ಮಂಡ್ಯ ಆ.30: ಬ್ರೈನ್ ಟ್ಯೂಮರ್ನಿಂದ ಬಳಲುತ್ತಿದ್ದ ಕಂದಾಯ ಇಲಾಖೆಯ ಸರ್ವೇಯರ್ರೊಬ್ಬರು ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಶ್ರೀರಂಗಪಟ್ಟಣ ತಾಲೂಕಿನ ತಡಗವಾಡಿ ಗ್ರಾಮದ ಟಿ.ಎಂ. ಮಹೇಶ್ ಎಂದು ಗುರುತಿಸಲಾಗಿದೆ. ಅವರು ಮಂಡ್ಯ ಕಂದಾಯ ಇಲಾಖೆಯಲ್ಲಿ ಸರ್ವೇಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಕಳೆದ ಎರಡು ದಿನಗಳಿಂದ ಮಹೇಶ್ ಅವರು ಕೆಲಸಕ್ಕೆ ಹಾಜರಾಗದೆ ನಾಪತ್ತೆಯಾಗಿದ್ದರು. ಕುಟುಂಬಸ್ಥರು ಹಾಗೂ ಪರಿಚಯಸ್ಥರು ಹುಡುಕಾಟ ನಡೆಸುತ್ತಿದ್ದ ವೇಳೆ ಇಂದು ನೆಟ್ಕಲ್ ಸಮೀಪದ ನಾಲೆಯಲ್ಲಿ ಅವರ ಶವ ಪತ್ತೆಯಾಗಿದೆ.
ಮಹೇಶ್ ಅವರು ತಮ್ಮ ಸಾವಿಗೆ ಬ್ರೈನ್ ಟ್ಯೂಮರ್ ಕಾಯಿಲೆಯೇ ಕಾರಣ ಎಂದು ಉಲ್ಲೇಖಿಸಿರುವ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಾರೋಗ್ಯದಿಂದ ಬೇಸತ್ತು ಅವರು ಈ ಕೃತ್ಯಕ್ಕೆ ಮುಂದಾಗಿರುವ ಶಂಕೆ ವ್ಯಕ್ತವಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಬೆಳಕವಾಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಲೆಯಿಂದ ಶವವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಬಳಿಕ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.





