ಬೆಂಗಳೂರು (ಜುಲೈ 27): ಬೆಂಗಳೂರು ನಮ್ಮ ಮೆಟ್ರೋದ ಹಳದಿ ಮಾರ್ಗದ ಹುಸ್ಕೂರು ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಇಂದು ಸಂಜೆ ಸೋಮವಾರ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದ್ದು, ಇದರ ಪರಿಣಾಮವಾಗಿ ಮೆಟ್ರೋ ರೈಲು ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಿದೆ.
ಇಂದು ಸಂಜೆ ಸುಮಾರು 5:50 ಗಂಟೆಗೆ ಅಪ್ಲೈನ್ನಲ್ಲಿ ಸುಮಾರು 35 ವರ್ಷದ ವ್ಯಕ್ತಿಯೊಬ್ಬ ಹಳಿಗೆ ಬಿದ್ದು ಆತ್ಯಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಮಾಹಿತಿ ದೊರೆಯುತ್ತಿದ್ದಂತೆ ನಿಲ್ದಾಣ ನಿಯಂತ್ರಕರು ಹಾಗೂ ಭದ್ರತಾ ಸಿಬ್ಬಂದಿ ತಕ್ಷಣವೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಮೆಟ್ರೋ ಮಾರ್ಗದ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದ್ದು, ಹಳಿಯಿಂದ ಮೃತದೇಹವನ್ನು ಮೇಲಕ್ಕೆತ್ತುವ ಕಾರ್ಯವನ್ನು ಸಿಬ್ಬಂದಿ ನಡೆಸಿದರು. ಘಟನಾ ಸ್ಥಳಕ್ಕೆ ಹೆಬ್ಬುಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಹಜರು ಪ್ರಕ್ರಿಯೆ ಕೈಗೊಳ್ಳಲಾಗಿದೆ. ಮೃತರ ಗುರುತು ಹಾಗೂ ಘಟನೆಯ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.
ಘಟನೆಯ ಹಿನ್ನೆಲೆಯಲ್ಲಿ ಯೆಲ್ಲೋ ಲೈನ್ನಲ್ಲಿ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಆರ್.ವಿ. ರಸ್ತೆ ಮತ್ತು ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಕಾರ್ಯಾಚರಣೆ ನಡೆಸುತ್ತಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ತಿಳಿಸಿದೆ.
ಸಾಮಾನ್ಯ ಮೆಟ್ರೋ ಸೇವೆಯನ್ನು ಶೀಘ್ರದಲ್ಲೇ ಪುನರಾರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಯಾಣಿಕರು ತಮ್ಮ ಪ್ರಯಾಣವನ್ನು ಅದಕ್ಕೆ ಅನುಗುಣವಾಗಿ ಯೋಜಿಸಿಕೊಳ್ಳುವಂತೆ ಮೆಟ್ರೋ ಆಡಳಿತ ಮನವಿ ಮಾಡಿದ್ದು, ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ.





