ಯಾದಗಿರಿ: ಸಾಮಾಜಿಕ ಜಾಲತಾಣದಲ್ಲಿ ಧರ್ಮ ಮತ್ತು ಜನಾಂಗಗಳ ನಡುವೆ ದ್ವೇಷ ಹರಡುವ ಪ್ರಚೋದನಾಕಾರಿ ವಿಡಿಯೋವನ್ನು ಹಂಚಿಕೊಂಡ ಆರೋಪದ ಮೇಲೆ ಯಾದಗಿರಿ ನಗರದ ನಿವಾಸಿ ಜಾಫರ್ ಖಾನ್ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ‘ಕಲ್ಮಾ ಪಠಣ’ ವಿಷಯಕ್ಕೆ ಸಂಬಂಧಿಸಿದ ವಿವಾದಾತ್ಮಕ ವಿಡಿಯೋ ಪೋಸ್ಟ್ ಮಾಡಿದ ಆರೋಪದ ಮೇಲೆ ಜಾಫರ್ ವಿರುದ್ಧ ಬಿಎನ್ಎಸ್ ಕಾಯ್ದೆಯ ಸೆಕ್ಷನ್ 192 ಮತ್ತು 353(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಜಾಫರ್ ಖಾನ್ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ, ಕೆಲವರು ಕಲ್ಮಾ ಪಠಣಕ್ಕೆ ಸಂಬಂಧಿಸಿದ ಕರಪತ್ರಗಳನ್ನು ಕಾಲಿನಿಂದ ಒದ್ದಿರುವ ದೃಶ್ಯವಿತ್ತು. ಈ ವಿಡಿಯೋದ ಜೊತೆಗೆ ಆರೋಪಿಯು, “ಕಲ್ಮಾಗೆ ಅವಮಾನ ಮಾಡಿದರೆ ನಾನು ಜೀವ ಕೊಡಲು ಸಿದ್ಧನಿದ್ದೇನೆ, ಜೀವ ತೆಗೆಯಲೂ ಸಿದ್ಧನಿದ್ದೇನೆ,” ಎಂದು ಬರೆದಿದ್ದ. ಮತ್ತೊಂದು ಪೋಸ್ಟ್ನಲ್ಲಿ, “ನಮ್ಮವರಾದರೂ, ಬೇರೆಯವರಾದರೂ, ಜಗತ್ತಿನ ಯಾರ ಜೊತೆಯೇ ಆದರೂ ಪ್ರತೀಕಾರ ತೆಗೆದುಕೊಳ್ಳಿ. ಆದರೆ ಕಲ್ಮಾ ಜೊತೆ ಅಲ್ಲ,” ಎಂದು ಧಾರ್ಮಿಕ ದ್ವೇಷವನ್ನು ಪ್ರಚೋದಿಸುವಂತೆ ಹೇಳಿಕೊಂಡಿದ್ದ. ಈ ಪೋಸ್ಟ್ಗಳು ಸ್ಥಳೀಯರ ಗಮನಕ್ಕೆ ಬಂದಾಗ, ಯಾದಗಿರಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಯಿತು, ಮತ್ತು ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಜಾಫರ್ನನ್ನು ಬಂಧಿಸಿದರು.
ಈ ಘಟನೆಯು ಕರ್ನಾಟಕದಲ್ಲಿ ಇತ್ತೀಚೆಗೆ ವರದಿಯಾದ ಇಂತಹ ಕೆಲವು ಪ್ರಕರಣಗಳ ಸರಣಿಯ ಭಾಗವಾಗಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ನಡೆಸಿದ ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ, ಕರ್ನಾಟಕದ ಕೆಲವು ಭಾಗಗಳಲ್ಲಿ ಪಾಕಿಸ್ತಾನ ಪರ ಘೋಷಣೆಗಳು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ಗಳು ವರದಿಯಾಗಿವೆ.
ಇತ್ತೀಚಗೆ ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ಛತ್ತೀಸ್ಗಢ ಮೂಲದ ಟೆಕ್ಕಿ ಶುಭಾಂಶು ಶುಕ್ಲಾ ಎಂಬಾತ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ. ದಕ್ಷಿಣ ಕನ್ನಡದ ಬೆಳ್ತಂಗಡಿಯ ಬೆಳಾಲು ನಿವಾಸಿ ರೇಷ್ಮಾ ಎನ್ ಬಾರಿಗ ಎಂಬ ವಿದ್ಯಾರ್ಥಿನಿ ತನ್ನ ಇನ್ಸ್ಟಾಗ್ರಾಮ್ನಲ್ಲಿ “ದಿಕ್ಕಾರ ಆಪರೇಷನ್ ಸಿಂದೂರ್” ಎಂಬ ಹ್ಯಾಶ್ಟ್ಯಾಗ್ನೊಂದಿಗೆ ವಿವಾದಾತ್ಮಕ ಪೋಸ್ಟ್ ಹಾಕಿದ್ದಳು. ಕಾರ್ಕಳದ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದ ಗೋಡೆಯ ಮೇಲೆ ಓರ್ವ ವಿದ್ಯಾರ್ಥಿನಿ “ಹಿಂದೂಸ್ಥಾನ್ ನಹಿ ಮುಸ್ಲಿಂಸ್ಥಾನ ಬೋಲ್” ಮತ್ತು “ಮುಸ್ಲಿಂ ಜಿಂದಾಬಾದ್, ಹಿಂದೂ ಫಕ್ ಆಫ್” ಎಂದು ಬರೆದಿದ್ದಳು. ಇದೇ ರೀತಿ, ಪ್ರಧಾನಿ ನರೇಂದ್ರ ಮೋದಿಯವರ ಮನೆಯ ಮೇಲೆ ಬಾಂಬ್ ದಾಳಿ ನಡೆಸುವ ಬಗ್ಗೆ ವಿಡಿಯೋ ವೈರಲ್ ಮಾಡಿದ ಯುವಕನನ್ನು ಬೆಂಗಳೂರಿನ ಬಂಡೆಪಾಳ್ಯ ಪೊಲೀಸರು ಬಂಧಿಸಿದ್ದರು.
ಈ ಘಟನೆಗಳು ಕರ್ನಾಟಕದಲ್ಲಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವಂತಿವೆ. ಪೊಲೀಸರು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಗಾವಲು ಇರಿಸಿದ್ದಾರೆ. “ಧಾರ್ಮಿಕ ದ್ವೇಷ ಹರಡುವ ಯಾವುದೇ ಕೃತ್ಯವನ್ನು ಸಹಿಸಲಾಗದು. ಸಾಮಾಜಿಕ ಸಾಮರಸ್ಯವನ್ನು ಕಾಪಾಡಲು ಕಠಿಣ ಕ್ರಮ ಕೈಗೊಳ್ಳಲಾಗುವುದು,” ಎಂದು ಯಾದಗಿರಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಾಫರ್ ಖಾನ್ನ ಬಂಧನದೊಂದಿಗೆ, ಇಂತಹ ಪ್ರಚೋದನಾಕಾರಿ ಕೃತ್ಯಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತು ನೀಡಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಜವಾಬ್ದಾರಿಯುತವಾಗಿ ವರ್ತಿಸುವಂತೆ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.