಗೂ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಮಾಹಿತಿಯ ಪ್ರಕಾರ, ಇಂದು ಬೆಳಗ್ಗೆ ಶಾಲಾ ಶಿಕ್ಷಕರು ಪೋಷಕರಿಗೆ ಕರೆ ಮಾಡಿ, “ಮಗನಿಗೆ ಹುಷಾರಿಲ್ಲ, ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದೇವೆ” ಎಂದು ತಿಳಿಸಿದ್ದಾರೆ. ಆದರೆ ಪೋಷಕರು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಗುರುಕಿರಣ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಇದರಿಂದ ಆಕ್ರೋಶಗೊಂಡ ಕುಟುಂಬಸ್ಥರು ಮತ್ತು ಸಂಬಂಧಿಕರು ಮಗುವಿನ ಸಾವಿನ ಹಿಂದೆ ಗಂಭೀರ ಅನುಮಾನ ವ್ಯಕ್ತಪಡಿಸಿದ್ದಾರೆ.
ಪೋಷಕರ ಆರೋಪದ ಪ್ರಕಾರ, ಶಾಲೆಯಲ್ಲಿ ಶಿಕ್ಷಕರಿಂದ ಹಲ್ಲೆ ಹಾಗೂ ಮಗುವಿನ ಮೇಲೆ ಅತಿಯಾದ ಒತ್ತಡ ಹೇರಲಾಗುತ್ತಿತ್ತು. ಇದೇ ಕಾರಣದಿಂದ ಮಗುವಿನ ಆರೋಗ್ಯ ಹದಗೆಟ್ಟು ಸಾವಿಗೆ ಕಾರಣವಾಗಿರಬಹುದು ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ. ಮಗುವಿನ ದೇಹವನ್ನು ನೋಡಿದ ಬಳಿಕ ಕುಟುಂಬಸ್ಥರ ಆಕ್ರಂದನ ಮತ್ತಷ್ಟು ಹೆಚ್ಚಿದ್ದು, ಆಸ್ಪತ್ರೆ ಆವರಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಘಟನೆಯ ಮಾಹಿತಿ ತಿಳಿದು ಬಾಗಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಯ ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಆರಂಭಿಸಲಾಗಿದ್ದು, ಶಾಲಾ ಆಡಳಿತ, ಶಿಕ್ಷಕರು ಹಾಗೂ ಸಂಬಂಧಿತ ಸಿಬ್ಬಂದಿಯಿಂದ ಮಾಹಿತಿ ಕಲೆಹಾಕಲಾಗುತ್ತಿದೆ. ಅಗತ್ಯವಿದ್ದರೆ ಮರಣೋತ್ತರ ಪರೀಕ್ಷಾ ವರದಿ ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಘಟನೆ ಶಾಲಾ ವಸತಿ ನಿಲಯಗಳಲ್ಲಿನ ಮಕ್ಕಳ ಸುರಕ್ಷತೆ ಮತ್ತು ಮೇಲ್ವಿಚಾರಣೆ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ಪೋಷಕರು ತಮ್ಮ ಮಕ್ಕಳನ್ನು ಸುರಕ್ಷಿತ ವಾತಾವರಣದಲ್ಲಿ ಓದಲು ವಸತಿ ಶಾಲೆಗೆ ಕಳುಹಿಸುವ ಸಂದರ್ಭದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಆತಂಕ ಹೆಚ್ಚಿಸಿದೆ. ಕುಟುಂಬಸ್ಥರು ಮಗುವಿನ ಸಾವಿನ ಕುರಿತು ಸಂಪೂರ್ಣ ಸತ್ಯ ಹೊರಬರಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಕಾಡಯರಪ್ಪನಹಳ್ಳಿಯ ಸ್ಟ್ರಲಿಂಗ್ ಇಂಗ್ಲೀಷ್ ವಸತಿ ಶಾಲೆಯಲ್ಲಿ ನಡೆದ ಈ ವಿದ್ಯಾರ್ಥಿಯ ಅನುಮಾನಾಸ್ಪದ ಸಾವು ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ತನಿಖೆಯ ಬಳಿಕವೇ ನಿಜಾಂಶ ಬಹಿರಂಗವಾಗಬೇಕಿದೆ.
