ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೊರಾರ್ಜಿ ವಸತಿ ಶಾಲೆಯಲ್ಲಿ 9ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ದುರ್ಘಟನೆಯನ್ನು ತನಿಖೆ ಮಾಡಲು ನಿವೃತ್ತ ನ್ಯಾಯಾಧೀಶೆ ಶೋಭಾ ಅವರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಲಾಗಿದೆ.
ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಅವರು ಶಾಲೆಯ ಪ್ರಾಂಶುಪಾಲೆ ರಜನಿ ಮತ್ತು ವಾರ್ಡನ್ ಸುಂದರ್ ನಾಯಕ್ ಅವರನ್ನು ಅಮಾನತುಗೊಳಿಸಿದ್ದಾರೆ. ಈ ಘಟನೆಯಿಂದ ವಿದ್ಯಾರ್ಥಿನಿಯರ ಪೋಷಕರಲ್ಲಿ ಆತಂಕ ಮತ್ತು ಆಕ್ರೋಶ ವ್ಯಕ್ತವಾಗಿದೆ.
ಕೊಪ್ಪ ತಾಲೂಕಿನ ಬೊಮ್ಲಾಪುರ ಸಮೀಪದ ಹೊಕ್ಕಳಿಕೆ ಗ್ರಾಮದ ಶಮಿತಾ ಎಂಬ ವಿದ್ಯಾರ್ಥಿನಿ, ಮೊರಾರ್ಜಿ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದರು. 2025ರ ಜೂನ್ 29ರಂದು ಶಾಲೆಯ ಶೌಚಾಲಯದಲ್ಲಿ ವೇಲ್ನಿಂದ ನೇಣುಬಿಗಿದುಕೊಂಡು ಶಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದರು. ರಾತ್ರಿಯವರೆಗೂ ಸ್ನೇಹಿತರೊಂದಿಗೆ ಸಂತೋಷವಾಗಿ ಮಾತನಾಡಿದ್ದ ಶಮಿತಾ, ಬೆಳಗಿನ ಜಾವ ಆತ್ಮಹತ್ಯೆಗೆ ಶರಣಾಗಿದ್ದರು.
ಇದೇ ರೀತಿಯ ಘಟನೆ 2023ರ ಜುಲೈ 27ರಂದು ಸಂಭವಿಸಿತ್ತು. ಆಗ ವಿದ್ಯಾರ್ಥಿನಿ ಅಮುಲ್ಯ ಶಾಲೆಯ ಬಾತ್ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಎರಡೂ ಘಟನೆಗಳು ಒಂದೇ ಸ್ಥಳದಲ್ಲಿ, ಒಂದೇ ಶೈಲಿಯಲ್ಲಿ, ಕಬ್ಬಿಣದ ರಾಡ್ಗೆ ನೇಣುಬಿಗಿದುಕೊಂಡಿರುವುದು ಸಾರ್ವಜನಿಕರಲ್ಲಿ ಮತ್ತು ಪೋಷಕರಲ್ಲಿ ಅನುಮಾನಕ್ಕೆ ಕಾರಣವಾಗಿದೆ.
ಈ ಘಟನೆಗಳ ಹಿನ್ನೆಲೆಯಲ್ಲಿ, ಪೋಷಕರು ಶಾಲೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿನಿಯರ ಸುರಕ್ಷತೆಗಾಗಿ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ. ಈ ಘಟನೆಯಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.