ಬೆಂಗಳೂರು (ಜೂನ್ 21): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಹೆಚ್ಚುತ್ತಿರುವ ಅನಧಿಕೃತ ಪಾರ್ಕಿಂಗ್ ಸಮಸ್ಯೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಕಾರ್ಯಾಚರಣೆ ಆರಂಭಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಬೆಂಗಳೂರು ದಕ್ಷಿಣ ನಗರ ನಿಗಮ ಮುಂದಾಗಿದೆ.
ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಕಾರ್ಯಾಚರಣೆ ಆರಂಭ
ಮೊದಲ ಹಂತದಲ್ಲಿ ಜಯನಗರ ವಲಯದಲ್ಲಿ ಕಟ್ಟುನಿಟ್ಟಿನ ಕ್ರಮ
ಅನಧಿಕೃತ ಪಾರ್ಕಿಂಗ್ ವಿರುದ್ಧ ಸಂಚಾರ ಪೊಲೀಸರಿಂದ ಕ್ರಮ
ಸಂಚಾರ ದಟ್ಟಣೆ ಕಡಿಮೆ ಮಾಡಿ ಪಾದಚಾರಿಗಳ ಸುರಕ್ಷತೆ ಹೆಚ್ಚಿಸುವ ಉದ್ದೇಶ
ಮೊದಲ ಹಂತವಾಗಿ ಬೆಂಗಳೂರು ಜಯನಗರ ವಲಯದಲ್ಲಿ ಮುಂದಿನ ವಾರದಿಂದ ಕಟ್ಟುನಿಟ್ಟಿನ ಟೋಯಿಂಗ್ ಕಾರ್ಯಾಚರಣೆ ಜಾರಿಗೆ ಬರಲಿದ್ದು, ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರಿಗೆ ಎಚ್ಚರಿಕೆ ನೀಡಲಾಗಿದೆ. ನಗರದ ರಸ್ತೆ ಬದಿಗಳಲ್ಲಿ ನಿಯಮ ಬಾಹಿರವಾಗಿ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿರುವುದಲ್ಲದೆ, ಪಾದಚಾರಿಗಳು ಹಾಗೂ ಇತರ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ದಕ್ಷಿಣ ನಗರ ನಿಗಮವು ಮೂರು ಹೊಸ ಟೋಯಿಂಗ್ ವಾಹನಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಒದಗಿಸಿಕೊಂಡಿದೆ.
ಶನಿವಾರ ಜಯನಗರ ವಲಯದಲ್ಲಿ ನಿಯೋಜಿಸಲಾಗಲಿರುವ ಟೋಯಿಂಗ್ ವಾಹನಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಹಾಗೂ ಬೆಂಗಳೂರು ದಕ್ಷಿಣ ನಗರ ನಿಗಮದ ಆಯುಕ್ತ ಕೆ.ಎನ್. ರಮೇಶ್ ಪರಿಶೀಲಿಸಿದರು. ವಾಹನಗಳಿಗೆ ಸಾರಿಗೆ ಇಲಾಖೆಯಿಂದ ಅಗತ್ಯ ಫಿಟ್ನೆಸ್ ಪ್ರಮಾಣ ಪತ್ರಗಳನ್ನು ಪಡೆಯಲಾಗಿದ್ದು, ಶೀಘ್ರದಲ್ಲೇ ಅವುಗಳನ್ನು ಅಧಿಕೃತವಾಗಿ ಸಂಚಾರ ಪೊಲೀಸರಿಗೆ ಹಸ್ತಾಂತರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಆಯುಕ್ತ ಕೆ.ಎನ್. ರಮೇಶ್, ಜಯನಗರದ ಪ್ರಮುಖ ರಸ್ತೆಗಳಲ್ಲಿ ಅನಧಿಕೃತ ಪಾರ್ಕಿಂಗ್ ನಿಯಂತ್ರಣಕ್ಕೆ ವಿಶೇಷ ಒತ್ತು ನೀಡಲಾಗುತ್ತಿದೆ. ಟೋಯಿಂಗ್ ಕಾರ್ಯಾಚರಣೆ ಆರಂಭವಾದ ಬಳಿಕ ರಸ್ತೆಗಳಲ್ಲಿ ನಿಯಮ ಉಲ್ಲಂಘಿಸಿ ವಾಹನಗಳನ್ನು ನಿಲ್ಲಿಸಿದರೆ ಸಂಚಾರ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡು ವಾಹನಗಳನ್ನು ವಶಪಡಿಸಿಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ಬೆಂಗಳೂರು ನಗರದಲ್ಲಿ ದಿನೇದಿನೇ ಹೆಚ್ಚುತ್ತಿರುವ ವಾಹನಗಳ ಸಂಖ್ಯೆ ಹಾಗೂ ರಸ್ತೆಗಳಲ್ಲಿ ಉಂಟಾಗುತ್ತಿರುವ ಅಸ್ತವ್ಯಸ್ತ ಪಾರ್ಕಿಂಗ್ ಸಮಸ್ಯೆ ನಿಯಂತ್ರಣಕ್ಕೆ ಈ ಕ್ರಮ ಮಹತ್ವದ ಹೆಜ್ಜೆಯಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಇದರಿಂದ ಸಂಚಾರ ಸುಗಮಗೊಳ್ಳುವುದರ ಜೊತೆಗೆ ಪಾದಚಾರಿಗಳ ಸುರಕ್ಷತೆಯೂ ಹೆಚ್ಚುವ ನಿರೀಕ್ಷೆಯಿದೆ.
ಪರಿಶೀಲನಾ ಸಂದರ್ಭದಲ್ಲಿ ನಿಗಮದ ಮುಖ್ಯ ಎಂಜಿನಿಯರ್ ಬಸವರಾಜ ಕಬಾಡೆ ಹಾಗೂ ಟ್ರಾಫಿಕ್ ಎಂಜಿನಿಯರಿಂಗ್ ಘಟಕದ ಕಾರ್ಯನಿರ್ವಾಹಕ ಎಂಜಿನಿಯರ್ ಜನಾರ್ದನ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಮುಂದಿನ ದಿನಗಳಲ್ಲಿ ನಗರದ ಇತರ ವಲಯಗಳಲ್ಲಿಯೂ ಇದೇ ಮಾದರಿಯ ಕಾರ್ಯಾಚರಣೆ ವಿಸ್ತರಿಸುವ ಸಾಧ್ಯತೆ ಇದೆ.
