2.5 ಕೋಟಿ ವೆಚ್ಚದ ಉಚಿತ ಡಯಾಲಿಸಿಸ್ ಕೇಂದ್ರಕ್ಕೆ ಚಾಲನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಕಾಟನ್‌ಪೇಟೆಯಲ್ಲಿ ಆರ್. ಗುಂಡೂರಾವ್ ಉಚಿತ ಡಯಾಲಿಸಿಸ್ ಕೇಂದ್ರ ಸ್ಥಾಪನೆ!

1 2025 08 22t212626.655

ಬೆಂಗಳೂರು: ಗಾಂಧಿನಗರ ಕ್ಷೇತ್ರದ ಕಾಟನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಆರ್. ಗುಂಡೂರಾವ್ ಅವರ ಸ್ಮರಣಾರ್ಥ ಸ್ಥಾಪಿತವಾದ ಉಚಿತ ಡಯಾಲಿಸಿಸ್ ಕೇಂದ್ರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು (ಶುಕ್ರವಾರ) ಚಾಲನೆ ನೀಡಿದರು. ಈ ಕೇಂದ್ರವು ರೋಗಿಗಳಿಗೆ ಉಚಿತ ಡಯಾಲಿಸಿಸ್ ಸೇವೆಯನ್ನು ಒದಗಿಸಲಿದ್ದು, ಸಾರ್ವಜನಿಕರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ರೂಪಿಸಲಾಗಿದೆ.

ಗಾಂಧಿನಗರ ಕ್ಷೇತ್ರದ ಕಾಟನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎರಡನೇ ಮಹಡಿಯಲ್ಲಿ 2.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಡಯಾಲಿಸಿಸ್ ಕೇಂದ್ರವು 10 ಆಧುನಿಕ ಡಯಾಲೈಸರ್ ಯಂತ್ರಗಳನ್ನು ಒಳಗೊಂಡಿದೆ. ಸ್ಥಳೀಯ ಶಾಸಕರೂ ಆಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸಿ ಈ ಸುಸಜ್ಜಿತ ಕೇಂದ್ರವನ್ನು ಸ್ಥಾಪಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿವಂಗತ ಆರ್. ಗುಂಡೂರಾವ್ ಅವರ ಪುಣ್ಯ ಸ್ಮರಣೆಯ ದಿನದಂದು ಉದ್ಘಾಟನೆಗೊಂಡ ಈ ಕೇಂದ್ರದ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, “ರಾಜ್ಯಾದ್ಯಂತ ಸರ್ಕಾರಿ ಡಯಾಲಿಸಿಸ್ ಕೇಂದ್ರಗಳು ಉತ್ತಮ ಸೇವೆಯನ್ನು ಒದಗಿಸುತ್ತಿವೆ. ರಾಜ್ಯದ ಎಲ್ಲ ಡಯಾಲಿಸಿಸ್ ಕೇಂದ್ರಗಳಲ್ಲಿ 800 ಏಕಬಳಕೆಯ ಡಯಾಲೈಸರ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಸೋಂಕುರಹಿತ ಮತ್ತು ಗುಣಮಟ್ಟದ ಚಿಕಿತ್ಸೆಗೆ ಆದ್ಯತೆ ನೀಡಲಾಗಿದೆ. ಈ ಏಕಬಳಕೆಯ ಡಯಾಲೈಸರ್‌ಗಳಿಂದ ರೋಗಿಗಳಿಗೆ ಸುರಕ್ಷಿತ ಸೇವೆ ದೊರೆಯುತ್ತಿದೆ ಮತ್ತು ಇದಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ,” ಎಂದರು.

ಅವರು ಮುಂದುವರಿದು, “ಮಾಜಿ ಮುಖ್ಯಮಂತ್ರಿ ದಿವಂಗತ ಆರ್. ಗುಂಡೂರಾವ್ ಅವರ ಸ್ಮರಣಾರ್ಥ ಈ ಉಚಿತ ಡಯಾಲಿಸಿಸ್ ಕೇಂದ್ರವನ್ನು ಗಾಂಧಿನಗರ ಕ್ಷೇತ್ರದ ಕಾಟನ್‌ಪೇಟೆಯಲ್ಲಿ ಸ್ಥಾಪಿಸಲಾಗಿದೆ. ರೋಗಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಈ ಕೇಂದ್ರವು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಮಾದರಿಯಡಿ ಕಾರ್ಯನಿರ್ವಹಿಸಲಿದ್ದು, ಕಿಡ್ನಿ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತವಾಗಿ ಗುಣಮಟ್ಟದ ಡಯಾಲಿಸಿಸ್ ಸೇವೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಏಕಬಳಕೆಯ ಡಯಾಲೈಸರ್ ಯಂತ್ರಗಳ ಬಳಕೆಯಿಂದ ಸೋಂಕಿನ ಅಪಾಯವನ್ನು ತಗ್ಗಿಸಲಾಗಿದೆ, ಇದರಿಂದ ರೋಗಿಗಳಿಗೆ ಸುರಕ್ಷಿತ ಚಿಕಿತ್ಸೆ ಲಭ್ಯವಾಗಲಿದೆ.

Exit mobile version