ಬೆಂಗಳೂರು (ಜೂನ್ 21): ಕರ್ನಾಟಕ ರಾಜ್ಯದಲ್ಲಿ ಹಲವು ವರ್ಷಗಳಿಂದ ಸ್ಥಗಿತಗೊಂಡಿರುವ ವಿದ್ಯಾರ್ಥಿ ಚುನಾವಣೆಗಳನ್ನು ಈ ವರ್ಷದಿಂದಲೇ ಪುನರಾರಂಭಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಬಿಕೆ ಹರಿಪ್ರಸಾದ್ ಅವರಿಗೆ ಅಧಿಕಾರ ಹಸ್ತಾಂತರಿಸಿ ಮಾತನಾಡಿದ ಅವರು, ಯುವಜನರಿಗೆ ರಾಜಕೀಯ ಹಾಗೂ ನಾಯಕತ್ವದ ಅವಕಾಶ ಕಲ್ಪಿಸುವ ಉದ್ದೇಶದಿಂದ ವಿದ್ಯಾರ್ಥಿ ಚುನಾವಣೆಗಳನ್ನು ಮರುಜಾರಿಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಿವಕುಮಾರ್ ತಿಳಿಸಿದರು.
ತಮ್ಮ ರಾಜಕೀಯ ಪಯಣವನ್ನು ನೆನಪಿಸಿಕೊಂಡ ಶಿವಕುಮಾರ್, 2020ರ ಮಾರ್ಚ್ 10ರಂದು ಸೋನಿಯಾ ಗಾಂಧಿ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ನೀಡಿದ ಕ್ಷಣವನ್ನು ಸ್ಮರಿಸಿದರು. ಕೋವಿಡ್ ಕಾರಣದಿಂದ ಅಂದು ದೊಡ್ಡ ಸಮಾರಂಭ ನಡೆಸಲು ಸಾಧ್ಯವಾಗಿರಲಿಲ್ಲ. ಜೂಮ್ ಕಾಲ್ ಮೂಲಕವೇ ಅಧಿಕಾರ ಸ್ವೀಕರಿಸಿದ್ದೆ. ಪಕ್ಷದ ಕಾರ್ಯಕರ್ತರು ಹಾಗೂ ನಾಯಕರ ಸಹಕಾರದಿಂದ ಪಕ್ಷವನ್ನು ಬಲಪಡಿಸಲು ಪ್ರಯತ್ನಿಸಿದ್ದೇನೆ, ನನ್ನಿಂದಲೂ ತಪ್ಪು ಆಗಿರಬಹುದು ಎಂದು ಹೇಳಿದರು.
ಕೋವಿಡ್ ಅವಧಿಯಲ್ಲಿ ಕಾಂಗ್ರೆಸ್ ಪಕ್ಷ ಕೈಗೊಂಡ ಸೇವಾ ಕಾರ್ಯಗಳ ಬಗ್ಗೆ ಮಾತನಾಡಿದ ಡಿಕೆಶಿ ಅವರು, ಕೋವಿಡ್ ಕಾಲದಲ್ಲಿ ಮನೆಯಿಂದ ಹೊರಗೆ ಹೋಗೋಕೆ ಆಗಿರಲಿಲ್ಲ. ಅಂತಹ ಸಮಯದಲ್ಲಿ ಲಕ್ಷಾಂತರ ಜನರಿಗೆ ಆಹಾರ ಕಿಟ್ಗಳನ್ನು ವಿತರಿಸಿದ್ದೇವೆ, ವಲಸೆ ಕಾರ್ಮಿಕರಿಗೆ ಬಸ್ ಹಾಗೂ ರೈಲು ವ್ಯವಸ್ಥೆ ಮಾಡಿಕೊಟ್ಟಿದ್ದೇವೆ. ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ನೆರವಾಗಿದ್ದೇವೆ ಎಂದು ತಿಳಿಸಿದರು.
ಕೃಷಿ ಕಾಯ್ದೆಗಳ ವಿರುದ್ಧ, ಬೆಲೆ ಏರಿಕೆ ವಿರುದ್ಧ ಹಾಗೂ ಹಲವು ಜನಪರ ಹೋರಾಟಗಳಲ್ಲಿ ಕಾಂಗ್ರೆಸ್ ಸಕ್ರಿಯವಾಗಿ ಪಾಲ್ಗೊಂಡಿದೆ ಎಂದು ಅವರು ಹೇಳಿದರು. ಕೃಷ್ಣಾ-ಕಾವೇರಿ ನೀರು ಹಂಚಿಕೆ ಮತ್ತು ಮೇಕೆದಾಟು ಯೋಜನೆ ಕುರಿತ ಹೋರಾಟಗಳನ್ನೂ ಪಕ್ಷ ಮುನ್ನಡೆಸಿದೆ. ಆ ಹೋರಾಟಗಳ ಫಲವಾಗಿ ಕಾಂಗ್ರೆಸ್ ಜನರ ವಿಶ್ವಾಸ ಗಳಿಸಿ ಅಧಿಕಾರಕ್ಕೆ ಬಂದಿದೆ ಎಂದು ಅಭಿಪ್ರಾಯಪಟ್ಟರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ದೇಶಕ್ಕೆ ಮಾದರಿಯಾಗಿದೆ ಎಂದು ಪ್ರಶಂಸಿಸಿದ ಶಿವಕುಮಾರ್, ಹೊಸ ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರ ನೇಮಕ ಪಕ್ಷಕ್ಕೆ ಮತ್ತಷ್ಟು ಬಲ ನೀಡಲಿದೆ ಎಂದು ಹೇಳಿದರು. 2028ರ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ಗುರಿಯೊಂದಿಗೆ ಎಲ್ಲ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಕರೆ ನೀಡಿದರು.
ಇದೇ ವೇಳೆ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯದ ಪ್ರತಿಯೊಂದು ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಹೆಚ್ಚುವರಿಯಾಗಿ ಐದು ಕಾರ್ಯಕರ್ತರನ್ನು ಗ್ಯಾರಂಟಿ ಸಮಿತಿಗೆ ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ಕ್ರಮದ ಮೂಲಕ ಸರ್ಕಾರದ ಯೋಜನೆಗಳನ್ನು ಜನರಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದು ಅವರು ಹೇಳಿದರು.





