ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ಮಾರಾಟ; ಚಿಕ್ಕಮಗಳೂರು ದಂಪತಿಯರಿಂದ ನೀಚ ಕೃತ್ಯ

Untitled design 2026 07 16T140121.607

ಚಿಕ್ಕಮಗಳೂರು ಜಿಲ್ಲೆಯ ಮಲ್ಲೇನಹಳ್ಳಿ ಗ್ರಾಮದ ಹಕ್ಕಿಪಿಕ್ಕಿ ಜನಾಂಗದ ದಂಪತಿ ತಮ್ಮ ಮಗಳನ್ನು ಹಣಕ್ಕಾಗಿ ವೇಶ್ಯಾವಾಟಿಕೆ ಜಾಲಕ್ಕೆ ಮಾರಾಟ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಕುರಿತು ಯುವತಿ ನೀಡಿರುವ ಮಾಹಿತಿಯ ಆಧಾರದ ಮೇಲೆ ಈ ಪ್ರಕರಣ ಬೆಳಕಿಗೆ ಬಂದಿದ್ದು, ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕೆಂದು ವಿವಿಧ ಸಂಘಟನೆಗಳು ಆಗ್ರಹಿಸಿವೆ.

ಮಾಹಿತಿಯ ಪ್ರಕಾರ, ನಾಲ್ಕು ತಿಂಗಳ ಹಿಂದೆ ಹಕ್ಕಿಪಿಕ್ಕಿ ಜನಾಂಗದ ಈ ಕುಟುಂಬ ಗಿಡಮೂಲಿಕೆ ವ್ಯಾಪಾರದ ಉದ್ದೇಶದಿಂದ ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶಕ್ಕೆ ತೆರಳಿತ್ತು. ಅಲ್ಲಿ ನೆಲೆಸಿದ್ದ ಸಂದರ್ಭದಲ್ಲಿ ಯುವತಿಯನ್ನು ಸುಮಾರು 7 ಲಕ್ಷ ರೂಪಾಯಿಗೆ ವೇಶ್ಯಾವಾಟಿಕೆ ಜಾಲಕ್ಕೆ ಮಾರಾಟ ಮಾಡಲಾಗಿದೆ.

ಯುವತಿ ಕಾಣೆಯಾಗಿರುವ ಬಗ್ಗೆ ಪ್ರಶ್ನೆಗಳು ಎದುರಾದಾಗ, ಆಕೆ ಭಾರತಕ್ಕೆ ಮರಳಿದ್ದಾಳೆ ಎಂದು ಪೋಷಕರು ಹಾಗೂ ಅವರ ಜೊತೆಗಿದ್ದವರಿಗೆ ಹೇಳಿದ್ದರು ಎನ್ನಲಾಗಿದೆ. ಆದರೆ ಯುವತಿ ವಿದೇಶದಲ್ಲೇ ಸಂಕಷ್ಟಕ್ಕೆ ಸಿಲುಕಿದ್ದಳು ಎಂದು ತಿಳಿದುಬಂದಿದೆ.

ಸಂಕಷ್ಟದಲ್ಲಿದ್ದ ಯುವತಿ ಪರಿಚಯದವರನ್ನು ಸಂಪರ್ಕಿಸಿ ತನ್ನ ಪರಿಸ್ಥಿತಿಯನ್ನು ವಿವರಿಸಿದ್ದಾಳೆ. ತಂದೆ-ತಾಯಿ ಹಣಕ್ಕಾಗಿ ತನ್ನನ್ನು ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ವಿಡಿಯೋ ಸಂದೇಶವನ್ನೂ ಕಳುಹಿಸಿದ್ದಾಳೆ ಎನ್ನಲಾಗಿದೆ. ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದಾಡುತ್ತಿದೆ.

ಈ ಕುರಿತು ಭಾರತೀಯ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳೀಯ ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ಯುವತಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ಸದ್ಯ ಯುವತಿಯ ಸುರಕ್ಷತೆ ಹಾಗೂ ಆರೋಗ್ಯದ ಕುರಿತು ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

ಯುವತಿಯನ್ನು ರಕ್ಷಿಸಿರುವ ವಿಷಯ ತಿಳಿಯುತ್ತಿದ್ದಂತೆ ಆರೋಪಿತ ಪೋಷಕರು ಭಾರತಕ್ಕೆ ಮರಳಿದ್ದಾರೆ ಎನ್ನಲಾಗಿದೆ. ಈ ನಡುವೆ ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ ಸಂಘಟನೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದು ಪ್ರಕರಣದ ಸಂಪೂರ್ಣ ತನಿಖೆ ನಡೆಸುವಂತೆ ಆಗ್ರಹಿಸಿದೆ. ಪ್ರಕರಣದ ಸತ್ಯಾಸತ್ಯತೆ ಕುರಿತು ಪೊಲೀಸ್ ತನಿಖೆಯ ಮುಂದುವರೆದಿದೆ.

Exit mobile version