ಚಿಕ್ಕಬಳ್ಳಾಪುರ ಆ. 16: ಇಶಾ ಆದಿ ಯೋಗಿ ದರ್ಶನ ಪಡೆದು ಬೈಕ್ನಲ್ಲಿ ವಾಪಸ್ ತೆರಳುತ್ತಿದ್ದ ಯುವಕ ಮತ್ತು ಯುವತಿ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿ–44ರಲ್ಲಿ ನಡೆದಿದೆ.
-
ಲಿಂಗಶೆಟ್ಟಿಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ–44ರಲ್ಲಿ ಭೀಕರ ಅಪಘಾತ
ADVERTISEMENTADVERTISEMENT -
ಇಶಾ ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ
-
ವಿಆರ್ಎಲ್ ಕಂಟೇನರ್ ಲಾರಿ ಬೈಕ್ಗೆ ಡಿಕ್ಕಿ; ಇಬ್ಬರೂ ಸ್ಥಳದಲ್ಲೇ ಸಾವು
-
ಮೃತ ಯುವಕ ಅಮನ್ ದೇವ್ ಮಿಶ್ರಾ ಎಂದು ಗುರುತು
-
ಯುವತಿಯ ಗುರುತು ಪತ್ತೆಗೆ ಪೊಲೀಸರು ತನಿಖೆ
ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಉತ್ತರ ಪ್ರದೇಶ ನೋಂದಣಿಯ ರಾಯಲ್ ಎನ್ಫೀಲ್ಡ್ ಹಂಟರ್ ಬೈಕ್ನಲ್ಲಿ ಬಂದಿದ್ದ ಇಬ್ಬರು ದರ್ಶನ ಮುಗಿಸಿಕೊಂಡು ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದರು. ಲಿಂಗಶೆಟ್ಟಿಪುರ ಗ್ರಾಮದ ಕಡೆಯಿಂದ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ವೇಳೆ ಬಾಗೇಪಲ್ಲಿ ಕಡೆಯಿಂದ ವೇಗವಾಗಿ ಬಂದ ವಿಆರ್ಎಲ್ ಕಂಟೇನರ್ ಲಾರಿ ಬೈಕ್ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಲಾರಿಯ ಮುಂಭಾಗದಲ್ಲಿ ಸಿಲುಕಿಕೊಂಡಿದ್ದು, ಸವಾರ ಅಮನ್ ದೇವ್ ಮಿಶ್ರಾ ಅವರ ಮೇಲೆ ಲಾರಿಯ ಚಕ್ರ ಹರಿದಿದೆ. ಜೊತೆಯಲ್ಲಿದ್ದ ಯುವತಿಯ ಮೇಲೆಯೂ ಲಾರಿ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ನಗರ ಮತ್ತು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಜನರನ್ನು ನಿಯಂತ್ರಿಸಿದರು. ಬಳಿಕ ಇಬ್ಬರ ಮೃತದೇಹಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಯಿತು.
ವಾಹನದ ನೋಂದಣಿ ಸಂಖ್ಯೆ ಆಧರಿಸಿ ಮೃತ ಯುವಕನನ್ನು ಉತ್ತರ ಪ್ರದೇಶ ಮೂಲದ ಅಮನ್ ದೇವ್ ಮಿಶ್ರಾ ಎಂದು ಗುರುತಿಸಲಾಗಿದೆ. ಆದರೆ ಮೃತ ಯುವತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.


