ಹಾಸನದಲ್ಲಿ ಮುಂದುವರೆದ ಕಾಡಾನೆಗಳ ದಾಂಧಲೆ: ಗ್ರಾಮಸ್ಥರಲ್ಲಿ ಆತಂಕ

Untitled design (20)

ಹಾಸನ (ಜುಲೈ 10): ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದ್ದು, ರೈತರು ಮತ್ತು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕ್ಯಾನಹಳ್ಳಿ ಗ್ರಾಮದ ಸಮೀಪ ಕಾಡಾನೆಗಳ ಹಿಂಡು ಗುಂಪು ಗುಂಪಾಗಿ ಸಂಚರಿಸುತ್ತಿದ್ದು, ಜನವಸತಿ ಪ್ರದೇಶದ ಅಕ್ಕಪಕ್ಕ ಕಾಣಿಸಿಕೊಳ್ಳುತ್ತಿರುವುದು ಸ್ಥಳೀಯರಲ್ಲಿ ಭಯದ ವಾತಾವರಣವನ್ನು ಸೃಷ್ಟಿ ಮಾಡಿದೆ.

ಕಾಡಾನೆಗಳು ರಾತ್ರಿ ಹಾಗೂ ಮುಂಜಾನೆ ವೇಳೆಯಲ್ಲಿ ಹೆಚ್ಚು ಸಂಚರಿಸುತ್ತಿದ್ದು, ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ತುಳಿದು ನಾಶಪಡಿಸುತ್ತಿವೆ. ಇತ್ತೀಚಿನ ದಿನಗಳಲ್ಲಿ ಹಲವು ಕಡೆ ಬೆಳೆಹಾನಿ ಸಂಭವಿಸಿರುವ ಮಾಹಿತಿ ಲಭ್ಯವಾಗಿದ್ದು, ಕಷ್ಟಪಟ್ಟು ಬೆಳೆದ ಬೆಳೆ ಕಣ್ಣೆದುರೇ ಹಾಳಾಗುತ್ತಿರುವುದರಿಂದ ರೈತರು ಕಂಗಾಲಾಗಿದ್ದಾರೆ. ವಿಶೇಷವಾಗಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿ ಕಾಣಿಸುತ್ತಿದೆ ಇದರಿಂದ ಜನ ಜಮೀನಿಗೆ ಹೋಗಲು ಭಯ ಭೀತರಾಗಿದ್ದಾರೆ.

ಈ ಘಟನೆ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮಗಳಲ್ಲಿ ಮೈಕ್ ಮೂಲಕ ಜನರಿಗೆ ಎಚ್ಚರಿಕೆ ಸಂದೇಶ ಸಾರುತ್ತಿದ್ದಾರೆ. ರಾತ್ರಿ ಮತ್ತು ಮುಂಜಾನೆ ಸಮಯದಲ್ಲಿ ಅನಗತ್ಯವಾಗಿ ಹೊರಗೆ ಬರಬಾರದು, ಕಾಡಾನೆಗಳು ಕಂಡುಬಂದರೆ ಅವುಗಳ ಬಳಿ ಹೋಗದೆ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳು ಜನರಲ್ಲಿ ಮನವಿ ಮಾಡಿದ್ದಾರೆ. ಜನವಸತಿ ಪ್ರದೇಶದ ಬಳಿ ಕಾಡಾನೆಗಳು ಸಂಚರಿಸುತ್ತಿರುವುದರಿಂದ ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಸ್ಥಳೀಯರಿಂದ ಮಾಹಿತಿ ಪಡೆದುಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು, ಕಾಡಾನೆಗಳು ಹಾನಿ ಮಾಡಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆಗಳ ಚಲನವಲನದ ಬಗ್ಗೆ ನಿಗಾ ಇಡಲಾಗುತ್ತಿದ್ದು, ಅವುಗಳನ್ನು ಕಾಡಿನೊಳಕ್ಕೆ ಓಡಿಸುವ ಕಾರ್ಯಾಚರಣೆಯನ್ನೂ ಕೈಗೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ. ಕಾಡಾನೆಗಳ ಹಾವಳಿ ಕಂಡು ಬಂದ ಪ್ರದೇಶಕ್ಕೆ ಆರ್‌ಎಫ್‌ಒ ಹೇಮಂತ್ ಕುಮಾರ್ ಭೇಟಿ ನೀಡಿ, ಹಾನಿಗೊಳಗಾದ ಜಾಗಗಳನ್ನು ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದರು.

ಕಾಡಾನೆಗಳ ದಾಂಧಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಶಾಶ್ವತ ಪರಿಹಾರಕ್ಕೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂಬುದು ರೈತರು ಹಾಗೂ ಗ್ರಾಮಸ್ಥರ ಒತ್ತಾಯವಾಗಿದೆ. ಬೆಳೆ ನಾಶದಿಂದ ನಷ್ಟ ಅನುಭವಿಸುತ್ತಿರುವ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಕೂಡ ಜನರ ಆಗ್ರಹ ಕೇಳಿಬಂದಿದೆ.

Exit mobile version