ಕಡೂರಲ್ಲಿ ಮನೆಯಂಗಳದಲ್ಲೇ ರಾಜಾರೋಷವಾಗಿ ಚಿರತೆ ಓಡಾಟ!

Untitled design (92)

ಚಿಕ್ಕಮಗಳೂರು ಆ 21: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ಚಿರತೆಯೊಂದು ರಾಜಾರೋಷವಾಗಿ ಓಡಾಡುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ ಈ ಗ್ರಾಮದ ಸುತ್ತಮುತ್ತ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಅದರ ಚಲನವಲನದ ದೃಶ್ಯಗಳು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಚಿರತೆ ಮನೆಗಳ ಸಮೀಪದಲ್ಲೇ ಓಡಾಡುತ್ತಿರುವ ದೃಶ್ಯಗಳು ಗ್ರಾಮಸ್ಥರನ್ನು ಬೆಚ್ಚಿಬೀಳಿಸಿವೆ. ಮನೆಯೊಂದರ ಅಂಗಳದಲ್ಲಿ ವೃದ್ಧೆಯೊಬ್ಬರು ನಿಂತಿದ್ದ ವೇಳೆ, ಅವರಿಂದ ಕೆಲವೇ ಅಡಿ ದೂರದಲ್ಲಿ ಚಿರತೆ ಹಾದು ಹೋಗಿರುವ ದೃಶ್ಯವೂ ಸೆರೆಯಾಗಿದೆ. ಮತ್ತೊಂದು ದೃಶ್ಯದಲ್ಲಿ ಚಿರತೆ ಮನೆಯೊಂದರ ಕಾಂಪೌಂಡ್ ಮೇಲೆ ಮಲಗಿ ವಿಶ್ರಾಂತಿ ಪಡೆಯುತ್ತಿರುವುದು ಕಂಡುಬಂದಿದೆ.

ಚಿರತೆ ನಿರಂತರವಾಗಿ ಗ್ರಾಮದಲ್ಲಿ ಓಡಾಡುತ್ತಿರುವ ಹಿನ್ನೆಲೆಯಲ್ಲಿ ಜನರು ಮನೆಯಿಂದ ಹೊರಬರಲು ಆತಂಕ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ಕೂಲಿ ಕಾರ್ಮಿಕರು ಕೆಲಸಕ್ಕೆ ತೆರಳುವುದು, ಬೈಕ್ ಸವಾರರು ಸಂಚರಿಸುವುದು ಹಾಗೂ ಶಾಲಾ- ಕಾಲೇಜು ಮಕ್ಕಳು ಓಡಾಡುವುದು ಅಪಾಯಕಾರಿಯಾಗಬಹುದು ಎಂಬ ಭೀತಿ ಗ್ರಾಮಸ್ಥರಲ್ಲಿ ಮೂಡಿದೆ. ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಜನರು ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಚಿರತೆ ಗ್ರಾಮದಲ್ಲೇ ಬೀಡುಬಿಟ್ಟಿರುವ ಹಿನ್ನೆಲೆಯಲ್ಲಿ ಕೂಡಲೇ ಅದನ್ನು ಸೆರೆಹಿಡಿದು ಸುರಕ್ಷಿತವಾಗಿ ಸ್ಥಳಾಂತರಿಸುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿರುವ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಚಿರತೆಯ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಚಿರತೆ ಸೆರೆಹಿಡಿಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಈ ನಡುವೆ, ಚಿರತೆ ಸೆರೆ ಕಾರ್ಯಾಚರಣೆಗೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಯ ಕೆಲವರು ಮದ್ಯಪಾನ ಮಾಡಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿರುವುದಾಗಿ ತಿಳಿದು ಬಂದಿದೆ. ಆರೋಪದ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಚಿರತೆ ಇನ್ನೂ ಗ್ರಾಮದಲ್ಲಿ ಓಡಾಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಸಂಚರಿಸದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಮಕ್ಕಳು ಹಾಗೂ ವೃದ್ಧರು ವಿಶೇಷವಾಗಿ ಜಾಗರೂಕರಾಗಿರುವಂತೆ ಇಲಾಖೆ ಸೂಚಿಸಿದೆ. ಚಿರತೆ ಸೆರೆ ಸಿಕ್ಕ ಬಳಿಕವೇ ಗ್ರಾಮಸ್ಥರ ಆತಂಕ ದೂರವಾಗುವ ಸಾಧ್ಯತೆಯಿದ್ದು, ಅರಣ್ಯ ಇಲಾಖೆ ಕೈಗೊಳ್ಳುವ ಮುಂದಿನ ಕ್ರಮದತ್ತ ಎಲ್ಲರ ಗಮನ ನೆಟ್ಟಿದೆ. 

Exit mobile version