ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಸತ್ಯನಿಕೇತನ ಪ್ರದೇಶದಲ್ಲಿ ಸಂಭವಿಸಿದ ಪಿಜಿ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಭಾನುವಾರ ಮಧ್ಯಾಹ್ನ ಸುಮಾರು 30 ವರ್ಷ ಹಳೆಯ ಐದು ಅಂತಸ್ತಿನ ಪೇಯಿಂಗ್ ಗೆಸ್ಟ್ ಕಟ್ಟಡ ಏಕಾಏಕಿ ಕುಸಿದ ಪರಿಣಾಮ ಹಲವರು ಅವಶೇಷಗಳಡಿ ಸಿಲುಕಿದ್ದರು. ಘಟನೆ ಬಳಿಕ ತಕ್ಷಣ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳ, ಪೊಲೀಸರು ಹಾಗೂ ರಕ್ಷಣಾ ತಂಡಗಳು 13 ಮಂದಿಯನ್ನು ಸುರಕ್ಷಿತವಾಗಿ ಹೊರತೆಗೆದಿವೆ.
ಅವಶೇಷಗಳಡಿ ಸಿಲುಕಿದ್ದವರನ್ನು ರಕ್ಷಿಸುವ ಕಾರ್ಯಾಚರಣೆ ಹಲವು ಗಂಟೆಗಳ ಕಾಲ ನಡೆಯಿತು. ಗಾಯಗೊಂಡವರನ್ನು ದೆಹಲಿಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇದೀಗ ರಕ್ಷಣಾ ಕಾರ್ಯಾಚರಣೆಯನ್ನು ಪೂರ್ಣಗೊಳಿಸಲಾಗಿದ್ದು, ದುರಂತಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ಪಿಜಿ ಮಾಲೀಕ ಬಂಧನ
ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕಟ್ಟಡದ ಮಾಲೀಕ ಹರಿರಾಮ್ನನ್ನು ಬಂಧಿಸಿದ್ದಾರೆ. ರಾಜಸ್ಥಾನದಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಟ್ಟಡದ ನಿರ್ವಹಣೆ, ಸುರಕ್ಷತಾ ಕ್ರಮಗಳು ಹಾಗೂ ಕಟ್ಟಡದ ಸ್ಥಿತಿಗತಿಗಳ ಕುರಿತು ಮಾಲೀಕರ ಜವಾಬ್ದಾರಿ ಸೇರಿದಂತೆ ಹಲವು ಅಂಶಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಈ ನಡುವೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ ಅವರು, ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಐವರು ಅಧಿಕಾರಿಗಳು ಸಸ್ಪೆಂಡ್
ಪಿಜಿ ಕಟ್ಟಡ ಕುಸಿತ ಪ್ರಕರಣದ ಬೆನ್ನಲ್ಲೇ ದೆಹಲಿ ಪುರಸಭೆ ನಿಗಮದ ಐವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಹಳೆಯ ಕಟ್ಟಡಗಳ ಪರಿಶೀಲನೆ ಹಾಗೂ ಸುರಕ್ಷತಾ ಕ್ರಮಗಳ ಮೇಲ್ವಿಚಾರಣೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.
ಸತ್ಯನಿಕೇತನ ದೆಹಲಿ ವಿಶ್ವವಿದ್ಯಾಲಯದ ಸೌತ್ ಕ್ಯಾಂಪಸ್ನ ಹಲವು ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಪ್ರಮುಖ ವಸತಿ ಪ್ರದೇಶವಾಗಿದೆ. ಕಿರಿದಾದ ರಸ್ತೆಯಲ್ಲಿದ್ದ ಕುಸಿದ ಕಟ್ಟಡದಲ್ಲಿ ಸುಮಾರು 15 ಕೊಠಡಿಗಳಿದ್ದವು ಎನ್ನಲಾಗಿದ್ದು, ಪ್ರತಿ ಕೊಠಡಿಯಲ್ಲಿ ಇಬ್ಬರಿಂದ ಮೂವರು ವಿದ್ಯಾರ್ಥಿಗಳು ವಾಸಿಸುತ್ತಿದ್ದರು ಎನ್ನಲಾಗಿದೆ.
ವಿದ್ಯಾರ್ಥಿಗಳಿಂದ ಪ್ರತಿ ಹಾಸಿಗೆಗೆ ತಿಂಗಳಿಗೆ ಸುಮಾರು 12 ಸಾವಿರ ರೂಪಾಯಿವರೆಗೆ ಬಾಡಿಗೆ ಪಡೆಯಲಾಗುತ್ತಿತ್ತು. ಕೇರಳ, ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಇಲ್ಲಿ ವಾಸಿಸುತ್ತಿದ್ದು, ದೆಹಲಿ ವಿಶ್ವವಿದ್ಯಾಲಯದ ಮೋತಿಲಾಲ್ ನೆಹರು ಕಾಲೇಜು, ಆತ್ಮಾರಾಮ ಸನಾತನ ಧರ್ಮ ಕಾಲೇಜು ಹಾಗೂ ಶ್ರೀ ವೆಂಕಟೇಶ್ವರ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಮನೆ ಮಾಲೀಕರು ಕಟ್ಟಡಗಳನ್ನು ಪಿಜಿಯಾಗಿ ಪರಿವರ್ತಿಸಿ ವಿದ್ಯಾರ್ಥಿಗಳಿಗೆ ಕೊಠಡಿಗಳನ್ನು ಬಾಡಿಗೆಗೆ ನೀಡುತ್ತಾರೆ. ಬಳಿಕ ಬೇರೆಡೆ ವಾಸಿಸುತ್ತಾ ಆನ್ಲೈನ್ ಮೂಲಕ ಬಾಡಿಗೆ ಸಂಗ್ರಹಿಸುವುದರತ್ತ ಮಾತ್ರ ಗಮನಹರಿಸುತ್ತಾರೆ. ಕಟ್ಟಡದ ಸ್ಥಿತಿ ಹಾಗೂ ನಿರ್ವಹಣೆಯನ್ನು ನಿಯಮಿತವಾಗಿ ಪರಿಶೀಲಿಸುವುದಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸುಮಾರು 30 ವರ್ಷ ಹಳೆಯದಾಗಿದ್ದ ಕುಸಿದ ಕಟ್ಟಡದ ಬೇಸ್ಮೆಂಟ್ನಲ್ಲಿ ಕೆಲವು ನಿರ್ಮಾಣ ಕಾಮಗಾರಿಗಳು ನಡೆಯುತ್ತಿದ್ದವು ಎನ್ನಲಾಗಿದೆ. ಜೊತೆಗೆ ತೆರೆದ ಚರಂಡಿ ಹಾಗೂ ಮಳೆಯಿಂದಾಗಿ ಬೇಸ್ಮೆಂಟ್ನಲ್ಲಿ ನೀರು ಸಂಗ್ರಹವಾಗುತ್ತಿತ್ತು. ಇದರಿಂದ ಕಟ್ಟಡದ ಅಡಿಪಾಯ ದುರ್ಬಲಗೊಂಡಿರಬಹುದು ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ದುರಂತ ಸಂಭವಿಸಿದ ದಿನ ವೀಕೆಂಡ್ ಆಗಿದ್ದರಿಂದ ಹಲವು ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಿದ್ದರು ಎನ್ನಲಾಗಿದೆ. ಇದರಿಂದ ಕಟ್ಟಡದಲ್ಲಿ ಸಾಮಾನ್ಯ ದಿನಗಳಿಗಿಂತ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳಿದ್ದ ಕಾರಣ ಹೆಚ್ಚಿನ ಪ್ರಾಣಹಾನಿ ತಪ್ಪಿರಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.





