ಕೊಡಗು: ಇಂದು (ಜುಲೈ 30) ಕೊಡಗು ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಜಿಲ್ಲಾಡಳಿತವು ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಕಾವೇರಿ ಮತ್ತು ಲಕ್ಷ್ಮಣ ತೀರ್ಥ ನದಿಗಳು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿದ್ದು, ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಅವಾಂತರ ಸೃಷ್ಟಿಯಾಗಿದೆ. ಬಿರುಗಾಳಿಯಿಂದಾಗಿ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳುತ್ತಿದ್ದು, ಅನೇಕ ಕಡೆ ಸಂಚಾರಕ್ಕೆ ಅಡೆತಡೆ ಉಂಟಾಗಿದೆ.
ಬೆಟ್ಟಗುಡ್ಡ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಸುರಕ್ಷಿತ ಸ್ಥಳಗಳಲ್ಲಿ ಇರಲು ಜಿಲ್ಲಾಡಳಿತವು ಸೂಚನೆ ನೀಡಿದೆ. ಮಳೆಯಿಂದ ಉಂಟಾಗಬಹುದಾದ ಭೂಕುಸಿತ, ಪ್ರವಾಹ ಮತ್ತು ಇತರ ಅಪಾಯಗಳನ್ನು ತಡೆಗಟ್ಟಲು ಜನರು ಎಚ್ಚರಿಕೆಯಿಂದಿರಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ತುರ್ತು ಸಂದರ್ಭಗಳಲ್ಲಿ ಸಹಾಯಕ್ಕಾಗಿ ಜಿಲ್ಲಾಡಳಿತದ ಸಹಾಯವಾಣಿಗೆ ಸಂಪರ್ಕಿಸಲು ಸೂಚಿಸಲಾಗಿದೆ.
