ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಡಿಕೆ ಶಿವಕುಮಾರ್‌, ರಾಜ್ಯಪಾಲರಿಂದ ಅದ್ಧೂರಿ ಸ್ವಾಗತ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶನಿವಾರ ಆಗಮಿಸಿದ್ದು, ನಗರದಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.

ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಅವರು ನಗರದ ಓವಲ್ ಮೈದಾನದತ್ತ ತೆರಳಿದರು. ಬಳಿಕ ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಿದರು. ಸುಮಾರು 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಸ್ಮಾರಕವು ಸ್ವಾಮಿ ವಿವೇಕಾನಂದರ ಐತಿಹಾಸಿಕ ಮೈಸೂರು ಭೇಟಿಯ ನೆನಪಿಗಾಗಿ ನಿರ್ಮಿಸಲಾಗಿದೆ.

ಈ ಸ್ಮಾರಕದ ಮೂಲಕ ಸ್ವಾಮಿ ವಿವೇಕಾನಂದರ ಜೀವನ, ವಿಚಾರಧಾರೆ ಹಾಗೂ ರಾಷ್ಟ್ರ ನಿರ್ಮಾಣದ ಸಂದೇಶವನ್ನು ಯುವಜನತೆಗೆ ಪರಿಚಯಿಸುವ ಉದ್ದೇಶ ಹೊಂದಲಾಗಿದೆ. ಇದರೊಂದಿಗೆ ಯುವಕರಲ್ಲಿ ಸಾಂಸ್ಕೃತಿಕ, ಆಧ್ಯಾತ್ಮಿಕ ಹಾಗೂ ರಾಷ್ಟ್ರಭಕ್ತಿ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸಾಂಸ್ಕೃತಿಕ ಯುವ ಕೇಂದ್ರವನ್ನು ಅಭಿವೃದ್ಧಿಪಡಿಸಲಾಗಿದೆ.

 ಪ್ರಧಾನಿ ಮೋದಿ ಅವರು ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ, ವಿಶೇಷ ಪೂಜೆಯನ್ನು ನೆರವೇರಿಸಿದರು. ಬಳಿಕ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ್ದಾರೆ. ನಂತರ ಆಶ್ರಮದ ಸಭಾಂಗಣದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ಸುಮಾರು 6,000ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು, ಭದ್ರತಾ ದೃಷ್ಟಿಯಿಂದ ವಿಶೇಷ ಪಾಸ್ ವ್ಯವಸ್ಥೆ ಮತ್ತು ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಪ್ರಧಾನಿ ಮೋದಿ ಅವರ ಮೈಸೂರು ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪ್ರಧಾನಿಯವರನ್ನು ಸ್ವಾಗತಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಬಿ.ಜೆ.ಪಿ. ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Exit mobile version