ಚಿತ್ರದುರ್ಗ: ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್ ಅವರ ಅಂತ್ಯಕ್ರಿಯೆ ಇಂದು ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಡಿ. ಸುಧಾಕರ್ ಅವರ ನಿಧನಕ್ಕೆ ಗೌರವ ಸೂಚಕವಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು ಹಾಗೂ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಭಾನುವಾರ ಬೆಂಗಳೂರಿನಿಂದ ಡಿ. ಸುಧಾಕರ್ ಅವರ ಪಾರ್ಥಿವ ಶರೀರವನ್ನು ಅವರು ಪ್ರತಿನಿಧಿಸುತ್ತಿದ್ದ ಹಿರಿಯೂರು ಕ್ಷೇತ್ರಕ್ಕೆ ತರಲಾಗಿತ್ತು. ಅಲ್ಲಿ ಸಾವಿರಾರು ಅಭಿಮಾನಿಗಳು, ಸಾರ್ವಜನಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಪಾರ್ಥಿವ ಶರೀರವನ್ನು ಚಳ್ಳಕೆರೆಯಲ್ಲಿರುವ ಅವರ ನಿವಾಸ ‘ಗೊಮ್ಮಟ ನಿಲಯ’ಕ್ಕೆ ಕೊಂಡೊಯ್ಯಲಾಯಿತು.
ಇಂದು ಬೆಳಗ್ಗಿನಿಂದಲೇ ಚಳ್ಳಕೆರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನದವರೆಗೆ ಸಾರ್ವಜನಿಕರಿಗೆ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನಂತರ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ. ಚಳ್ಳಕೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಿ. ಸುಧಾಕರ್ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆ ಸೇರಿದಂತೆ ವಿವಿಧ ಭಾಗಗಳಿಂದ ಜನರು ಆಗಮಿಸುತ್ತಿದ್ದು, ಭಾರೀ ಜನಸ್ತೋಮ ಸೇರುವ ನಿರೀಕ್ಷೆಯಿದೆ.
ಅಂತಿಮ ಯಾತ್ರೆ ಬಳಿಕ ಚಿತ್ರದುರ್ಗ ರಸ್ತೆಯ ವಿಠ್ಠಲ ನಗರದಲ್ಲಿರುವ ಶಾಂತಕುಮಾರ್ ಮೆಮೋರಿಯಲ್ ಶಟಲ್ ಕೋರ್ಟ್ ಆವರಣಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತದೆ. ಅಲ್ಲಿ ಜೈನ ಧರ್ಮದ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು. ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಸಲ್ಲಿಸಲಾಗುತ್ತಿದ್ದು, ರಾಜ್ಯ ಸರ್ಕಾರದ ವತಿಯಿಂದ ಸಂಪೂರ್ಣ ಸರ್ಕಾರಿ ಗೌರವದೊಂದಿಗೆ ಅಂತಿಮ ವಿಧಿವಿಧಾನಗಳು ನಡೆಯಲಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವು ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ಹಿರಿಯ ಕಾಂಗ್ರೆಸ್ ನಾಯಕರು ಅಂತಿಮ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.
ಡಿ. ಸುಧಾಕರ್ ಅವರು ಚಿತ್ರದುರ್ಗ ಜಿಲ್ಲೆಯ ರಾಜಕೀಯದಲ್ಲಿ ಪ್ರಭಾವಿ ನಾಯಕನಾಗಿದ್ದು, ಹಿರಿಯೂರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದರು. ಸಚಿವರಾಗಿದ್ದ ಅವಧಿಯಲ್ಲಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯಲ್ಲಿ ಹಲವು ಯೋಜನೆಗಳನ್ನು ರೂಪಿಸಿದ್ದರು. ಸರಳ ವ್ಯಕ್ತಿತ್ವ ಮತ್ತು ಜನಸಾಮಾನ್ಯರೊಂದಿಗೆ ಬೆರೆಯುವ ಗುಣದಿಂದ ಅವರು ಅಪಾರ ಜನಮನ್ನಣೆ ಗಳಿಸಿದ್ದರು.
ಇವರ ನಿಧನದ ಹಿನ್ನೆಲೆ ರಾಜ್ಯ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ. ಈ ಅವಧಿಯಲ್ಲಿ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಿ ಹಾರಿಸಲಾಗುತ್ತದೆ. ಮನರಂಜನಾ ಕಾರ್ಯಕ್ರಮಗಳನ್ನು ಸಹ ನಿಯಂತ್ರಿಸಲು ಸೂಚನೆ ನೀಡಲಾಗಿದೆ.
ಇನ್ನೊಂದೆಡೆ, ಡಿ. ಸುಧಾಕರ್ ಅವರ ನಿಧನಕ್ಕೆ ಗೌರವ ಸೂಚಕವಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು ಹಾಗೂ ಕಾಲೇಜುಗಳಿಗೆ ರಜೆ ನೀಡಲಾಗಿದೆ.





