ರಾಮನಗರ: ರಾಮನಗರ ತಾಲೂಕಿನ ವಡೇರಹಳ್ಳಿ ಗ್ರಾಮದಲ್ಲಿ ಶನಿವಾರ (ಮೇ 3, 2025) ಬೆಳಗ್ಗೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಮನೆಯೊಂದಕ್ಕೆ ಬೆಂಕಿ ತಗುಲಿ, ಗೃಹೋಪಯೋಗಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ವಡೇರಹಳ್ಳಿ ಗ್ರಾಮದ ಗುರು ಎಂಬವರಿಗೆ ಸೇರಿದ ಮನೆಯಲ್ಲಿ ಎಸಿ ಯಂತ್ರದಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮನೆಗೆ ವ್ಯಾಪಿಸಿ, ಮನೆಯಲ್ಲಿದ್ದ ಎಲ್ಲ ವಸ್ತುಗಳು ಭಸ್ಮವಾಗಿವೆ. ಘಟನೆಯ ಸಮಯದಲ್ಲಿ ಮನೆಯವರೆಲ್ಲ ಮಲಗಿದ್ದರು. ಬೆಂಕಿಯ ಶಾಖ ತಗುಲುತ್ತಿದ್ದಂತೆ ಮನೆಯವರು ಎಚ್ಚರಗೊಂಡು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.
ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಾವುದೇ ಜೀವಹಾನಿಯಾಗಿಲ್ಲ.
