ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕರಿಂದಲೇ ಅಸಮಾಧಾನದ ಸ್ವರ ಮೇಲೆದ್ದಿದೆ. ವಸತಿ ಯೋಜನೆಯ ಮನೆ ಹಂಚಿಕೆಯಲ್ಲಿ ಲಂಚ ಆರೋಪದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಶಾಸಕ ರಾಜು ಕಾಗೆ ಸರ್ಕಾರದ ಆಡಳಿತ ವ್ಯವಸ್ಥೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ರಾಜೀನಾಮೆಯ ಬೆದರಿಕೆ ಹಾಕಿದ್ದಾರೆ. “ಎರಡು ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ,” ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜು ಕಾಗೆ, “ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ. ನನ್ನ ಕ್ಷೇತ್ರಕ್ಕೆ 25 ಕೋಟಿ ರೂ. ಅನುದಾನ ಘೋಷಿಸಿದರೂ ಇನ್ನೂ ಆದೇಶ ಬಂದಿಲ್ಲ. ಇಂತಹ ಆಡಳಿತದಿಂದ ನನಗೆ ತೀವ್ರ ನೋವಾಗಿದೆ. ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದು ಸುಳ್ಳಲ್ಲ, ಅವರು ಸತ್ಯವನ್ನೇ ತಿಳಿಸಿದ್ದಾರೆ. ಈ ಸ್ಥಿತಿಯಲ್ಲಿ ನಾನು ರಾಜೀನಾಮೆ ನೀಡುವ ಸಾಧ್ಯತೆ ಇದೆ,” ಎಂದು ಕಿಡಿಕಾರಿದ್ದಾರೆ.
ರಾಜು ಕಾಗೆಯವರ ಈ ಹೇಳಿಕೆಯು ರಾಜ್ಯ ಕಾಂಗ್ರೆಸ್ನ ಒಳಗಿನ ಭಿನ್ನಮತವನ್ನು ಎತ್ತಿ ತೋರಿಸಿದ್ದು, ಸರ್ಕಾರದ ಆಡಳಿತದ ಮೇಲಿನ ಅಸಮಾಧಾನವನ್ನು ಮತ್ತಷ್ಟು ತೀವ್ರಗೊಳಿಸಿದೆ. ವಿಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿವೆ.