ಮಸೀದಿ ಕಡೆಯಿಂದ ಕಲ್ಲೆಸೆದ 21 ಮಂದಿ ಮುಸ್ಲಿಮರ ಬಂಧನ: ಸಚಿವ ಚಲುವರಾಯಸ್ವಾಮಿ

ಮದ್ದೂರಿನ ಕಲ್ಲು ತೂರಾಟ: ರಾಜಕೀಯ ದುರ್ಬಳಕೆಗೆ ಸಚಿವ ಚಲುವರಾಯಸ್ವಾಮಿ ಆಕ್ಷೇಪ!

111 (64)

ಮಂಡ್ಯ: ಜಿಲ್ಲೆಯ ಮದ್ದೂರಿನ ರಾಮ್ ರಹೀಮ್ ನಗರದಲ್ಲಿ ಭಾನುವಾರ ರಾತ್ರಿ ನಡೆದ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿ 21 ಮಂದಿ ಮುಸ್ಲಿಮರನ್ನು ಬಂಧಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಮಸೀದಿಯ ಕಡೆಯಿಂದ ಕಲ್ಲುಗಳನ್ನು ಎಸೆದ ಘಟನೆಯ ಬಗ್ಗೆ ಮಾಹಿತಿ ದೊರೆತಿದ್ದು, ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಮದ್ದೂರಿನ ರಾಮ್ ರಹೀಮ್ ನಗರದಲ್ಲಿ ಭಾನುವಾರ ರಾತ್ರಿ ನಡೆದ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಕಲ್ಲು ತೂರಾಟ ಸಂಭವಿಸಿದೆ. ಈ ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಎಫ್‌ಐಆರ್ ದಾಖಲಿಸಿ 21 ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರಲ್ಲಿ ಒಂದಿಬ್ಬರು ಹೊರಗಿನವರಾಗಿರಬಹುದು ಎಂದು ಸಚಿವರು ತಿಳಿಸಿದ್ದಾರೆ. “ಹಿಂದೂಗಳ ಮೇಲೆ ಯಾವುದೇ ಕೇಸ್ ದಾಖಲಾಗಿಲ್ಲ, ಯಾರನ್ನೂ ಬಂಧಿಸಿಲ್ಲ,” ಎಂದು ಸಚಿವ ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.

ರಾಜಕೀಯ ದುರ್ಬಳಕೆ ಆರೋಪ

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಈ ಘಟನೆಯನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಆರೋಪಿಸಿದರು. “ಇಷ್ಟು ಶೀಘ್ರವಾಗಿ ಯಾವುದೇ ಪ್ರಕರಣದಲ್ಲಿ ಕ್ರಮ ಕೈಗೊಂಡಿರಲಿಲ್ಲ. ಕಲ್ಲೆಸೆತ ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿದೆ. ಬಿಜೆಪಿ ಮತ್ತು ಜೆಡಿಎಸ್‌ಗೆ ಹೆಚ್ಚಿನ ತನಿಖೆ ಅಥವಾ ಕ್ರಮ ಬೇಕಿದ್ದರೆ ಮನವಿ ಸಲ್ಲಿಸಬಹುದಿತ್ತು. ಆದರೆ, ಪ್ರತಿಭಟನೆಯ ಹೆಸರಿನಲ್ಲಿ ಕೋಮುಗಲಭೆಗೆ ಪ್ರಚೋದನೆ ನೀಡುವುದು ಸರಿಯಲ್ಲ,” ಎಂದು ಸಚಿವ ಚಲುವರಾಯಸ್ವಾಮಿ ಟೀಕಿಸಿದರು.

ಪ್ರತಿಪಕ್ಷಗಳಿಗೆ ಟೀಕೆ

“ನಮ್ಮ ಸರ್ಕಾರದ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಕ್ರಮಗಳು ಪ್ರತಿಪಕ್ಷಗಳನ್ನು ಕಟ್ಟಿಹಾಕಿವೆ. ವಿಧಾನಸಭೆಯಲ್ಲಿ ವಿಫಲರಾದ ಅವರಿಗೆ ಜನಪರ ವಿಷಯಗಳಿಲ್ಲದೇ, ಕೋಮುಗಲಭೆಯನ್ನೇ ರಾಜಕೀಯ ಅಸ್ತ್ರವಾಗಿ ಬಳಸುತ್ತಿದ್ದಾರೆ,” ಎಂದು ಸಚಿವ ಚಲುವರಾಯಸ್ವಾಮಿ ಆರೋಪಿಸಿದರು. “ಪ್ರತಿಪಕ್ಷ ನಾಯಕ ಆರ್. ಅಶೋಕ್ ಮತ್ತು ಜೆಡಿಎಸ್ ನಾಯಕರು ಜನಪರ ವಿಷಯಗಳನ್ನು ಎತ್ತಿಕೊಂಡು ಮಾತನಾಡಬೇಕು. ಕಾನೂನು ಕ್ರಮ ಜರುಗಿದ ನಂತರವೂ ಪ್ರತಿಭಟನೆಯ ಹೆಸರಿನಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸುವುದು ಶೋಭನೀಯವಲ್ಲ,” ಎಂದು ಕಿಡಿಕಾರಿದ್ದಾರೆ.

ಇಂದು ಬೆಳಗ್ಗೆ ಘಟನೆಯ ಖಂಡಿಸಿ ನಡೆದ ಪ್ರತಿಭಟನೆಯ ವೇಳೆ ಮತ್ತೆ ಕಲ್ಲು ತೂರಾಟ ಸಂಭವಿಸಿದ್ದು, ಪೊಲೀಸರು ಲಾಠಿ ಚಾರ್ಜ್‌ನಿಂದ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಸದ್ಯ ಮದ್ದೂರಿನಲ್ಲಿ ಉದ್ವಿಗ್ನ ವಾತಾವರಣವಿದ್ದು, ಮಂಗಳವಾರ ಬೆಳಗ್ಗೆವರೆಗೆ ನಿಷೇಧಾಜ್ಞೆ ಹೇರಲಾಗಿದೆ.

Exit mobile version