ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 402 ಪಿಎಸ್ಐ (ಪೊಲೀಸ್ ಸಬ್-ಇನ್ಸ್ಪೆಕ್ಟರ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ 15 ರಿಂದ 20 ದಿನಗಳಲ್ಲಿ ನೇಮಕಾತಿ ಆದೇಶ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಬಿ.ವೈ. ವಿಜಯೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 402 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ ಎಂದು ತಿಳಿಸಿದರು. 2021ರಲ್ಲಿ 545 ಮತ್ತು 402 ಪಿಎಸ್ಐ ಹುದ್ದೆಗಳಿಗೆ ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಲಾಗಿತ್ತು. ಆದರೆ, 545 ಹುದ್ದೆಗಳ ನೇಮಕಾತಿಯಲ್ಲಿ ಅವ್ಯವಹಾರದ ಆರೋಪಗಳು ಕಾಣಿಸಿಕೊಂಡಿದ್ದರಿಂದ, ಆ ಪ್ರಕ್ರಿಯೆ ವಿಳಂಬವಾಗಿತ್ತು. ಇದರಿಂದಾಗಿ 402 ಪಿಎಸ್ಐ ಹುದ್ದೆಗಳ ನೇಮಕಾತಿಯನ್ನು ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
545 ಅಭ್ಯರ್ಥಿಗಳಿಗೆ ಸಂಬಂಧಿಸಿದ ಕಾನೂನಾತ್ಮಕ ಮತ್ತು ಇತರ ಸಮಸ್ಯೆಗಳನ್ನು ಬಗೆಹರಿಸಿ, ಅವರಿಗೆ ಈಗಾಗಲೇ ನೇಮಕಾತಿ ಆದೇಶ ನೀಡಲಾಗಿದೆ. ಈ ಅಭ್ಯರ್ಥಿಗಳು ಕಳೆದ ಮೂರು ತಿಂಗಳಿಂದ ತರಬೇತಿಯಲ್ಲಿ ಭಾಗವಹಿಸುತ್ತಿದ್ದಾರೆ. 402 ಪಿಎಸ್ಐ ಹುದ್ದೆಗಳ ಪೈಕಿ 393 ಅಭ್ಯರ್ಥಿಗಳ ಸಿಂಧುತ್ವ ಪರಿಶೀಲನೆ, ವೈದ್ಯಕೀಯ ತಪಾಸಣೆ ಮತ್ತು ದಾಖಲಾತಿ ಪರಿಶೀಲನೆ ಪೂರ್ಣಗೊಂಡಿದೆ. ಉಳಿದ ಅಭ್ಯರ್ಥಿಗಳ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ, 15 ರಿಂದ 20 ದಿನಗಳಲ್ಲಿ ಎಲ್ಲ 402 ಅಭ್ಯರ್ಥಿಗಳಿಗೂ ನೇಮಕಾತಿ ಆದೇಶವನ್ನು ಹೊರಡಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
