ಚಿತ್ರದುರ್ಗ: ಚಿತ್ರದುರ್ಗದ ಮದಕರಿಪುರ ಸೇತುವೆ ಬಳಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ರಮೇಶ್ (32) ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಅಪಘಾತದ ತೀವ್ರತೆಯಿಂದ ಬಸ್ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಆದರೆ, ಬಸ್ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ತಕ್ಷಣವೇ ಹೊರಬಂದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಣೇಶ್ ಟ್ರಾವೆಲ್ಸ್ಗೆ ಸೇರಿದ ಖಾಸಗಿ ಬಸ್ ದಾವಣಗೆರೆಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿತ್ತು. ಈ ವೇಳೆ, ಬಚ್ಚಬೋರನಹಟ್ಟಿ ನಿವಾಸಿ ರಮೇಶ್ರವರ ಬೈಕ್ ಬಸ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಬಸ್ನ ಕೆಳಭಾಗದಲ್ಲಿ ಸಿಲುಕಿಕೊಂಡಿದ್ದು, ಬಸ್ ಚಾಲಕನಿಗೆ ತಕ್ಷಣ ಗೊತ್ತಾಗದ ಕಾರಣ ಬಸ್ ಸ್ವಲ್ಪ ದೂರ ಸಾಗಿದೆ. ಈ ಸಂದರ್ಭದಲ್ಲಿ ಬೈಕ್ ಮತ್ತು ಬಸ್ ನಡುವೆ ಬೆಂಕಿ ಹೊತ್ತಿಕೊಂಡಿತು. ಕ್ಷಣಾರ್ಧದಲ್ಲಿ ಬೆಂಕಿ ದೊಡ್ಡ ಮಟ್ಟದಲ್ಲಿ ಹರಡಿ ಬಸ್ ಸಂಪೂರ್ಣ ಧಗಧಗಿಸಿತು.
ಬೆಂಕಿ ಕಾಣಿಸಿಕೊಂಡ ತಕ್ಷಣ ಬಸ್ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ತಕ್ಷಣವೇ ಹೊರಬಂದಿದ್ದರಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಥಳೀಯರು ಮಾಹಿತಿ ನೀಡಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟರು. ಆದರೆ, ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿತ್ತು.
ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.