’ತ್ಯಾಜ್ಯದಿಂದ ಸ್ವಾತಂತ್ರ್ಯ’: ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಕೃಷ್ಣ ಬೈರೇಗೌಡ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (10)

ಬೆಂಗಳೂರು, ಆಗಸ್ಟ್ 29: ನಗರದಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ, ಖಾಲಿ ನಿವೇಶನಗಳ ಸ್ವಚ್ಛತೆ ಹಾಗೂ ಬಿಡಾಡಿ ವಾಹನಗಳ ತೆರವು ಕಾರ್ಯದಲ್ಲಿ ಬೇಜವಾಬ್ದಾರಿತನ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಕೆಳಹಂತದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಜಿಬಿಎ ವ್ಯಾಪ್ತಿಯಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ, ಖಾಲಿ ನಿವೇಶನಗಳ ಸ್ವಚ್ಛತೆ ಹಾಗೂ ಬಿಡಾಡಿ ವಾಹನಗಳ ತೆರವು ಕಾರ್ಯಕ್ಕೆ ಸಂಬಂಧಿಸಿದಂತೆ ಇಂದು ಕೆಳಹಂತದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸರಿಯಾಗಿ ಕೆಲಸ ಮಾಡದೆ ಬೇಜವಾಬ್ದಾರಿತನ ತೋರುವ ಖಾಯಂ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಸಿಬ್ಬಂದಿ ಬೇಜವಾಬ್ದಾರಿತನ ತೋರಿದರೆ, ಅವರನ್ನು ಕೆಲಸದಿಂದಲೇ ವಜಾಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಗರದಲ್ಲಿ ಮೇಲಿನ ಮೂರು ಅಂಶಗಳಲ್ಲಿಯೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಶೀಘ್ರದಲ್ಲೇ ನಾಗರಿಕರಿಗೆ ದೂರುಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಬಳಿಕ ನಾಗರಿಕರಿಂದ ತ್ಯಾಜ್ಯ ತೆರವುಗೊಳಿಸದಿರುವುದು, ನಿವೇಶನಗಳಲ್ಲಿ ಸ್ವಚ್ಛತೆ ಕಾಪಾಡದಿರುವುದು ಹಾಗೂ ಬಿಡಾಡಿ ವಾಹನಗಳನ್ನು ತೆರವುಗೊಳಿಸದಿರುವ ಕುರಿತು ದೂರುಗಳು ಬಂದಲ್ಲಿ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.

ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ

ನಗರದಲ್ಲಿ ಈವರೆಗೆ 1,211 ಕಿ.ಮೀ. ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದ್ದು, ಇನ್ನೂ ಸುಮಾರು 300 ಕಿ.ಮೀ. ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಆರಂಭದಲ್ಲಿದ್ದ ವೇಗ ಇದೀಗ ಕಾಣುತ್ತಿಲ್ಲ. ಇದೇ ವೇಗದಲ್ಲಿ ಕಾರ್ಯ ಮುಂದುವರಿದರೆ ಇನ್ನೂ ಎರಡು ತಿಂಗಳು ಬೇಕಾಗುತ್ತದೆ. ಆದ್ದರಿಂದ ತೆರವು ಕಾರ್ಯದ ವೇಗವನ್ನು ತಕ್ಷಣ ಹೆಚ್ಚಿಸಿ, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಹಿರಿಯ ಅಧಿಕಾರಿಗಳು ಸ್ವತಃ ಮೇಲ್ವಿಚಾರಣೆ ನಡೆಸಿ, ತೆರವು ಕಾರ್ಯಕ್ಕೆ ವೇಗ ನೀಡಬೇಕು.  ತಳಮಟ್ಟದಲ್ಲಿ ನಿರೀಕ್ಷಿತ ಮಟ್ಟದ ಕಾರ್ಯನಿರ್ವಹಣೆ ಕಂಡುಬರುತ್ತಿಲ್ಲ. ಈ ಸಂಬಂಧ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ವಾಸ್ತವಿಕ ಪ್ರಗತಿಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮರು ಅತಿಕ್ರಮಣದ ವಿರುದ್ಧ ಕಠಿಣ ಕ್ರಮ

ಒತ್ತುವರಿ ತೆರವು ಮಾಡಿದ ಬಳಿಕ ಮತ್ತೆ ಅತಿಕ್ರಮಣ ಮಾಡುತ್ತಿರುವ ಕುರಿತು ನಾಗರಿಕರಿಂದ ಹಲವು ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ, ಮರು ಅತಿಕ್ರಮಣ ಮಾಡಿರುವವರ ಮೆಟೀರಿಯಲ್‌ ಜಪ್ತಿ ಮಾಡುವ ಜೊತೆಗೆ ನಿಯಮಾನುಸಾರ ಗರಿಷ್ಠ ದಂಡ ವಿಧಿಸಬೇಕು. ಯಾವುದೇ ರೀತಿಯ ಒತ್ತಡ ಅಥವಾ ಭಯಕ್ಕೆ ಒಳಗಾಗದೆ ಕಾರ್ಯನಿರ್ವಹಿಸಿದ ಅಧಿಕಾರಿಗಳಿಗೆ ಉತ್ತಮ ಹೆಸರು ಬಂದಿದೆ. ಆದರೆ ಮರು ಅತಿಕ್ರಮಣ ನಡೆಯಲು ಅವಕಾಶ ನೀಡಿದರೆ, ಅದೇ ಉತ್ತಮ ಕಾರ್ಯಕ್ಕೆ ಧಕ್ಕೆಯಾಗುತ್ತದೆ. ಮರು ಒತ್ತುವರಿಗೆ ಅವಕಾಶ ನೀಡಿದರೆ ಇಲಾಖೆಯ ಕಾರ್ಯವೈಖರಿಗೆ ಕೆಟ್ಟ ಹೆಸರು ಬರುತ್ತದೆ. ಆದ್ದರಿಂದ ಅದಕ್ಕೆ ಯಾವುದೇ ಆಸ್ಪದ ನೀಡಬಾರದು. ಒಂದು ಬಾರಿ ತೆರವುಗೊಳಿಸಿದ ಬಳಿಕ ಕೆಳಹಂತದ ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ನಡೆಸಬೇಕು ಎಂದರು.

‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ

ನಗರದಾದ್ಯಂತ ಹಮ್ಮಿಕೊಂಡಿರುವ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನಕ್ಕೆ ಯಾವುದೇ ಅಂತಿಮ ಗಡುವು (ಡೆಡ್‌ಲೈನ್) ಇಲ್ಲ. ನಗರದಲ್ಲಿ ಸ್ವಚ್ಛತಾ ಕಾರ್ಯ ನಿರಂತರವಾಗಿ ನಡೆಯಲಿದೆ. ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನದಡಿ ಸಿ&ಡಿ ತ್ಯಾಜ್ಯ ತೆರವು ಕಾರ್ಯ ಸಕ್ರಿಯವಾಗಿ ನಡೆಯುತ್ತಿದ್ದು, ದೊಡ್ಡ ಪ್ರಮಾಣದಲ್ಲಿ ಒಂದೇ ಕಡೆ ರಾಶಿಯಾಗಿರುವ ಸ್ಥಳಗಳಿಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ. ರಸ್ತೆ ಬದಿಯಲ್ಲಿ ಬಿದ್ದಿರುವ ಸಣ್ಣಪುಟ್ಟ ತ್ಯಾಜ್ಯದ ರಾಶಿಗಳು ಹಾಗೂ ಸಿ&ಡಿ ತ್ಯಾಜ್ಯದ ಸಣ್ಣ ರಾಶಿಗಳನ್ನೂ ಸಮರ್ಪಕವಾಗಿ ತೆರವುಗೊಳಿಸಬೇಕು. ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯು ಸಣ್ಣಪುಟ್ಟ ತ್ಯಾಜ್ಯದ ರಾಶಿಗಳನ್ನೂ ತಪ್ಪದೆ ತೆರವುಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಬೇಕು. ರಸ್ತೆ ಬದಿಯಲ್ಲಿ ಬೆಳೆದಿರುವ ಗಿಡ-ಗಂಟಿಗಳು ಹಾಗೂ ಇತರೆ ಅನಗತ್ಯ ವಸ್ತುಗಳನ್ನು ತೆರವುಗೊಳಿಸಬೇಕು. ಎಲ್ಲಾ ಕಾರ್ಯಗಳನ್ನೂ ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಬೇಕು. ನೆಲಮಟ್ಟದಲ್ಲಿರುವ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಂಡು, ಸಮರ್ಪಕವಾಗಿ ತ್ಯಾಜ್ಯ ತೆರವು ಕಾರ್ಯ ಕೈಗೊಳ್ಳಬೇಕು. ಮಾರ್ಷಲ್‌ಗಳು, ಜೂನಿಯರ್ ಹೆಲ್ತ್ ಇನ್‌ಸ್ಪೆಕ್ಟರ್‌ಗಳು ಹಾಗೂ ಸಂಬಂಧಿಸಿದ ಎಇ ಮತ್ತು ಎಇಇಗಳು ತಮ್ಮ ವ್ಯಾಪ್ತಿಯಲ್ಲಿ ಪ್ರತಿದಿನ ಸ್ಥಳ ಪರಿಶೀಲನೆ ನಡೆಸಿ, ಕಾರ್ಯದ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಬೇಕು. ಸರಿಯಾಗಿ ಕೆಲಸ ಮಾಡದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗದಂತೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಖಾಲಿ ಸೈಟ್‌ಗಳ ಸ್ವಚ್ಛತೆ ಮತ್ತು ಜನಜಾಗೃತಿ

ಖಾಲಿ ಸೈಟ್‌ಗಳು ಸ್ವಚ್ಛವಾಗಿದ್ದರೆ, ರಸ್ತೆ ಬದಿಗೆ ಕಸ ಹಾಕುವ ಪ್ರಮಾಣವೂ ಕಡಿಮೆಯಾಗುತ್ತದೆ. ಇದರಿಂದ ನಗರದ ಸ್ವಚ್ಛತಾ ಕಾರ್ಯವನ್ನು ಇನ್ನಷ್ಟು ಸುಲಭವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ನಗರದ ಒಟ್ಟಾರೆ ಸ್ವಚ್ಛತೆ ಹಾಗೂ ಸಾರ್ವಜನಿಕರಲ್ಲಿ ಜವಾಬ್ದಾರಿಯುತ ನಡವಳಿಕೆಯನ್ನು ಬೆಳೆಸುವ ಉದ್ದೇಶದಿಂದಲೇ ಇಂತಹ ಎಲ್ಲಾ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಖಾಲಿ ಸೈಟ್‌ಗಳ ತ್ವರಿತ ಸ್ವಚ್ಛತೆ

ಮುಂದಿನ ವಾರವೇ ಖಾಲಿ ಸೈಟ್‌ಗಳ ಸ್ವಚ್ಛತೆಗಾಗಿ ಪ್ರತ್ಯೇಕ ಗುತ್ತಿಗೆದಾರರನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಈ ಕುರಿತು ಎಜಿಎಂಗಳ ಮೂಲಕ ನಗರ ಪಾಲಿಕೆ ಆಯುಕ್ತರಿಗೆ ಮಾಹಿತಿ ನೀಡಿ, ಅನುಮೋದನೆ ಪಡೆದು, ಸೂಕ್ತ ಕ್ರಮದೊಂದಿಗೆ ಗುತ್ತಿಗೆದಾರರ ಮೂಲಕ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಮುಂದಿನ ವಾರದೊಳಗಾಗಿ ತ್ಯಾಜ್ಯದಿಂದ ತುಂಬಿರುವ ಎಲ್ಲಾ ಖಾಲಿ ಸೈಟ್‌ಗಳನ್ನು ಗುರುತಿಸಿ, ನೇಮಿಸಲಾದ ಗುತ್ತಿಗೆದಾರರ ಮೂಲಕ ಸ್ವಚ್ಛಗೊಳಿಸಬೇಕು. ಖಾಲಿ ಸೈಟ್‌ಗಳ ಸ್ವಚ್ಛತೆಗೆ ತಗಲುವ ವೆಚ್ಚವನ್ನು ನಿಯಮಾನುಸಾರ ಸಂಬಂಧಿಸಿದ ಜಾಗದ ಮಾಲೀಕರಿಂದ ಆಸ್ತಿ ತೆರಿಗೆ ಮೂಲಕ ವಸೂಲಿ ಮಾಡುವ ಕ್ರಮ ಕೈಗೊಳ್ಳಬೇಕು. ಈ ಕಾರ್ಯದಲ್ಲಿ ಯಾವುದೇ ವಿಳಂಬವಾಗದಂತೆ ಅಧಿಕಾರಿಗಳು ಸ್ಥಳವಾರು ಪಟ್ಟಿ ಸಿದ್ಧಪಡಿಸಿ, ಕಾರ್ಯದ ಪ್ರಗತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಸ್ಥಳೀಯರೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಿದಲ್ಲಿ ಉತ್ತಮ ರೀತಿಯಲ್ಲಿ ಕಾರ್ಯವನ್ನು ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಬಿಡಾಡಿ ವಾಹನಗಳ ತೆರವು ಕಾರ್ಯಾಚರಣೆ

ಬಿಡಾಡಿ ವಾಹನಗಳ ಕುರಿತು ಅಸ್ತ್ರಂ ತಂತ್ರಾಂಶದಲ್ಲಿ ದೂರು ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಈಗಾಗಲೇ ಸೂಚಿಸಲಾಗಿದೆ. ಆದರೂ ಇನ್ನೂ ಅನೇಕ ಅನಾಥ ವಾಹನಗಳಿಗೆ ನೋಟಿಸ್ ನೀಡಿಲ್ಲ ಹಾಗೂ ತಂತ್ರಾಂಶದಲ್ಲಿ ದಾಖಲಿಸಿಲ್ಲ. ಇದೇ ರೀತಿ ಮುಂದುವರಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ಅನಾಥ ವಾಹನಗಳ ಗುರುತಿಸುವಿಕೆ, ನೋಟಿಸ್ ಅಂಟಿಸುವುದು, ತಂತ್ರಾಂಶದಲ್ಲಿ ದಾಖಲಿಸುವುದು ಹಾಗೂ ವಿಲೇವಾರಿ ಮಾಡುವುದು ಸೇರಿದಂತೆ ಪ್ರತಿಯೊಂದು ಹಂತವೂ ನಿಯಮಾನುಸಾರ ನಡೆಯಬೇಕು ಎಂದರು.

ಪೊಲೀಸ್ ವಶದಲ್ಲಿರುವ ವಾಹನಗಳಿಗೆ ಪ್ರತ್ಯೇಕ ಜಾಗ ಗುರುತು

ಸಂಚಾರ ಪೊಲೀಸ್ ಇಲಾಖೆಯು ವಶಪಡಿಸಿಕೊಂಡಿರುವ ವಾಹನಗಳ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣಗಳಿರುವ ಕಾರಣ, ಅವು ವಿಲೇವಾರಿಯಾಗದೆ ಪೊಲೀಸ್ ಠಾಣೆಗಳ ಬಳಿಯೇ ಉಳಿದಿವೆ. ಪೊಲೀಸ್ ಇಲಾಖೆ ಹಾಗೂ ಆರ್‌ಟಿಒ ವಶದಲ್ಲಿರುವ ವಾಹನಗಳಿಗಾಗಿ ಕಂದಾಯ ಇಲಾಖೆಯ ಜಾಗಗಳನ್ನು ಗುರುತಿಸಲಾಗುತ್ತಿದ್ದು, ಶೀಘ್ರದಲ್ಲೇ ಎಲ್ಲಾ ವಾಹನಗಳನ್ನು ಆ ಜಾಗಗಳಿಗೆ ಸ್ಥಳಾಂತರಿಸುವ ಕಾರ್ಯ ಕೈಗೊಳ್ಳಲಾಗುವುದು.

ನಗರಕ್ಕೆ ಅಳಿಲು ಸೇವೆ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ. ಇಂತಹ ಸಣ್ಣಪುಟ್ಟ ಕೆಲಸಗಳಿಂದಲೂ ಗಣನೀಯ ಸುಧಾರಣೆ ಸಾಧ್ಯ. ಹೀಗಾದಾಗ ನಾಗರಿಕರೂ ಸಹ ನಮ್ಮೊಂದಿಗೆ ಕೈಜೋಡಿಸಿ ಸಹಕರಿಸುತ್ತಾರೆ. ನಾವೆಲ್ಲರೂ ಒಂದು ತಂಡವಾಗಿ ಕಾರ್ಯನಿರ್ವಹಿಸಿದಲ್ಲಿ ನಗರದ ಅಭಿವೃದ್ಧಿಯಲ್ಲಿ ಉತ್ತಮ ಸುಧಾರಣೆ ತರಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ಸಕ್ರಿಯವಾಗಿ ಕಾರ್ಯನಿರ್ವಹಿಸೋಣ.

ಸಭೆಯಲ್ಲಿ ನಗರ ಪಾಲಿಕೆ ಆಯುಕ್ತರಾದ ರಮೇಶ್ ಡಿ.ಎಸ್., ಪೊಮ್ಮಲ ಸುನೀಲ್ ಕುಮಾರ್, ರಮೇಶ್ ಕೆ.ಎನ್., ಜಿ. ಜಗದೀಶ್, ಡಾ. ರಾಜೇಂದ್ರ ಕೆ.ವಿ., ಎಲ್ಲಾ ಅಪರ ಆಯುಕ್ತರು, ಮುಖ್ಯ ಅಭಿಯಂತರರು, ಇಇ, ಎಇಇ, ಎಇ, ಜೆಹೆಚ್‌ಐ, ಮಾರ್ಷಲ್ ಮೇಲ್ವಿಚಾರಕರು, ಮಾರ್ಷಲ್‌ಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Exit mobile version