ಬೀದರ್: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟವು ಪೂರ್ವಯೋಜಿತ ದಾಳಿ ಎಂದು ಬೀದರ್ನ ಬಿಜೆಪಿ ಶಾಸಕ ಶೈಲೇಂದ್ರ ಬೆಲ್ದಾಳೆ ಕಿಡಿಕಾರಿದ್ದಾರೆ.
ರಾಮ್ ರಹೀಮ್ ನಗರದ ಮಸೀದಿಯ ಬಳಿಯಲ್ಲಿ ಗಣೇಶ ಮೆರವಣಿಗೆ ಸಾಗುವಾಗ ಕಲ್ಲು ತೂರಾಟವಾಗಿದೆ. ಆರೋಪಿಗಳು ಉದ್ದೇಶಪೂರ್ವಕವಾಗಿ ಕಲ್ಲುಗಳನ್ನು ಸಂಗ್ರಹಿಸಿ, ಮೆರವಣಿಗೆಯ ಮಾರ್ಗವನ್ನು ತಿಳಿದುಕೊಂಡು ದಾಳಿ ನಡೆಸಿದ್ದಾರೆ ಎಂದು ಶಾಸಕ ಶೈಲೇಂದ್ರ ಬೆಲ್ದಾಳೆ ಆರೋಪಿಸಿದ್ದಾರೆ.
ಪೊಲೀಸರು ಈ ಘಟನೆಯನ್ನು ನಿಯಂತ್ರಿಸಲು ಲಘು ಲಾಠಿ ಚಾರ್ಜ್ ಮಾಡಿ, 21ಕ್ಕೂ ಹೆಚ್ಚು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಎರಡು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸ್ಥಳಕ್ಕೆ ಭೇಟಿ ನೀಡಿ, ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಿ, ಬಿಗಿ ಭದ್ರತೆಯನ್ನು ಒದಗಿಸಿದ್ದಾರೆ.
ಆದರೂ, ಈ ಘಟನೆಯಲ್ಲಿ ಪೊಲೀಸ್ ಇಂಟೆಲಿಜೆನ್ಸ್ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಲಾಗಿದೆ. ಮೆರವಣಿಗೆಯ ಮಾರ್ಗದಲ್ಲಿ, ವಿಶೇಷವಾಗಿ ಮಸೀದಿಯ ಬಳಿ, ಹೆಚ್ಚಿನ ಪೊಲೀಸ್ ನಿಯೋಜನೆಯ ಅಗತ್ಯವಿತ್ತು. ಈ ರೀತಿಯ ಗಲಭೆಗಳು ಮಂಡ್ಯ ಜಿಲ್ಲೆಯಲ್ಲಿ ಪದೇ ಪದೇ ಆಗುತ್ತಿರುವುದು ಯಾಕೆ ಎಂದು ಶಾಸಕ ಶೈಲೇಂದ್ರ ಬೆಲ್ದಾಳೆ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪ
ಈ ಘಟನೆ ಕಾಂಗ್ರೆಸ್ ಸಿಎಂ ಸಿದ್ದರಾಮಯ್ಯ ಸರ್ಕಾರದ ವೈಫಲ್ಯ ಎಂದು ಟೀಕಾಕಾರರು ಕರೆದಿದ್ದಾರೆ. “ಇತಿಹಾಸದಲ್ಲಿ ಗಣೇಶನನ್ನು ಬಂಧಿಸಿದ ಘಟನೆಯೇ ನಡೆದಿಲ್ಲ, ಆದರೆ ಇದು ಕಾಂಗ್ರೆಸ್ ಆಡಳಿತದಲ್ಲಿ ಸಂಭವಿಸಿದೆ.” ಧರ್ಮಸ್ಥಳದ ಮಂಜುನಾಥ ಸ್ವಾಮಿ ಮತ್ತು ಚಾಮುಂಡೇಶ್ವರಿಯ ಶಾಪವು ಈ ಸರ್ಕಾರಕ್ಕೆ ತಟ್ಟುತ್ತದೆ ಎಂದು ಶಾಸಕ ಶೈಲೇಂದ್ರ ಬೆಲ್ದಾಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾನು ಮುಸ್ತಾಕ್ ದಸರಾ ಉದ್ಘಾಟನೆ ವಿವಾದ
ಮೈಸೂರಿನ ದಸರಾ ಉದ್ಘಾಟನೆಗೆ ಭಾನು ಮುಸ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಶೈಲೇಂದ್ರ ಬೆಲ್ದಾಳೆ, ನಮ್ಮ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಈ ಆಯ್ಕೆಯ ವಿರುದ್ಧ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜ್ಯದ ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. “ಮಡಿಕೇರಿಯ ಬೂಕರ್ ಪ್ರಶಸ್ತಿ ವಿಜೇತೆ ದೀಪ್ತಿಯಂತಹವರನ್ನು ಆಯ್ಕೆ ಮಾಡಬಹುದಿತ್ತು, ಆದರೆ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಮಾಡುತ್ತಿದೆ,” ಎಂದು ಬಿಜೆಪಿ ಶಾಸಕ ಶೈಲೇಂದ್ರ ಬೆಲ್ದಾಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಈ ಆಯ್ಕೆಯಿಂದ ಭಾನು ಮುಸ್ತಾಕ್ ಅವರೇ ಹಿಂದೆ ಸರಿಯಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ. ಬಿಜೆಪಿ ಶಾಸಕ ಶೈಲೇಂದ್ರ ಬೆಲ್ದಾಳೆ ಅವರು ಈ ವಿಷಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.





