ಶಿವಮೊಗ್ಗ ಸೆ. 10: ತುಂಗಾ ಸೇತುವೆ ಮೇಲಿನಿಂದ ಯುವತಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅದೃಷ್ಟವಶಾತ್ ನೀರಿನಲ್ಲಿ ಮುಳುಗದೆ ದಡ ಸೇರಿದ್ದ ಯುವತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ದಿದ್ದಾರೆ.
ಶಿವಮೊಗ್ಗದ ಹೊಸಮನೆ ಬಡಾವಣೆ ನಿವಾಸಿ ದಿವಿತಾ (22) ಆತ್ಮಹತ್ಯೆಗೆ ಯತ್ನಿಸಿರುವ ಯುವತಿ ಎಂದು ಗುರುತಿಸಲಾಗಿದೆ. ತುಂಗಾ ನದಿಗೆ ಹಾರಿದ ಬಳಿಕ ಕೆಲಕಾಲ ನದಿಯಲ್ಲಿದ್ದ ಯುವತಿ, ನೀರಿನಲ್ಲಿ ಮುಳುಗದೆ ದಡದತ್ತ ಬಂದು ಕುಳಿತಿದ್ದರು ಎನ್ನಲಾಗಿದೆ.
ಯುವತಿ ಸೇತುವೆಯಿಂದ ನದಿಗೆ ಹಾರಿರುವ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದಾರೆ. ತಕ್ಷಣ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ಯುವತಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಯ ಬಳಿಕ ಯುವತಿಯನ್ನು ಪ್ರಥಮ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಯುವತಿ ಆತ್ಮಹತ್ಯೆಗೆ ಯತ್ನಿಸಲು ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ. ಘಟನೆಯ ಸಂಪೂರ್ಣ ವಿವರಗಳು ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ.
ಅಗ್ನಿಶಾಮಕ ದಳದ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಯುವತಿಯ ಪ್ರಾಣ ಉಳಿದಿದ್ದು, ಅವರನ್ನು ಸ್ಥಳೀಯರು ಶ್ಲಾಘಿಸಿದ್ದಾರೆ.
