ಮಂಗಳೂರಿನಲ್ಲಿ ರೌಡಿ ಶೀಟರ್ ಮತ್ತು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಬರ್ಬರ ಹತ್ಯೆಯಿಂದ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯಿಂದ ಎ.ಜೆ. ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಬಿಜೆಪಿ ಮತ್ತು ಹಿಂದೂ ಸಂಘಟನೆಯ ನಾಯಕರು ಆಸ್ಪತ್ರೆಗೆ ಆಗಮಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಒಡ್ಡಲಾಗಿದೆ.
ಸುಹಾಸ್ ಶೆಟ್ಟಿ ತನ್ನ ಸ್ನೇಹಿತರೊಂದಿಗೆ ಇನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಹಿಂದಿನಿಂದ ಹಿಂಬಾಲಿಸಿಕೊಂಡು ಬಂದ ಮೀನಿನ ಟೆಂಪೋ ಮತ್ತು ಸ್ವಿಫ್ಟ್ ಕಾರಿನ ದುಷ್ಕರ್ಮಿಗಳು ಈ ದಾರುಣ ಕೃತ್ಯವನ್ನು ಎಸಗಿದ್ದಾರೆ. ಮೀನಿನ ಟೆಂಪೋ ಸುಹಾಸ್ ಶೆಟ್ಟಿಯ ಕಾರಿಗೆ ಡಿಕ್ಕಿ ಹೊಡೆದಿದ್ದು, ಸ್ವಿಫ್ಟ್ ಕಾರಿನಿಂದ ಇಳಿದ ದುಷ್ಕರ್ಮಿಗಳು ಸಾರ್ವಜನಿಕ ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹಲ್ಲೆ ನಡೆಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಎ.ಜೆ. ಆಸ್ಪತ್ರೆಯಲ್ಲಿ ಸುಹಾಸ್ ಶೆಟ್ಟಿ ಕೊನೆಯುಸಿರೆಳೆದಿದ್ದಾರೆ.
ಈ ಘಟನೆಯಿಂದ ಕೆರಳಿದ ಹಿಂದೂ ಕಾರ್ಯಕರ್ತರು ಆಸ್ಪತ್ರೆ ಎದುರು ಜಮಾಯಿಸಿದ್ದು, ಬಿಜೆಪಿ ನಾಯಕರಾದ ನಳಿನ್ ಕಟೀಲು ಮತ್ತು ಶಾಸಕ ಭರತ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಕೂಡ ಆಸ್ಪತ್ರೆಗೆ ಆಗಮಿಸಿ ಪರಿಸ್ಥಿತಿಯನ್ನು ವೀಕ್ಷಿಸಿದ್ದಾರೆ. ಮುನ್ನೆಚ್ಚರಿಕೆಯಾಗಿ ಆಸ್ಪತ್ರೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಮಂಗಳೂರಿನಲ್ಲಿ ಇಂತಹ ಘಟನೆಗಳು ಇದೇ ಮೊದಲೇನಲ್ಲ. ಇತ್ತೀಚೆಗೆ ಕುಡುಪು ಬಳಿ ಕೇರಳ ಮೂಲದ ವ್ಯಕ್ತಿಯ ಗುಂಪು ಹತ್ಯೆ ಪ್ರಕರಣದಲ್ಲಿ 20 ಜನರನ್ನು ಪೊಲೀಸರು ಬಂಧಿಸಿದ್ದರು. ಈ ಘಟನೆಗಳು ರಾಜಕೀಯ ಮತ್ತು ಸಾಮಾಜಿಕ ಉದ್ವಿಗ್ನತೆಗೆ ಕಾರಣವಾಗಿವೆ. ಸುಹಾಸ್ ಶೆಟ್ಟಿಯ ಹತ್ಯೆಯ ಹಿಂದಿನ ಕಾರಣವನ್ನು ಪೊಲೀಸರು ತನಿಖೆಯ ಮೂಲಕ ಕಂಡುಹಿಡಿಯುವ ಕಾರ್ಯದಲ್ಲಿ ತೊಡಗಿದ್ದಾರೆ.
ಪ್ರವೋದ್ ಮುತಾಲಿಕ್ರಿಂದ ಆಕ್ರೋಶ
ಶ್ರೀ ರಾಮ ಸೇನೆಯ ಮುಖ್ಯಸ್ಥ ಪ್ರವೋದ್ ಮುತಾಲಿಕ್ ಈ ಘಟನೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಇದು ಅತಿಯಾಗಿದೆ. ಬಸ್ನಲ್ಲಿ ನಮಾಝ್ ಮಾಡುವುದು, ಕಾನೂನು ತಡೆಯೊಡ್ಡುವವರ ಮೇಲೆ ಪೊಲೀಸರು ಕೇಸ್ ಹಾಕುತ್ತಾರೆ, ಆದರೆ ಕೇಸ್ ವಾಪಸ್ ತೆಗೆದುಕೊಳ್ಳುತ್ತಾರೆ. ಪೊಲೀಸರ ನೈತಿಕತೆ ಏನು? ಸಿಎಂ ಎಸ್ಪಿಯನ್ನು ಹೊಡೆಯಲು ಹೋಗಿದ್ದಾರು. ಇದು ಕಾಂಗ್ರೆಸ್ ಸರ್ಕಾರದ ಕುಮಕು,” ಎಂದು ಅವರು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ.
ಛಲವಾದಿ ನಾರಾಯಣಸ್ವಾಮಿಯಿಂದ ಖಂಡನೆ
ಪರಿಷತ್ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕೂಡ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಏನು ಮಾಡಿದ್ದರು ಸರ್ಕಾರ ಒಪ್ಪುತ್ತದೆ ಎಂದು ಭಾವಿಸಿದೆ. ಹಿಂದೂಗಳನ್ನು ಕೊಲೆ ಮಾಡುವಂತಹ ಕೆಲಸಗಳು ನಡೆಯುತ್ತಿದೆ, ನಾವು ಏನು ಮಾಡಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಸರ್ಕಾರವು ಈ ರೀತಿಯ ಘಟನೆಗಳನ್ನು ತಡೆಗಟ್ಟಲು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಕೆ.ಎಸ್. ಈಶ್ವರಪ್ಪನಿಂದ ಆಕ್ಷೇಪ
ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಕೂಡ ಈ ಘಟನೆಯನ್ನು ಖಂಡಿಸಿದ್ದಾರೆ. “ಹಿಂದೂ ಕಾರ್ಯಕರ್ತರ ಕೊಲೆಗಳು ನಡೆಯುತ್ತಿವೆ. ಕೊಲೆಗಾರರ ಸಂಖ್ಯೆ ಹೆಚ್ಚುತ್ತಿದೆ. ಹಿಂದೂ ಸಂಘಟನೆಗಳು ಜಾಸ್ತಿಯಿರುವ ಕಡೆ ಈ ರೀತಿಯ ಘಟನೆಗಳು ನಡೆಯುತ್ತಿವೆ. ಕಾಂಗ್ರೆಸ್ನವರು ಎಷ್ಟೇ ಜನ ಸತ್ತರೂ ಸರ್ಕಾರದಲ್ಲಿ ಉಳಿಯಬೇಕೆಂದುಕೊಂಡಿದ್ದಾರೆ,” ಎಂದು ಅವರು ಕಾಂಗ್ರೆಸ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ.