ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ

Your paragraph text (37)

ಕಠ್ಮಂಡು: ಭೀಕರ ಜಲಪ್ರಳಯದಿಂದ ತತ್ತರಿಸಿರುವ ನೇಪಾಳದಲ್ಲಿ ಮತ್ತೊಂದು ಪ್ರವಾಹದ ಆತಂಕ ಎದುರಾಗಿದೆ. ಟಿಬೆಟ್ ಗಡಿ ಭಾಗದಲ್ಲಿ ಭೂಕುಸಿತದಿಂದ ಸೃಷ್ಟಿಯಾಗಿದ್ದ ನೈಸರ್ಗಿಕ ಸರೋವರವೊಂದು ಒಡೆದು ನೀರು ಅಪಾಯಕಾರಿ ಪ್ರಮಾಣದಲ್ಲಿ ಹರಿಯುತ್ತಿರುವ ಮಾಹಿತಿ ಹೊರಬಿದ್ದಿದೆ. ಈ ಹಿನ್ನೆಲೆ ನದಿ ಪಾತ್ರದ ಪ್ರದೇಶಗಳಲ್ಲಿ ನೇಪಾಳ ಸರ್ಕಾರ ಹೈ ಅಲರ್ಟ್ ಘೋಷಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಈಗಾಗಲೇ ನೇಪಾಳದ ಪ್ರವಾಹ ಮತ್ತು ಭೂಕುಸಿತದಲ್ಲಿ ಸಾವಿನ ಸಂಖ್ಯೆ 469ಕ್ಕೆ ಏರಿರುವ ಬೆನ್ನಲ್ಲೇ ಮತ್ತೊಂದು ನೈಸರ್ಗಿಕ ವಿಪತ್ತು ಎದುರಾಗಿರುವುದು ಆತಂಕ ಹೆಚ್ಚಿಸಿದೆ. ಟಿಬೆಟ್ ಗಡಿ ಪ್ರದೇಶದಲ್ಲಿ ಸರೋವರ ಒಡೆದಿರುವ ಹಿನ್ನೆಲೆ ನದಿ ಪಾತ್ರದ ಜನರು ಹಾಗೂ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

ಸರೋವರ ಒಡೆದಿರುವ ಕುರಿತು ಮಾಹಿತಿ ಲಭ್ಯವಾದ ಬಳಿಕ ನೇಪಾಳ ಪೊಲೀಸರು ಅಧಿಕೃತ ಎಚ್ಚರಿಕೆ ನೀಡಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ತೊಡಗಿರುವ ಭದ್ರತಾ ಸಿಬ್ಬಂದಿ, ರಕ್ಷಣಾ ಕಾರ್ಯಕರ್ತರು ಹಾಗೂ ಸಾರ್ವಜನಿಕರು ತಕ್ಷಣ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಪ್ರವಾಹದ ನೀರಿನ ಮಟ್ಟದಲ್ಲಿ ಏಕಾಏಕಿ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ನದಿ ಪಾತ್ರ ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದಿರಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಅಪಾಯದ ಪ್ರದೇಶಗಳಿಗೆ ತೆರಳದಂತೆ ರಕ್ಷಣಾ ತಂಡಗಳಿಗೂ ಸೂಚನೆ ನೀಡಲಾಗಿದೆ.

ಚೀನಾದಲ್ಲೂ ರಕ್ಷಣಾ ಕಾರ್ಯ ಸ್ಥಗಿತ

ಟಿಬೆಟ್ ಭಾಗದಲ್ಲೂ ಪ್ರವಾಹದ ಅಪಾಯ ಹೆಚ್ಚಿರುವ ಹಿನ್ನೆಲೆ ಚೀನಾ ಸರ್ಕಾರ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ. ಚೀನಾ-ನೇಪಾಳ ಗಡಿ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂಕುಸಿತದ ಪರಿಣಾಮ ದೊಡ್ಡ ಪ್ರಮಾಣದ ಮಣ್ಣಿನ ರಾಶಿ ಕುಸಿದು ನೈಸರ್ಗಿಕ ಸರೋವರವೊಂದು ನಿರ್ಮಾಣವಾಗಿತ್ತು.

ಇದೀಗ ಆ ಸರೋವರದಲ್ಲಿ ಸಂಗ್ರಹವಾಗಿದ್ದ ನೀರು ಉಕ್ಕಿ ಹರಿಯಲು ಆರಂಭಿಸಿದ್ದು, ಸುತ್ತಮುತ್ತಲಿನ ಪ್ರದೇಶಗಳಿಗೆ ಅಪಾಯದ ಮುನ್ಸೂಚನೆ ನೀಡಲಾಗಿದೆ. ನೀರಿನ ಹರಿವು ರಕ್ಷಣಾ ತಂಡಗಳು ಕಾರ್ಯನಿರ್ವಹಿಸುತ್ತಿದ್ದ ಪ್ರದೇಶದತ್ತ  ಸಾಗುತ್ತಿರುವ ಹಿನ್ನೆಲೆ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ.

ರಕ್ಷಣಾ ತಂಡಗಳಿಗೆ 1 ಕಿ.ಮೀ ಹಿಂದಕ್ಕೆ ಸರಿಯುವಂತೆ ಆದೇಶ

ಅಪಾಯದ ಮುನ್ಸೂಚನೆ ಸಿಕ್ಕ ತಕ್ಷಣ ದುರಂತ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಕ್ಷಣಾ ತಂಡಗಳಿಗೆ ತಮ್ಮ ಸ್ಥಳದಿಂದ ಕನಿಷ್ಠ ಒಂದು ಕಿಲೋಮೀಟರ್ ಹಿಂದಕ್ಕೆ ಸರಿಯುವಂತೆ ಸೂಚನೆ ನೀಡಲಾಗಿದೆ. ಮುಂದಿನ ಆದೇಶ ಬರುವವರೆಗೆ ಯಾವುದೇ ಕಾರ್ಯಾಚರಣೆ ನಡೆಸದಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ರಕ್ಷಣಾ ಸಿಬ್ಬಂದಿಯ ಸುರಕ್ಷತೆಯನ್ನೇ ಮೊದಲ ಆದ್ಯತೆಯಾಗಿ ಪರಿಗಣಿಸಲಾಗಿದ್ದು, ಪ್ರವಾಹದ ಪರಿಸ್ಥಿತಿ ಸ್ಥಿರಗೊಂಡ ನಂತರವೇ ಕಾರ್ಯಾಚರಣೆಯನ್ನು ಪುನರಾರಂಭಿಸುವ ಸಾಧ್ಯತೆಯಿದೆ.

ಬುಧವಾರ ಟಿಬೆಟ್‌ನ ಗಡಿ ಪಟ್ಟಣವಾದ ಗೈರಾಂಗ್ ಪ್ರದೇಶದಲ್ಲಿ ಭಾರಿ ಪ್ರಮಾಣದ ಮಣ್ಣಿನ ಕುಸಿತ ಸಂಭವಿಸಿತ್ತು. ಈ ಭೂಕುಸಿತದ ಪರಿಣಾಮ ನೈಸರ್ಗಿಕವಾಗಿ ನೀರು ಸಂಗ್ರಹವಾಗಿ ಸರೋವರದ ರೂಪ ಪಡೆದಿತ್ತು. ಇದೀಗ ಅದೇ ಸರೋವರದ ನೀರು ಉಕ್ಕಿ ಹರಿಯುತ್ತಿರುವುದು ಗಡಿ ಪ್ರದೇಶದಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಪ್ರವಾಹದ ನೀರಿನ ಹರಿವು ಹೆಚ್ಚಾದರೆ ನೇಪಾಳದ ನದಿ ಪಾತ್ರದ ಪ್ರದೇಶಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ನೇಪಾಳದಲ್ಲಿ ಇತ್ತೀಚಿನ ಪ್ರವಾಹ ಮತ್ತು ಭೂಕುಸಿತದಿಂದ ಭಾರೀ ಪ್ರಮಾಣದ ಜೀವಹಾನಿ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಈಗಾಗಲೇ 469ಕ್ಕೆ ತಲುಪಿದ್ದು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ.

 

Exit mobile version