ಚಾಮರಾಜನಗರ ತಾಲೂಕಿನ ಜಾಲಹಳ್ಳಿ ಹುಂಡಿ ಗ್ರಾಮದಲ್ಲಿ ವಿದ್ಯುತ್ ತಂತಿಗೆ ಸಿಲುಕಿದ ನಾಯಿಯನ್ನು ರಕ್ಷಿಸಲು ಹೋದ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್ಗೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಗ್ರಾಮದ ನಿವಾಸಿ ಚಂದ್ರು (38) ಮೃತ ದುರ್ದೈವಿ. ಚಂದ್ರು ಎಂದಿನಂತೆ ಬೆಳಿಗ್ಗೆ ಮನೆಯಿಂದ ಹೊರಬಂದಾಗ, ಪಕ್ಕದ ಜಾಗದಲ್ಲಿ ವಿದ್ಯುತ್ ತಂತಿ ಬೇಲಿಗೆ ಸಿಲುಕಿ ನಾಯಿಯೊಂದು ನರಳಾಡುತ್ತಿರುವುದನ್ನು ಕಂಡರು. ತಕ್ಷಣ ನಾಯಿಯನ್ನು ಬಿಡಿಸಲು ಮುಂದಾದ ಚಂದ್ರು, ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ತಂತಿಗೆ ಸ್ಪರ್ಶಿಸಿ ಸ್ಥಳದಲ್ಲೇ ಕುಸಿದು ಬಿದ್ದರು.
ಮೃತ ಚಂದ್ರು ಇಬ್ಬರು ಮಕ್ಕಳನ್ನು ಹೊಂದಿದ್ದರು. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಚಾಮರಾಜನಗರ ಪಟ್ಟಣ ಠಾಣೆಯ ಪೊಲೀಸರು ಮತ್ತು ಚೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ, ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ.