ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಬಲಿ: ಹಾಸನದಲ್ಲಿ ಚಿರತೆ ದಾಳಿಗೆ ನಾಲ್ವರು ಗಾಯ

BeFunky collage

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷ ತೀವ್ರಗೊಳ್ಳುತ್ತಿದೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಂಧ್ಯಾ ಅಚ್ಚಯ್ಯ (60) ಅವರು ಸಾವನ್ನಪ್ಪಿದ್ದಾರೆ. ಅದೇ ಸಮಯದಲ್ಲಿ ಹಾಸನ ಜಿಲ್ಲೆಯಲ್ಲಿ ಚಿರತೆ ದಾಳಿಗೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಎರಡು ಘಟನೆಗಳು ಸ್ಥಳೀಯರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿವೆ.

ಕೊಡಗು ದುರಂತ :

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೋಣನಕಟ್ಟೆಯಲ್ಲಿ ನಡೆದ ಈ ದುರಂತದಲ್ಲಿ ನಿವೃತ್ತ ಐಜಿಪಿ ಅಣ್ಣಳಮಾಡ ಸುನೀಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅವರು ಬಲಿಯಾಗಿದ್ದಾರೆ. ನಿನ್ನೆ ದೆಹಲಿಯಿಂದ ಸ್ವಗ್ರಾಮಕ್ಕೆ ಬಂದಿದ್ದ ಅವರು ಬೆಳಿಗ್ಗೆ 9 ಗಂಟೆ ಸುಮಾರಿಗೆ ಸ್ವಂತ ಎಸ್ಟೇಟ್‌ಗೆ ತೆರಳುವ ವೇಳೆ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಗಾಯಗೊಂಡ ಸಂಧ್ಯಾ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕಾರ್ಮಿಕರಿಗೂ ಗಾಯಗಳಾಗಿದೆ.

ಹಾಸನದಲ್ಲಿ ಚಿರತೆ ದಾಳಿ :

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಅಂಕವಳ್ಳಿ ಗ್ರಾಮದಲ್ಲಿ ಬೆಳಿಗ್ಗೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ನವೀನ್ (40), ನಾಗರಾಜ್ (55), ಜಯಮ್ಮ (70) ಮತ್ತು ವಸಂತಮ್ಮ ಅವರ ಮೇಲೆ ಚಿರತೆ ದಾಳಿ ಮಾಡಿದೆ. ಗಂಭೀರ ಗಾಯಗೊಂಡ ನಾಲ್ವರನ್ನು ಹೊಳೆನರಸೀಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿರತೆಯು ಬೂವನಹಳ್ಳಿ ಕಡೆಗೆ ಓಡಿದ್ದು, ವಸಂತಮ್ಮ ಅವರ ಮೇಲೂ ದಾಳಿ ಮಾಡಿದ್ದು, ಸ್ಥಳೀಯರು ಕೊಟ್ಟಿಗೆ ಬಾಗಿಲು ಮುಚ್ಚಿ ಚಿರತೆಯನ್ನು ಸೆರೆ ಹಿಡಿದಿದ್ದಾರೆ.

ಅರಣ್ಯ ಇಲಾಖೆ ಕಾರ್ಯಾಚರಣೆ

ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಮೈಸೂರಿನ ವನ್ಯಜೀವಿ ವೈದ್ಯ ಡಾ. ಆದರ್ಶ ನೇತೃತ್ವದಲ್ಲಿ ಅರವಳಿಕೆ ಮದ್ದು ನೀಡಿ ಚಿರತೆಯನ್ನು ಸೆರೆ ಹಿಡಿಯುವ ಪ್ರಯತ್ನ ನಡೆಯುತ್ತಿದೆ. ಡಿಸಿ ಲತಾ ಕುಮಾರಿ ಅವರು, “ಚಿರತೆ ಇರುವ ಸ್ಥಳ ಗುರುತಿಸಲಾಗಿದೆ. ಶೀಘ್ರವೇ ಸೆರೆ ಹಿಡಿಯಲಾಗುತ್ತದೆ” ಎಂದು ಹೇಳಿದ್ದಾರೆ.

ಮಾನವ-ವನ್ಯಜೀವಿ ಸಂಘರ್ಷ ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡಾನೆ ಮತ್ತು ಚಿರತೆ ದಾಳಿಗಳು ಹೆಚ್ಚುತ್ತಿವೆ. ಸ್ಥಳೀಯರು ಅರಣ್ಯ ಇಲಾಖೆಯ ನಿರ್ಲಕ್ಷ್ಯವನ್ನು ಆರೋಪಿಸುತ್ತಿದ್ದಾರೆ. ವನ್ಯಜೀವಿ ರಕ್ಷಣೆ ಮತ್ತು ಮಾನವ ಜೀವ ರಕ್ಷಣೆಯ ನಡುವಿನ ಸಮತೋಲನ ಸಾಧಿಸುವುದು ಸವಾಲಾಗಿದೆ.

Exit mobile version