ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ಮಾನವೀಯತೆ ಮರೆತ ಘಟನೆಯೊಂದು ನಡೆದಿದೆ. ಲೈಂಗಿಕ ಕ್ರಿಯೆಗೆ ಒಪ್ಪದ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಆಕೆಯ ಖಾಸಗಿ ಭಾಗಕ್ಕೆ ಒದ್ದು ಕೊಲೆ ಮಾಡಿದ್ದಾನೆ. ಈ ಸಂಬಂಧ ಯಸಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಘಟನೆಯ ವಿವರ :
ಮೃತ ಮಹಿಳೆ ರಮ್ಯಾ (35) ಎಂದು ಗುರುತಿಸಲಾಗಿದೆ. ರಮ್ಯಾ ಅವರ ಪತಿ ಎರಡು ವರ್ಷಗಳ ಹಿಂದೆ ನಿಧನರಾಗಿದ್ದರು. ಇವರು ಬೆಂಗಳೂರಿನ ಜೆ.ಪಿ. ನಗರದಲ್ಲಿ ಹೋಂ ನರ್ಸಿಂಗ್ ಕೆಲಸ ಮಾಡುತ್ತಿದ್ದರು. ಅದೇ ಗ್ರಾಮದ ಚಂದ್ರ (41) ಎಂಬಾತನೊಂದಿಗೆ ರಮ್ಯಾ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಏಪ್ರಿಲ್ 28ರಂದು ಅತ್ತೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ರಮ್ಯಾ ಗ್ರಾಮಕ್ಕೆ ಬಂದಿದ್ದಾಗ ಈ ಘೋರ ಕೃತ್ಯ ನಡೆದಿದೆ.
ನಡೆದಿದ್ದೇನು?
ಅತ್ತೆಯ ಅಂತ್ಯಕ್ರಿಯೆ ಮುಗಿಸಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ರಮ್ಯಾ ಬಳಿ ಬಂದ ಆರೋಪಿ ಚಂದ್ರ, ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ. ರಮ್ಯಾ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಚಂದ್ರ, ರಮ್ಯಾ ಮೇಲೆ ಹಲ್ಲೆ ನಡೆಸಿ ಆಕೆಯ ಖಾಸಗಿ ಭಾಗಕ್ಕೆ ಕಾಲಿನಿಂದ ಬಲವಾಗಿ ಒದ್ದಿದ್ದಾನೆ.
ಹಲ್ಲೆಯ ನಂತರ ಏಪ್ರಿಲ್ 30ರಂದು ರಮ್ಯಾ ಅವರಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು ಆದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಆಸ್ಪತ್ರೆಯ ಮಾಹಿತಿಯ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಪೊಲೀಸ್ ಕ್ರಮ :
ಯಸಳೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿ ಚಂದ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





