ಚಿನ್ನಾಭರಣ ವಂಚನೆ ಕೇಸ್‌: ಐಶ್ವರ್ಯಾ ಗೌಡ 14 ದಿನಗಳ ED ಕಸ್ಟಡಿಗೆ

Untitled design 2025 04 25t141534.913

ಬೆಂಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಆರೋಪಿತರಾದ ಐಶ್ವರ್ಯಾ ಗೌಡ ಅವರನ್ನು ಬಂಧಿಸಿ, 14 ದಿನಗಳ ಕಾಲ ಇಡಿ ಕಸ್ಟಡಿಗೆ ಕಳುಹಿಸುವಂತೆ ನ್ಯಾಯಾಲಯದಿಂದ ಆದೇಶ ಪಡೆದುಕೊಂಡಿದ್ದಾರೆ.

ಆರೋಪಿತ ಐಶ್ವರ್ಯಾ ಗೌಡ ಅವರು ತಮ್ಮನ್ನು ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಸಹೋದರಿ ಎಂದು ಪರಿಚಯಿಸಿಕೊಂಡು ಲಕ್ಷಾಂತರ ರೂಪಾಯಿಗಳ ಮೌಲ್ಯದ ಚಿನ್ನಾಭರಣ ವಂಚನೆ ಮಾಡಿದ ಆರೋಪದ ಮೇಲೆ ಈ ಪ್ರಕರಣ ದಾಖಲಾಗಿದೆ. ಪ್ರಕರಣದ ಹಿನ್ನೆಲೆ ತಿಳಿಯುತ್ತಿದ್ದಂತೆ ಇಡಿ ಅಧಿಕಾರಿಗಳು ತನಿಖೆ ಚುರುಕುಗೊಂಡು, ಹಲವಾರು ಮಾಹಿತಿಗಳನ್ನು ಸಂಗ್ರಹಿಸಿದರು.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಐಶ್ವರ್ಯಾ ಗೌಡ ನಿವಾಸ ಹಾಗೂ ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿರುವ ಫ್ಲ್ಯಾಟ್ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದರು. ಈ ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳು ಮತ್ತು ಪಾವತಿ ವಿವರಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ ಹಣವರ್ಗಾವಣೆಯ ಮಾಹಿತಿಯನ್ನು ವಿವರವಾಗಿ ಪರಿಶೀಲಿಸಲಾಗುತ್ತಿದೆ.

ಇದಾದ ಬಳಿಕ ಐಶ್ವರ್ಯಾ ಗೌಡ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಅವರು ಇಡಿ ತನಿಖೆಗೆ ಸಹಕಾರ ನೀಡಬೇಕೆಂದು ಸೂಚಿಸಿ, 14 ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸುವಂತೆ ಆದೇಶಿಸಿದ್ದಾರೆ. ಇಡಿ ಅಧಿಕಾರಿಗಳು ಈಗಾಗಲೇ ವಿಚಾರಣೆಯ ಪ್ರಕ್ರಿಯೆ ಆರಂಭಿಸಿದ್ದು, ಪ್ರಕರಣದ ಹಿಂದಿನ ಸಂಪೂರ್ಣ ಜಾಲವನ್ನು ಬೇಧಿಸಲು ಪ್ರಯತ್ನಿಸುತ್ತಿದ್ದಾರೆ.

Exit mobile version