ದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾರತದಲ್ಲಿ ಟೆಲಿಗ್ರಾಮ್ ಅಪ್ಲಿಕೇಶನ್ಗೆ ಜೂ. 22ರ ವರೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಿದೆ. ಈ ನಿರ್ಬಂಧದ ವಿರುದ್ದ ಟೆಲಿಗ್ರಾಮ್ ಈಗ ಕಾನೂನು ಹೋರಾಟಕ್ಕೆ ಇಳಿದಿದೆ. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದೆ.
ದೆಹಲಿ ಹೈಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ತೇಜಸ್ ಕರಿಯಾ ನೇತೃತ್ವದ ಪೀಠದ ಮುಂದೆ ಇಂದು ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನೀಡಿದ ಶಿಫಾರಸಿನ ಮೇರೆಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಟೆಲಿಗ್ರಾಮ್ ಸೇವೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಿತ್ತು.
NEET ಮರುಪರೀಕ್ಷೆ ಹಿನ್ನೆಲೆ ಪ್ರಶ್ನೆ ಪತ್ರಿಕೆ ಸೋರಿಕೆ, ನಕಲಿ ಮಾಹಿತಿ ಹರಡುವಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಇದರ ಜೊತೆಗೆ ಜೂನ್ 30ರವರೆಗೆ ಟೆಲಿಗ್ರಾಮ್ನ ಹಳೆಯ ಸಂದೇಶಗಳನ್ನು ಎಡಿಟ್ ಮಾಡುವ ವೈಶಿಷ್ಟ್ಯವನ್ನೂ ನಿಷ್ಕ್ರಿಯಗೊಳಿಸಲಾಗಿದೆ. ಈ ನಿರ್ಬಂಧವು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ ಜಾರಿಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಭದ್ರತೆ ಕಾಪಾಡಲು ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.
ಕಳೆದ NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ 20 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಪರೀಕ್ಷಾ ವ್ಯವಸ್ಥೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ NTA ಹೆಚ್ಚಿನ ಎಚ್ಚರಿಕೆ ವಹಿಸಿದೆ. ಜೂನ್ 21ರಂದು ನಡೆಯಲಿರುವ UG-NEET ಮರುಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ವರದಿ ಮಾಡುವಂತೆ ಸೂಚಿಸಲಾಗಿದೆ. ಇದಕ್ಕಾಗಿ NTA ವಿಶೇಷ ವರದಿ ವ್ಯವಸ್ಥೆಯನ್ನು ಆರಂಭಿಸಿದೆ.
ಅನಧಿಕೃತ ವೆಬ್ಸೈಟ್ಗಳು, ಸಾಮಾಜಿಕ ಜಾಲತಾಣ ಖಾತೆಗಳು ಅಥವಾ ಮೆಸೇಜಿಂಗ್ ಚಾನೆಲ್ಗಳಲ್ಲಿ NEET ಪ್ರಶ್ನೆ ಪತ್ರಿಕೆ ಅಥವಾ ಉತ್ತರ ಕೀ ಸಿಗುತ್ತದೆ ಎಂದು ಹೇಳುವವರ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಅಲ್ಲದೆ, ಹಣ ಪಡೆದು ಫಲಿತಾಂಶ ಬದಲಾಯಿಸುವುದಾಗಿ ಹೇಳುವ ವ್ಯಕ್ತಿಗಳು, ನಕಲಿ ಅಧಿಕಾರಿಗಳು ಅಥವಾ ಪರೀಕ್ಷಾ ಸಿಬ್ಬಂದಿಯ ಹೆಸರಿನಲ್ಲಿ ವಂಚನೆ ಮಾಡುವವರ ಬಗ್ಗೆಯೂ ದೂರು ನೀಡುವಂತೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಲಾಗಿದೆ.
ಪರೀಕ್ಷೆಗೂ ಮುನ್ನ ಪ್ರಶ್ನೆ ಪತ್ರಿಕೆಗೆ ಯಾರಿಗೂ ಪ್ರವೇಶ ಇರುವುದಿಲ್ಲ ಎಂದು NTA ಸ್ಪಷ್ಟಪಡಿಸಿದ್ದು, ನಕಲಿ ವೆಬ್ಸೈಟ್ಗಳು ಮತ್ತು ವದಂತಿಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದೆ. ಟೆಲಿಗ್ರಾಮ್ ಅರ್ಜಿಯ ವಿಚಾರಣೆ ಹಾಗೂ ಹೈಕೋರ್ಟ್ನ ಮುಂದಿನ ತೀರ್ಪು ಡಿಜಿಟಲ್ ವೇದಿಕೆಗಳ ಜವಾಬ್ದಾರಿ ಮತ್ತು ಪರೀಕ್ಷಾ ಭದ್ರತಾ ಕ್ರಮಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.





