ನಾಳೆ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

Shn (32)

ಕರ್ನಾಟಕದಲ್ಲಿ ಡೀಸೆಲ್ ಬೆಲೆ ಏರಿಕೆ ಮತ್ತು ಟೋಲ್ ಶುಲ್ಕದ ಹೊರೆಯ ವಿರುದ್ಧ ರಾಜ್ಯ ಲಾರಿ ಮಾಲೀಕರ ಸಂಘವು ನಾಳೆ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿಯ ಲಾರಿ ಮುಷ್ಕರಕ್ಕೆ ಕರೆ ನೀಡಿದೆ. ಈ ಮುಷ್ಕರದಿಂದ ರಾಜ್ಯದ ಸರಕು ಸಾಗಣೆ ಸಂಪೂರ್ಣವಾಗಿ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.

ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ, “ನಾಳೆ ಮಧ್ಯರಾತ್ರಿಯಿಂದ ಮುಷ್ಕರ ಆರಂಭವಾಗಲಿದೆ. ಯಾವುದೇ ಕಾರಣಕ್ಕೂ ಈ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯದ 6 ಲಕ್ಷಕ್ಕೂ ಹೆಚ್ಚು ಲಾರಿಗಳು ಈ ಮುಷ್ಕರವನ್ನು ಬೆಂಬಲಿಸಲಿವೆ ಎಂದು ತಿಳಿಸಿದ್ದಾರೆ. ಜಲ್ಲಿಕಲ್ಲು, ಮರಳು, ಮತ್ತು ಗೂಡ್ಸ್ ವಾಹನಗಳು ಸೇರಿದಂತೆ ಎಲ್ಲಾ ಸರಕು ಸಾಗಣೆ ಸೇವೆಗಳು ಸಂಪೂರ್ಣವಾಗಿ ನಿಲ್ಲಲಿವೆ. ಹೊರ ರಾಜ್ಯಗಳ ಲಾರಿ ಮಾಲೀಕರಿಂದಲೂ ಬೆಂಬಲ ವ್ಯಕ್ತವಾಗಿದೆ ಎಂದು ಷಣ್ಮುಗಪ್ಪ ಹೇಳಿದ್ದಾರೆ.

ಆದರೆ, ಫೆಡರೇಶನ್ ಆಫ್ ಲಾರಿ ಓನರ್ಸ್ ಅಸೋಸಿಯೇಷನ್‌ನ ಗೌರವಾಧ್ಯಕ್ಷ ಚನ್ನಾರೆಡ್ಡಿ ಈ ಮುಷ್ಕರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. “ನಾವು ಈ ಮುಷ್ಕರವನ್ನು ಬೆಂಬಲಿಸುವುದಿಲ್ಲ. ಲಾರಿಗಳು ಎಂದಿನಂತೆ ಓಡಾಡಲಿವೆ. ಸಾರ್ವಜನಿಕರು ಆತಂಕಗೊಳ್ಳುವ ಅಗತ್ಯವಿಲ್ಲ,” ಎಂದು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಡೀಸೆಲ್ ದರವು ಪುದುಚೇರಿಯನ್ನು ಹೊರತುಪಡಿಸಿ ಇತರೆಡೆಗಿಂತ ಕಡಿಮೆಯಿದೆ ಎಂದು ಚನ್ನಾರೆಡ್ಡಿ ಒತ್ತಿ ಹೇಳಿದ್ದಾರೆ. “ಪ್ರತಿ ಲೀಟರ್‌ಗೆ 2 ರೂ. ತೆರಿಗೆ ಹೆಚ್ಚಳವು ದೊಡ್ಡ ಹೊರೆಯಾಗದು. ಸರ್ಕಾರದೊಂದಿಗೆ ಘರ್ಷಣೆಗಿಂತ ಮಾತುಕತೆಯ ಮೂಲಕ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು,” ಎಂದು ಸಲಹೆ ನೀಡಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

    Exit mobile version