ಬಳ್ಳಾರಿ, ಸೆ.10: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ ಹಾಗೂ ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಕೈಗೊಂಡಿದ್ದ ಬೃಹತ್ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಇಂದು ಅದ್ಧೂರಿ ತೆರೆ ಬೀಳಲಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರಿನಿಂದ ಆರಂಭಗೊಂಡಿದ್ದ ಪಾದಯಾತ್ರೆ ವಿವಿಧ ತಾಲೂಕುಗಳ ಮೂಲಕ ಸಾಗಿ ಇದೀಗ ಬಳ್ಳಾರಿ ನಗರ ತಲುಪಿದ್ದು, ನಗರದ ಎಕ್ಸ್ ಮುನ್ಸಿಪಲ್ ಶಾಲಾ ಮೈದಾನದಲ್ಲಿ ಇಂದು ಬೃಹತ್ ಸಮಾರೋಪ ಸಮಾವೇಶ ನಡೆಯಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆದ ಈ ಪಾದಯಾತ್ರೆಗೆ ವಿವಿಧ ಹಂತಗಳಲ್ಲಿ ಕಾರ್ಯಕರ್ತರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸಾವಿರಾರು ಬಿಜೆಪಿ ಕಾರ್ಯಕರ್ತರು ಹಾಗೂ ಪಕ್ಷದ ರಾಜ್ಯಮಟ್ಟದ ನಾಯಕರು ಸಮಾರೋಪ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆ ಗಣಿನಾಡು ಬಳ್ಳಾರಿಯಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಗರಿಗೆದರಿವೆ.
ಕಾಂಗ್ರೆಸ್ ಕೋಟೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ
ಬಳ್ಳಾರಿ ಕಾಂಗ್ರೆಸ್ನ ಪ್ರಬಲ ನೆಲೆಗಳಲ್ಲಿ ಒಂದಾಗಿರುವ ಹಿನ್ನೆಲೆ ಇಂದಿನ ಸಮಾವೇಶಕ್ಕೆ ರಾಜಕೀಯ ಮಹತ್ವವೂ ಹೆಚ್ಚಾಗಿದೆ. ಪಾದಯಾತ್ರೆಯುದ್ದಕ್ಕೂ ರೈತರ ಸಮಸ್ಯೆಗಳು, ಆಡಳಿತ ವೈಫಲ್ಯ, ಭ್ರಷ್ಟಾಚಾರ ಸೇರಿದಂತೆ ಹಲವು ವಿಚಾರಗಳನ್ನು ಬಿಜೆಪಿ ನಾಯಕರು ಪ್ರಸ್ತಾಪಿಸಿದ್ದಾರೆ. ಇದೀಗ ಬಳ್ಳಾರಿಯಲ್ಲಿ ನಡೆಯಲಿರುವ ಸಮಾರೋಪ ಸಮಾವೇಶದ ಮೂಲಕ ಬಿಜೆಪಿ ತನ್ನ ಸಂಘಟನಾ ಶಕ್ತಿ ಪ್ರದರ್ಶಿಸಲು ಸಜ್ಜಾಗಿದೆ.
ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಸಹಸ್ರಾರು ಕಾರ್ಯಕರ್ತರು ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ನಗರದ ಮುನ್ಸಿಪಲ್ ಮೈದಾನದಲ್ಲಿ ಕೇಸರಿ ಬೃಹತ್ ಸಮಾವೇಶ ನಡೆಯಲಿದೆ. ರಾಜ್ಯದ ಪ್ರಮುಖ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಸಾಧ್ಯತೆ ಇದೆ.
ಬಿಗಿ ಪೊಲೀಸ್ ಬಂದೋಬಸ್ತ್
ಸಮಾವೇಶಕ್ಕೆ ಸಾವಿರಾರು ಜನರು ಆಗಮಿಸುವ ಹಿನ್ನೆಲೆ ಬಳ್ಳಾರಿ ನಗರದಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕೈಗೊಂಡಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ ಡಿ. ಪನ್ನೇಕರ್ ಅವರ ನೇತೃತ್ವದಲ್ಲಿ ಭದ್ರತೆ ನಿಯೋಜಿಸಲಾಗಿದೆ.
ಮೂವರು ಎಸ್ಪಿ, ನಾಲ್ವರು ಹೆಚ್ಚುವರಿ ಎಸ್ಪಿ, 12 ಡಿವೈಎಸ್ಪಿ, 40 ಸಿಐ ಹಾಗೂ 60ಕ್ಕೂ ಹೆಚ್ಚು ಎಸ್ಐ ಸೇರಿದಂತೆ 1400ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಇದರ ಜೊತೆಗೆ ಕೆಎಸ್ಆರ್ಪಿ, ಐಆರ್ಬಿ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹಲವು ತುಕಡಿಗಳನ್ನು ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಯೋಜಿಸಲಾಗಿದೆ.
ಸಮಾವೇಶದ ಸ್ಥಳ, ಪ್ರಮುಖ ರಸ್ತೆಗಳು, ಪ್ರವೇಶ ಮತ್ತು ನಿರ್ಗಮನ ಮಾರ್ಗಗಳು ಹಾಗೂ ಪಾರ್ಕಿಂಗ್ ಪ್ರದೇಶಗಳಲ್ಲಿ ಪೊಲೀಸರು ವಿಶೇಷ ನಿಗಾ ವಹಿಸಲಿದ್ದಾರೆ.
ವಾಹನ ಸಂಚಾರಕ್ಕೆ ಮಾರ್ಗ ಬದಲಾವಣೆ
ಸಮಾವೇಶದ ಹಿನ್ನೆಲೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಗಾಡಿಗಿ ಚೆನ್ನಪ್ಪ ವೃತ್ತ, ಇಂದಿರಾ ವೃತ್ತ, ದುರ್ಗಮ್ಮ ದೇವಾಲಯ ವೃತ್ತ, ಎಸ್ಪಿ ವೃತ್ತ ಹಾಗೂ ಎಚ್.ಆರ್. ಗವಿಯಪ್ಪ ವೃತ್ತದ ಕಡೆಗೆ ಸಾಗುವ ಕೆಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ.
ಸಿರುಗುಪ್ಪ ಕಡೆಯಿಂದ ಬರುವ ವಾಹನಗಳು ವಾಲ್ಮೀಕಿ ವೃತ್ತದ ಮೂಲಕ ಮೋಕಾ ರಸ್ತೆಯನ್ನು ಬಳಸುವಂತೆ ಸೂಚಿಸಲಾಗಿದೆ. ಬೆಂಗಳೂರು ಕಡೆಯಿಂದ ಬರುವ ವಾಹನಗಳು ಅನಂತಪುರ ಬೈಪಾಸ್ ರಸ್ತೆ ಮೂಲಕ ಸಂಚರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಕಾರ್ಯಕರ್ತರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್
ಸಮಾವೇಶಕ್ಕೆ ಆಗಮಿಸುವ ಕಾರ್ಯಕರ್ತರ ವಾಹನಗಳಿಗಾಗಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಬಸ್ಸುಗಳಲ್ಲಿ ಆಗಮಿಸುವ ಕಾರ್ಯಕರ್ತರನ್ನು ಸಂಗಮ್ ವೃತ್ತದ ಬಳಿ ಇಳಿಸಿ, ಬಸ್ಗಳನ್ನು ಅನಂತಪುರ ರಸ್ತೆ ಬೈಪಾಸ್ ಹಾಗೂ ಮೋಕಾ ರಸ್ತೆಯ ನಿಗದಿತ ಸ್ಥಳಗಳಲ್ಲಿ ನಿಲ್ಲಿಸಲು ಸೂಚಿಸಲಾಗಿದೆ.
ಕಾರು ಮತ್ತು ದ್ವಿಚಕ್ರ ವಾಹನಗಳಿಗಾಗಿ ಸಂಗಮ್ ವೃತ್ತದಿಂದ ಕೂಲ್ ಕಾರ್ನರ್ ಹಾಗೂ ಅನಂತಪುರ ರಸ್ತೆಯ ಬದಿಗಳಲ್ಲಿ ಪ್ರತ್ಯೇಕ ಪಾರ್ಕಿಂಗ್ ಸ್ಥಳ ಗುರುತಿಸಲಾಗಿದೆ.





