ಬೆಂಗಳೂರು: ಕರ್ನಾಟಕ ಸರ್ಕಾರವು ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆ ಮಾಡಿ ಆದೇಶ ಹೊರಡಿಸಿದೆ. ಈ ಪ್ರಾಧಿಕಾರದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಾಧ್ಯಕ್ಷರಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನೇಮಿಸಲಾಗಿದೆ. ಈ ಕುರಿತು ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024 (2025ರ ಕರ್ನಾಟಕ ಕಾಯ್ದೆ ಸಂಖ್ಯೆ 35) ಪ್ರಕರಣ 09ರ ಉಪ ಪ್ರಕರಣ (1)ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಈ ಪ್ರಾಧಿಕಾರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಚಿಸಲಾಗಿದೆ. ಈ ಆದೇಶವು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ.
ಪದಾಧಿಕಾರಿಗಳ ನೇಮಕ:
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪದನಿಮಿತ್ತ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಾಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇವರ ಜೊತೆಗೆ ಪದನಿಮಿತ್ತ ಸದಸ್ಯರಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕುಮಾರಿ ಶೋಭಾ ಕರಂದ್ಲಾಜೆ, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ಬಿ.ಎಸ್. ಸುರೇಶ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಲೋಕಸಭಾ ಸದಸ್ಯರಾದ ಡಾ. ಸಿ.ಎನ್. ಮಂಜುನಾಥ್, ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ, ರಾಜ್ಯಸಭಾ ಸದಸ್ಯ ನಾರಾಯಣ ಕೊರಗಪ್ಪ, ನಟ ಜಗ್ಗೇಶ್, ಜಿ.ಸಿ. ಚಂದ್ರಶೇಖರ್, ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿದಂತೆ ಒಟ್ಟು 75 ಮಂದಿಯನ್ನು ಸದಸ್ಯರಾಗಿ ನೇಮಿಸಲಾಗಿದೆ.
ಪ್ರಾಧಿಕಾರದ ಉದ್ದೇಶ
ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಬೆಂಗಳೂರು ಮಹಾನಗರದ ಸಮಗ್ರ ಅಭಿವೃದ್ಧಿಗೆ ಗುರಿಯಿಟ್ಟುಕೊಂಡಿದೆ. ಈ ಪ್ರಾಧಿಕಾರವು ನಗರದ ಮೂಲಸೌಕರ್ಯ, ಸಾರಿಗೆ, ವಸತಿ, ಮತ್ತು ಇತರ ಅಭಿವೃದ್ಧಿ ಯೋಜನೆಗಳನ್ನು ಸಮರ್ಥವಾಗಿ ಜಾರಿಗೊಳಿಸಲು ಕಾರ್ಯನಿರ್ವಹಿಸಲಿದೆ.