ಕೊಡಗು ಮಳೆಯ ಅಬ್ಬರ: 100 ಅಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ

Untitled design (15)

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಕೃಷ್ಣರಾಜ ಸಾಗರ (KRS) ಜಲಾಶಯದ ನೀರಿನ ಮಟ್ಟ 100 ಅಡಿ ಗಡಿ ದಾಟಿದೆ. ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದ್ದು, ರೈತರಲ್ಲಿ ಉತ್ತಮ ಮಳೆಯ ನಿರೀಕ್ಷೆ ಹಾಗೂ ನೀರಾವರಿ ಭದ್ರತೆಯ ವಿಶ್ವಾಸ ಮೂಡಿದೆ.

ಪ್ರಸ್ತುತ ಕೆಆರ್‌ಎಸ್ ಜಲಾಶಯಕ್ಕೆ 32,048 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಹೊರಹರಿವು 1,821 ಕ್ಯೂಸೆಕ್ ಇದೆ. ಜಲಾಶಯದಲ್ಲಿ ಈಗ 23.079 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿ ಆಗಿದ್ದು, ಇಂದಿನ ನೀರಿನ ಮಟ್ಟ 100.34 ಅಡಿ ದಾಖಲಾಗಿದೆ. ಪೂರ್ಣ ಭರ್ತಿಯಾಗಲು ಇನ್ನೂ ಸುಮಾರು 24 ಅಡಿ ಮಾತ್ರ ಬಾಕಿಯಿದೆ. ಏರಿಕೆಯಾಗಿದೆ. ಇದರಿಂದ ರಾಜ್ಯಕ್ಕೆ ಸದ್ಯಕ್ಕೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಾತ್ಕಾಲಿಕ ನೆಮ್ಮದಿ ದೊರೆತಂತಾಗಿದೆ.

ಕೊಡಗು ಭಾಗದಲ್ಲಿ ಮಳೆ ಮತ್ತಷ್ಟು ಚುರುಕುಗೊಂಡಿರುವುದರಿಂದ ಕಾವೇರಿ ನದಿಗೆ ನೀರಿನ ಹರಿವು ಹೆಚ್ಚಾಗಿದೆ. ಅದರ ಪರಿಣಾಮವಾಗಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟವೂ ವೇಗವಾಗಿ ಏರಿಕೆಯಾಗುತ್ತಿದೆ. ಕಳೆದ ಮೂರು ದಿನಗಳಲ್ಲೇ ನೀರಿನ ಮಟ್ಟ ಶತಕದ ಗಡಿ ದಾಟಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 100 ಅಡಿ ದಾಟಿರುವುದು ಮಂಡ್ಯ, ಮೈಸೂರು ಸೇರಿದಂತೆ ಕಾವೇರಿ ಕಣಿವೆಯ ರೈತರಿಗೆ ಸಂತಸದ ಸುದ್ದಿ. ಮುಂಗಾರು ಮಳೆಯ ಆರಂಭದಲ್ಲಿ ನೀರಿನ ಕೊರತೆ ಬಗ್ಗೆ ಆತಂಕ ವ್ಯಕ್ತವಾಗಿದ್ದರೂ, ಇದೀಗ ಉತ್ತಮ ಮಳೆಯೊಂದಿಗೆ ಜಲಾಶಯ ಭರ್ತಿಯಾಗುವ ವಿಶ್ವಾಸ ಹೆಚ್ಚಾಗಿದೆ.

ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳ ಕಾಲ ಕೊಡಗು ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಕೆಆರ್‌ಎಸ್ ಜಲಾಶಯಕ್ಕೆ ಇನ್ನಷ್ಟು ನೀರು ಹರಿದು ಬರುವ ನಿರೀಕ್ಷೆಯಿದೆ.

Exit mobile version