ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಐಪಿಎಲ್ 2025 ವಿಜಯೋತ್ಸವದ ಸಮಯದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಜನರು ಜೀವ ಕಳೆದುಕೊಂಡಿದ್ದಾರೆ. ಈ ದುರಂತದಲ್ಲಿ ಕೋಲಾರ ಮೂಲದ 24 ವರ್ಷದ ಇಂಜಿನಿಯರ್ ಯುವತಿ ಸಹನಾ ಕೂಡ ಸಾವನ್ನಪ್ಪಿದ್ದಾರೆ. ಈ ಘಟನೆಯಿಂದ ಸಹನಾ ಅವರ ಕುಟುಂಬದಲ್ಲಿ ಶೋಕದ ವಾತಾವರಣ ಮನೆ ಮಾಡಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬಡಮಾಕನಹಳ್ಳಿ ಗ್ರಾಮದ ಸಹನಾ (24) ಮೃತಪಟ್ಟ ಯುವತಿ. ಶಿಕ್ಷಕ ದಂಪತಿಯಾದ ಸುರೇಶ್ ಬಾಬು ಮತ್ತು ಮಂಜುಳಾ ಅವರ ಮಗಳಾದ ಸಹನಾ, ಇತ್ತೀಚೆಗಷ್ಟೇ ಇಂಜಿನಿಯರಿಂಗ್ ಪದವಿಯನ್ನು ಪೂರ್ಣಗೊಳಿಸಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈ ಯುವತಿ, ಆರ್ಸಿಬಿ ವಿಜಯೋತ್ಸವವನ್ನು ಕಣ್ತುಂಬಿಕೊಳ್ಳಲು ತನ್ನ ಸ್ನೇಹಿತರೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿದ್ದರು. ಆದರೆ, ಈ ಸಂಭ್ರಮಾಚರಣೆ ದುರಂತವಾಗಿ ಪರಿಣಮಿಸಿತು.
ಆರ್ಸಿಬಿ ತಂಡವು 18 ವರ್ಷಗಳ ದೀರ್ಘ ಕಾಯುವಿಕೆಯ ನಂತರ ಐಪಿಎಲ್ 2025 ಟ್ರೋಫಿಯನ್ನು ಗೆದ್ದು ಬೆಂಗಳೂರಿಗೆ ಆಗಮಿಸಿತ್ತು. ಈ ಐತಿಹಾಸಿಕ ವಿಜಯವನ್ನು ಆಚರಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಪ್ರವೇಶ ಉಚಿತ ಎಂದು ಘೋಷಿಸಲಾಗಿದ್ದರಿಂದ, ಲಕ್ಷಾಂತರ ಅಭಿಮಾನಿಗಳು ಕ್ರೀಡಾಂಗಣದ ಬಾಗಿಲಿಗೆ ಒಮ್ಮೆಲೇ ನುಗ್ಗಿದ್ದರು. ಈ ಸಂದರ್ಭದಲ್ಲಿ ಉಂಟಾದ ನೂಕಾಟ ಮತ್ತು ತಳ್ಳಾಟದಿಂದ ಕಾಲ್ತುಳಿತ ಸಂಭವಿಸಿ, ಮಕ್ಕಳು ಸೇರಿದಂತೆ 11 ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಈ ಘಟನೆಯಲ್ಲಿ 33ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ, ಇವರಲ್ಲಿ ಕೆಲವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಸಹನಾ ಅವರ ಮೃತದೇಹ ಸದ್ಯ ಬೆಂಗಳೂರಿನ ವೈದೇಹಿ ಆಸ್ಪತ್ರೆಯ ಶವಾಗಾರದಲ್ಲಿದೆ. ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಬೌರಿಂಗ್ ಮತ್ತು ವೈದೇಹಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ದುರಂತಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ ಉಚಿತ ಚಿಕಿತ್ಸೆಯನ್ನು ಘೋಷಿಸಿದ್ದಾರೆ.