ತುಮಕೂರು ಆ 27: ಈ ಹಿಂದೆ ದಯಾಮರಣ ಕೋರಿ ಮನವಿ ಸಲ್ಲಿಸಿದ್ದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಶಿರಾ ನಗರದ ಹೊರವಲಯದಲ್ಲಿ ನಡೆದಿದೆ.
ಮೃತರನ್ನು ರಾಬಿಯಾ ಪಾಷಾ (39) ಹಾಗೂ ಅವರ ಮಕ್ಕಳಾದ ತಮನ್ನಾ (9) ಮತ್ತು ಸಿಮ್ರಾನ್ (5) ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಿದ್ದರಾಮಯ್ಯ ಬಳಿ ಮನವಿ ಮಾಡಿದ್ದ ರಾಬಿಯಾ
2025ರಲ್ಲಿ ತುಮಕೂರಿನಲ್ಲಿ ನಡೆದ ಸರ್ಕಾರದ ವಿವಿಧ ಸವಲತ್ತುಗಳ ವಿತರಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದ ಸಂದರ್ಭದಲ್ಲಿ ರಾಬಿಯಾ ತಮ್ಮ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದರು.
ಅವರ ಮನವಿಗೆ ಸ್ಪಂದಿಸಿದ್ದ ಸಿದ್ದರಾಮಯ್ಯ ಅವರು ರಾಬಿಯಾಗೆ 20×30 ಅಳತೆಯ ನಿವೇಶನ ಮಂಜೂರು ಮಾಡಲು ಆದೇಶಿಸಿದ್ದರು ಎನ್ನಲಾಗಿದೆ. ಆದರೆ ಆದೇಶವಾಗಿ ಸುಮಾರು ಒಂದೂವರೆ ವರ್ಷ ಕಳೆದರೂ ನಿವೇಶನ ದೊರೆಯದ ಹಿನ್ನೆಲೆಯಲ್ಲಿ ರಾಬಿಯಾ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
ದಯಾಮರಣಕ್ಕೆ ಮನವಿ
ಈ ಹಿನ್ನೆಲೆಯಲ್ಲಿ ಅಂದಿನ ಗೃಹ ಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ತುಮಕೂರಿನಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲೂ ರಾಬಿಯಾ ತಮ್ಮ ಅಳಲು ತೋಡಿಕೊಂಡಿದ್ದರು. ಮುಖ್ಯಮಂತ್ರಿಗಳ ಆದೇಶದ ಬಳಿಕವೂ ನಿವೇಶನ ನೀಡಿಲ್ಲ ಎಂದು ಆರೋಪಿಸಿ, ತಮಗೆ ದಯಾಮರಣ ನೀಡುವಂತೆ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದರು.
ನಂತರ ರಾಬಿಯಾರನ್ನು ಕರೆಸಿ ಸಮಸ್ಯೆ ಆಲಿಸಿದ್ದ ಪರಮೇಶ್ವರ್ ಅವರು, ಶಿರಾ ನಗರದ ಹೊರವಲಯದಲ್ಲಿ ಸರ್ಕಾರದ ವತಿಯಿಂದ ನಿವೇಶನ ಒದಗಿಸಿದ್ದರು ಎಂದು ತಿಳಿದುಬಂದಿದೆ. ಸರ್ಕಾರದ ವತಿಯಿಂದ ಜಾಗ ನೀಡಲಾಗಿದ್ದು, ಮನೆ ನಿರ್ಮಿಸಿಕೊಡುವ ಪ್ರಕ್ರಿಯೆಯೂ ನಡೆದಿತ್ತು ಎನ್ನಲಾಗಿದೆ.
ಹೀಗಿರುವಾಗ ರಾಬಿಯಾ ತಮ್ಮ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.





