ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

ಗುಟ್ಕಾ (12)

ಬೆಂಗಳೂರು, ಆ.24: ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ತುಮಕೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ತುಮಕೂರಿನಲ್ಲಿ ಏಕಾಏಕಿ ಭಾರಿ ಮಳೆ

ತುಮಕೂರು ನಗರದಲ್ಲಿ ಇಂದು ಸೋಮವಾರ ಮಧ್ಯಾಹ್ನದ ಬಳಿಕ ಏಕಾಏಕಿ ಜೋರಾಗಿ ಮಳೆ ಸುರಿಯಿತು. ಕೆಲಕಾಲ ಸುರಿದ ಭಾರಿ ಮಳೆಗೆ ನಗರದ ಹಲವು ರಸ್ತೆಗಳ ಮೇಲೆ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಯಿತು.

ಮಳೆಯೊಂದಿಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಆಗಾಗ ತುಂತುರು ಮಳೆಯೂ ಮುಂದುವರಿದಿದೆ. ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತಂಪಿನ ಅನುಭವ ನೀಡಿದರೂ, ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ಸಂಚಾರಕ್ಕೆ ತೊಂದರೆ ಉಂಟಾಯಿತು.

ಹಾಸನದಲ್ಲಿ ಪ್ರಯಾಣಿಕರು ಹೈರಾಣ

ಇತ್ತ ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಬಿಸಿಲೆ-ಸುಬ್ರಹ್ಮಣ್ಯ ಮಾರ್ಗದಲ್ಲಿ ಗಾಳಿ ಮಳೆಗೆ ಮರಗಳು ಧರೆಗುರುಳಿದ್ದು, ರಾಜ್ಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ.

ಮಧ್ಯಾಹ್ನದಿಂದಲೇ ಸಾರಿಗೆ ಬಸ್‌ಗಳು ಸೇರಿದಂತೆ ನೂರಾರು ವಾಹನಗಳು ರಸ್ತೆಯಲ್ಲೇ ಸಿಲುಕಿಕೊಂಡಿದ್ದು, ಪ್ರವಾಸಿಗರು ಹಾಗೂ ಪ್ರಯಾಣಿಕರು ಗಂಟೆಗಟ್ಟಲೆ ಪರದಾಡುವಂತಾಗಿದೆ. ಮರ ತೆರವು ಕಾರ್ಯ ವಿಳಂಬವಾಗುತ್ತಿರುವುದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಸಿಲೆ-ಸುಬ್ರಹ್ಮಣ್ಯ ಮಾರ್ಗ ಬಂದ್

ಬಿಸಿಲೆ ಘಾಟ್ ಪ್ರದೇಶದಲ್ಲಿ ಗಾಳಿ ಸಹಿತ ಮಳೆ ಮುಂದುವರಿದಿದ್ದು, ರಸ್ತೆಗೆ ಮರಗಳು ಉರುಳಿ ಬಿದ್ದಿರುವ ಹಿನ್ನೆಲೆಯಲ್ಲಿ ಬಿಸಿಲೆ-ಸುಬ್ರಹ್ಮಣ್ಯ ಮಾರ್ಗದ ಸಂಚಾರವನ್ನು ಬಂದ್ ಮಾಡಲಾಗಿದೆ.

ಮಳೆ ಹಾಗೂ ಮರ ಬಿದ್ದಿರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮಲೆನಾಡು ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಸಂಚಾರದ ಮೇಲೂ ಪರಿಣಾಮ ಬೀರುತ್ತಿದೆ.

Exit mobile version