ಬೆಂಗಳೂರು: ದಿವಂಗತ ನಟ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ನಿಧನದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇನ್ಸ್ಟಾಗ್ರಾಮ್ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಆರೋಪ ಎದುರಿಸುತ್ತಿದ್ದ ರಿತ್ವಿಕ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಸಾಮಾಜಿಕ ಜಾಲತಾಣಗಳ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ಕಟುವಾಗಿ ಎಚ್ಚರಿಕೆ ನೀಡಿದೆ. ಇದೇ ವೇಳೆ, ಅರ್ಜಿದಾರನ ವಿದ್ಯಾಭ್ಯಾಸ ಹಾಗೂ ಭವಿಷ್ಯವನ್ನು ಪರಿಗಣಿಸಿ ಆತನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿದೆ.
ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬಂದಿತ್ತು. ಪ್ರಕರಣದ ವಿಚಾರಣೆ ವೇಳೆ ನ್ಯಾಯಪೀಠವು ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಇದೆ ಎಂಬ ಕಾರಣಕ್ಕೆ ಆಕ್ಷೇಪಾರ್ಹ ಅಥವಾ ಅವಹೇಳನಕಾರಿ ಸಂದೇಶಗಳನ್ನು ಪ್ರಕಟಿಸಬಹುದೇ ಎಂದು ಪ್ರಶ್ನಿಸಿತು.
ಪುನೀತ್ ರಾಜ್ಕುಮಾರ್ ಅವರು ಖ್ಯಾತ ನಟ ಡಾ. ರಾಜ್ಕುಮಾರ್ ಅವರ ಪುತ್ರರಾಗಿದ್ದು, ಅವರ ನಿಧನದಂತಹ ಸಂದರ್ಭದಲ್ಲಿ ಅತ್ಯಂತ ಆಕ್ಷೇಪಾರ್ಹ ಪದಗಳನ್ನು ಬಳಸಿರುವುದು ಸರಿಯಲ್ಲ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು. ಸಾಮಾಜಿಕ ಜಾಲತಾಣಗಳ ಬಳಕೆಗೆ ಸ್ವಾತಂತ್ರ್ಯವಿದೆ ಎಂದ ಮಾತ್ರಕ್ಕೆ ಯಾವುದೇ ರೀತಿಯ ಸಂದೇಶಗಳನ್ನು ಪ್ರಕಟಿಸುವ ಅವಕಾಶವಿಲ್ಲ ಎಂಬುದನ್ನು ನ್ಯಾಯಾಲಯ ತಿಳಿಸಿದೆ.
ಏನಿದು ಪ್ರಕರಣ?
ಪುನೀತ್ ರಾಜ್ಕುಮಾರ್ ಅವರು 2021ರ ಅಕ್ಟೋಬರ್ 29ರಂದು ನಿಧನರಾದ ಬಳಿಕ, ನವೆಂಬರ್ 1ರಂದು ರಿತ್ವಿಕ್ ಶರ್ಮಾ ಅವರ ಇನ್ಸ್ಟಾಗ್ರಾಮ್ ಖಾತೆಯಿಂದ ಕಿಂಗ್ಫಿಷರ್ ಬಿಯರ್ ಬಾಟಲಿಯ ಚಿತ್ರವೊಂದನ್ನು ಪ್ರಕಟಿಸಲಾಗಿತ್ತು. ಅದರೊಂದಿಗೆ ಪುನೀತ್ ರಾಜ್ಕುಮಾರ್ ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಸಾಲುಗಳನ್ನು ಪೋಸ್ಟ್ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು.
ಈ ಕುರಿತು ಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಮತ್ತು ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ರಿತ್ವಿಕ್ ಶರ್ಮಾ ಹೈಕೋರ್ಟ್ ಮೊರೆ ಹೋಗಿದ್ದರು.
‘ತಪ್ಪಿನ ಅರಿವಾಗಿದೆ’ ಎಂದ ವಕೀಲೆ
ಅರ್ಜಿದಾರರ ಪರ ವಕೀಲೆ ಪದ್ಮಾವತಿ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿ, ರಿತ್ವಿಕ್ ಲಂಡನ್ನಲ್ಲಿ ಹುಟ್ಟಿ ಬೆಳೆದಿದ್ದು, ಸುಮಾರು ಎರಡು ವರ್ಷಗಳ ಹಿಂದಷ್ಟೇ ಭಾರತಕ್ಕೆ ಮರಳಿದ್ದಾರೆ ಎಂದು ತಿಳಿಸಿದರು. ಪೋಸ್ಟ್ನ ಪರಿಣಾಮ ಹಾಗೂ ಅದರ ಗಂಭೀರತೆಯ ಅರಿವು ಅವರಿಗೆ ಇರಲಿಲ್ಲ ಎಂದು ವಾದಿಸಿದರು.
ಅಲ್ಲದೆ, ಆ ಪೋಸ್ಟ್ನ್ನು ಅವರ ಸ್ನೇಹಿತ ಮಾಡಿದ್ದಾನೆ ಎಂದು ವಕೀಲೆ ನ್ಯಾಯಾಲಯದ ಗಮನಕ್ಕೆ ತಂದರು. ಆದರೂ ಪ್ರಕರಣದ ಗಂಭೀರತೆಯನ್ನು ಅರಿತು ರಿತ್ವಿಕ್ ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
ಪ್ರಸ್ತುತ ಅವರು ಅರ್ಥಶಾಸ್ತ್ರದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು, ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣದಿಂದ ಶೈಕ್ಷಣಿಕ ಹಾಗೂ ವೃತ್ತಿಜೀವನಕ್ಕೆ ತೊಂದರೆಯಾಗಬಹುದು. ಹೀಗಾಗಿ ಪ್ರಕರಣವನ್ನು ರದ್ದುಗೊಳಿಸುವಂತೆ ಮನವಿ ಮಾಡಿದರು.
ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠವು ಸಾಮಾಜಿಕ ಜಾಲತಾಣ ಬಳಕೆಯ ಸಂದರ್ಭದಲ್ಲಿ ಜವಾಬ್ದಾರಿಯುತವಾಗಿ ವರ್ತಿಸುವ ಅಗತ್ಯವನ್ನು ಒತ್ತಿಹೇಳಿತು. ಇದೇ ವೇಳೆ ಅರ್ಜಿದಾರನ ವಿದ್ಯಾಭ್ಯಾಸ ಮತ್ತು ಭವಿಷ್ಯವನ್ನೂ ಪರಿಗಣಿಸಿತು.
ರಿತ್ವಿಕ್ ಅವರ ವರ್ತನೆಗೆ ಕಟು ಶಬ್ದಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಇಂತಹ ಕೃತ್ಯವನ್ನು ಮುಂದುವರಿಸಬಾರದು ಎಂದು ಎಚ್ಚರಿಕೆ ನೀಡಿದೆ. ಅಂತಿಮವಾಗಿ ಅರ್ಜಿದಾರನ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಆತನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿತು.
