ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

ಬಲಿಷ್ಠ (67)

ದಕ್ಷಿಣ ಅಮೆರಿಕದ ಕೊಲಂಬಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪಕ್ಕೆ 47 ಮಂದಿ ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ. ರಿಕ್ಟರ್ ಮಾಪಕದಲ್ಲಿ 7.4 ತೀವ್ರತೆ ದಾಖಲಾಗಿರುವ ಈ ಪ್ರಬಲ ಭೂಕಂಪದಿಂದ ಪಶ್ಚಿಮ ಕೊಲಂಬಿಯಾದ ಹಲವು ಪ್ರದೇಶಗಳಲ್ಲಿ ಭಾರಿ ಹಾನಿ ಸಂಭವಿಸಿದೆ. ಕಟ್ಟಡಗಳು ಕುಸಿದಿದ್ದು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.

ಕೊಲಂಬಿಯಾದ ಚೊಕೊ ಪ್ರದೇಶದ ಸ್ಯಾನ್ ಜೋಸ್ ಡೆಲ್ ಪಾಲ್ಮಾರ್ ಪಟ್ಟಣದ ಸಮೀಪ ಭೂಕಂಪದ ಕೇಂದ್ರಬಿಂದು ದಾಖಲಾಗಿದೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 7.34ರ ಸುಮಾರಿಗೆ ಭೂಮಿ ಕಂಪಿಸಿದೆ. ಸ್ಯಾನ್ ಜೋಸ್ ಡೆಲ್ ಪಾಲ್ಮಾರ್‌ನಿಂದ ಪೂರ್ವಕ್ಕೆ ಸುಮಾರು 3 ಮೈಲಿ ದೂರದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದ್ದು, ಭೂಮಿಯೊಳಗೆ ಸುಮಾರು 107 ಕಿಲೋಮೀಟರ್ ಆಳದಲ್ಲಿ ಕಂಪನ ಸಂಭವಿಸಿದೆ ಎಂದು ಅಮೆರಿಕದ ಯುಎಸ್ ಜಿಯೋಲಾಜಿಕಲ್ ಸರ್ವೇ (USGS) ಹಾಗೂ ಕೊಲಂಬಿಯಾದ ಭೂಕಂಪಶಾಸ್ತ್ರ ಸಂಸ್ಥೆ ಮಾಹಿತಿ ನೀಡಿವೆ.

ಈ ಪ್ರಬಲ ಭೂಕಂಪದ ಕಂಪನ ಕೊಲಂಬಿಯಾದ ರಾಜಧಾನಿ ಬೊಗೋಟಾ ಸೇರಿದಂತೆ ಹಲವು ನಗರಗಳಿಗೂ ತಟ್ಟಿದೆ. ಬೊಗೋಟಾದಿಂದ ಸುಮಾರು 400 ಕಿಲೋಮೀಟರ್ ಪಶ್ಚಿಮದಲ್ಲಿರುವ ಸ್ಯಾನ್ ಜೋಸ್ ಡೆಲ್ ಪಾಲ್ಮಾರ್ ಸಣ್ಣ ಪಟ್ಟಣವಾಗಿದ್ದು, ಇಲ್ಲಿ ಸುಮಾರು 4,800 ಮಂದಿ ವಾಸಿಸುತ್ತಿದ್ದಾರೆ. ಭೂಕಂಪದ ಕೇಂದ್ರದ ಸಮೀಪದ ಪ್ರದೇಶಗಳಲ್ಲಿ ಕಟ್ಟಡಗಳು ಮತ್ತು ಇತರ ಮೂಲಸೌಕರ್ಯಗಳಿಗೆ ಭಾರಿ ಹಾನಿಯಾಗಿದೆ.

ಭೂಕಂಪದ ತೀವ್ರತೆ ನೆರೆಯ ರಾಷ್ಟ್ರಗಳಿಗೂ ಅನುಭವವಾಗಿದ್ದು, ಎಕ್ವಡಾರ್‌ನಲ್ಲೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ಹಲವು ಪ್ರದೇಶಗಳಲ್ಲಿ ಜನರು ಆತಂಕದಿಂದ ಮನೆ ಹಾಗೂ ಕಟ್ಟಡಗಳಿಂದ ಹೊರಗೆ ಓಡಿ ಬಂದಿದ್ದಾರೆ.

ಆರು ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಸ್ಥಗಿತ

ಭೂಕಂಪದಿಂದಾಗಿ ಪಶ್ಚಿಮ ಕೊಲಂಬಿಯಾದ ಮೂಲಸೌಕರ್ಯಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಆರು ಪ್ರಮುಖ ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವಿಮಾನ ನಿಲ್ದಾಣಗಳ ಸುರಕ್ಷತೆ ಪರಿಶೀಲನೆ ಹಾಗೂ ಹಾನಿಯ ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ.

ಅವಶೇಷಗಳಡಿ ಸಿಲುಕಿದವರಿಗಾಗಿ ಶೋಧ

ವಿಧ ನಗರಗಳಲ್ಲಿ ಕಟ್ಟಡಗಳ ಅವಶೇಷಗಳಡಿ ಜನರು ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆ, ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿ ಹಾಗೂ ದುರಂತ ನಿರ್ವಹಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಅವಶೇಷಗಳನ್ನು ತೆರವುಗೊಳಿಸಿ ಸಿಲುಕಿರುವವರನ್ನು ಸುರಕ್ಷಿತವಾಗಿ ಹೊರತೆಗೆಯಲು ತುರ್ತು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಭೂಕಂಪದ ಬಳಿಕ ಹಲವು ಪ್ರದೇಶಗಳಲ್ಲಿ ವಿದ್ಯುತ್ ಹಾಗೂ ಸಂವಹನ ವ್ಯವಸ್ಥೆಗಳ ಮೇಲೂ ಪರಿಣಾಮ ಬೀರಿರುವ ಬಗ್ಗೆ ವರದಿಯಾಗಿದೆ. ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಸ್ಥಿತಿ ಇನ್ನೂ ಆತಂಕಕಾರಿಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಂತೆ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಭೂಕಂಪದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಿಗೆ ತುರ್ತು ನೆರವು ಒದಗಿಸುವ ಕಾರ್ಯವೂ ಆರಂಭವಾಗಿದೆ. ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದ್ದು, ಗಾಯಾಳುಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Exit mobile version