ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ವಿರುದ್ಧ ನಿರಂತರವಾಗಿ ನಿಂದನೆಯಾಗುತ್ತಿದೆ. ಹಿರಿಯ ಮಹಿಳಾ ಐಎಎಸ್ ಅಧಿಕಾರಿಯ ಬಗ್ಗೆ ರವಿ ಕುಮಾರ್ ಅವಹೇಳನಕಾರಿಯಾಗಿ ಮಾತನಾಡಿರುವುದು ಅವರ ಮನಸ್ಥಿತಿಯನ್ನು ಬಯಲಿಗೆಳೆಯುತ್ತದೆ. ಇದು ಸಮಸ್ತ ಮಹಿಳಾ ಕುಲಕ್ಕೆ ಮಾಡಿದ ಅವಮಾನವಾಗಿದೆ. ಈ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುತ್ತಾರಾ?” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನಿಸಿದ್ದಾರೆ.
ಕಳೆದ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬಿಜೆಪಿಯ ಸಿಟಿ ರವಿ ಅವರು ಸಚಿವೆಯ ಬಗ್ಗೆ ಅನುಚಿತವಾಗಿ ಮಾತನಾಡಿದ್ದಾಗಲೂ ಬಿಜೆಪಿ ನಾಯಕರು ಮೌನವಾಗಿದ್ದರು. “ಇಂಥ ಹೇಳಿಕೆಗಳಿಗೆ ಕೇಂದ್ರದ ಬಿಜೆಪಿ ನಾಯಕರು ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ ಎಂದೆನಿಸುತ್ತದೆ. ಇದು ಮಹಿಳೆಯರಿಗೆ ಬಿಜೆಪಿಯಿಂದ ದೊರೆಯುವ ಗೌರವವನ್ನು ತೋರಿಸುತ್ತದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂಥ ಕೀಳುಮಾತುಗಳನ್ನಾಡುವ ಬಿಜೆಪಿ ನಾಯಕರ ಬುದ್ಧಿಗೆ ಭ್ರಮೆಯಾಗಿದೆ,” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕ್ಷಮೆಯಾಚನೆಗೆ ಒತ್ತಾಯ
ರವಿ ಕುಮಾರ್ ಅವರು ಕೂಡಲೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. “ತಮ್ಮ ತಪ್ಪನ್ನು ಅರಿತು ಕ್ಷಮೆ ಕೇಳದಿದ್ದರೆ, ರವಿ ಕುಮಾರ್ ಅವರು ಸಾರ್ವಜನಿಕರ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ,” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ. ಇಂಥ ಹೇಳಿಕೆಗಳಿಂದ ದೂರವಿರಲು ಮತ್ತು ಜವಾಬ್ದಾರಿಯಿಂದ ವರ್ತಿಸಲು ಬಿಜೆಪಿ ನಾಯಕರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಲಹೆ ನೀಡಿದ್ದಾರೆ.