ಬೀದರ್ ಜಿಲ್ಲೆಯಲ್ಲಿ ಮತ್ತೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಗಡಿಗೌಡಗಾಂವ್ ಗ್ರಾಮದಲ್ಲಿ ಆಗತಾನೇ ಜನಿಸಿದ ನವಜಾತ ಶಿಶುವನ್ನು ಚರಂಡಿಯಲ್ಲಿ ಬಿಸಾಡಿರುವ ಘಟನೆ ನಡೆದಿದೆ.
ಹುಲಸೂರು ತಾಲೂಕಿನ ಗಡಿಗೌಡಗಾಂವ್ ಗ್ರಾಮದ ಬಸವೇಶ್ವರ ವೃತ್ತದ ಬಳಿಯ ಕಿರಾಣಾ ಅಂಗಡಿ ಹತ್ತಿರ ಚರಂಡಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಹುಲಸೂರು ಪೊಲೀಸರು ಮಗುವಿನ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಮಗು ಬಿಸಾಡಿದ್ದು ಯಾರು?
ಪೊಲೀಸ್ ತನಿಖೆ ಪ್ರಕಾರ, ಮಗುವಿನ ಜನನವನ್ನು ಮುಚ್ಚಿಡುವ ಉದ್ದೇಶದಿಂದ ರಾತ್ರಿ ಸಮಯದಲ್ಲಿ ಶಿಶುವನ್ನು ಚರಂಡಿಯಲ್ಲಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆಯ ನಂತರ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯು ಬೀದರ್ ಜಿಲ್ಲೆಯಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ನವಜಾತ ಶಿಶುಗಳ ವಿರುದ್ಧ ನಡೆಯುತ್ತಿರುವ ಅಮಾನುಷ ಕೃತ್ಯಗಳನ್ನು ತಡೆಯಲು ಪೊಲೀಸ್ ಮತ್ತು ಆಡಳಿತ ವ್ಯವಸ್ಥೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.





