ದೆಹಲಿ ಸಭೆಯತ್ತ ರಾಜ್ಯದ ಚಿತ್ತ: ಇಂದು ಪ್ರಕಟವಾಗುತ್ತಾ ಸಚಿವರ ಪಟ್ಟಿ?

ಬೆಂಗಳೂರು, ಜುಲೈ 21: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್‌ ಹೈಕಮಾಂಡ್‌ ಸಭೆ ತೀವ್ರ ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ದೆಹಲಿಗೆ ತಲುಪಿದ್ದರೂ, ತಕ್ಷಣವೇ ಅಂತಿಮ ಸಭೆ ನಡೆಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಸಂಸತ್ತಿನ ಕಲಾಪದಲ್ಲಿ ತೊಡಗಿಸಿಕೊಂಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಲಭ್ಯತೆಯ ಆಧಾರದ ಮೇಲೆ ಸಭೆಯ ಸಮಯ ನಿಗದಿಯಾಗಲಿದೆ.

ಮಾಹಿತಿಯ ಪ್ರಕಾರ ಮಧ್ಯಾಹ್ನ ಸುಮಾರು 2 ಗಂಟೆಗೆ ಸುರ್ಜೇವಾಲ ಅವರೊಂದಿಗೆ ಡಿ.ಕೆ. ಶಿವಕುಮಾರ್‌, ಸಿದ್ದರಾಮಯ್ಯ ಹಾಗೂ ಹಿರಿಯ ನಾಯಕರು ಮೊದಲ ಹಂತದ ಸಮಾಲೋಚನೆ ನಡೆಸಲಿದ್ದಾರೆ. ಈ ವೇಳೆ ಸಚಿವ ಸ್ಥಾನ ಹಂಚಿಕೆಯ 70:30 ಸೂತ್ರ, ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನ ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳ ಹೆಸರುಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯುವ ಸಾಧ್ಯತೆ ಇದೆ. ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತು ಕೂಡ ಸಮಾಲೋಚನೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಸಂಸತ್ತಿನ ಕಲಾಪ ಮುಗಿದ ನಂತರ ಸಂಜೆ ವೇಳೆಗೆ ರಾಹುಲ್‌ ಗಾಂಧಿ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ನಡೆಯಲಿರುವ ಈ ಸಭೆಯಲ್ಲೇ ಸಚಿವ ಸಂಪುಟ ವಿಸ್ತರಣೆಗೆ ಅಂತಿಮ ಅನುಮೋದನೆ ದೊರೆಯುವ ಸಾಧ್ಯತೆ ಇದೆ.

ರಾಹುಲ್‌ ಗಾಂಧಿ ಹಾಗೂ ಖರ್ಗೆ ಒಪ್ಪಿಗೆ ನೀಡಿದ ಬಳಿಕ ಸಚಿವರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಎಲ್ಲವೂ ಯೋಜನೆಯಂತೆ ನಡೆದರೆ ಇಂದೇ ಸಂಜೆ ಸಚಿವರ ಪಟ್ಟಿ ಪ್ರಕಟವಾಗಿ, ಮುಂದಿನ ಎರಡು ದಿನಗಳೊಳಗೆ ಹೊಸ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಬಹುದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಈ ಬಾರಿ ಸಚಿವ ಸಂಪುಟದಲ್ಲಿ ದಲಿತ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡುವ ಬಗ್ಗೆ ಕಾಂಗ್ರೆಸ್‌ ನಾಯಕತ್ವ ಗಂಭೀರವಾಗಿ ಚಿಂತನೆ ನಡೆಸಿದೆ ಎನ್ನಲಾಗಿದೆ. ದಲಿತ ಕೋಟಾದಡಿ ನರೇಂದ್ರ ಸ್ವಾಮಿ, ಆನೇಕಲ್‌ ಶಿವಣ್ಣ ಹಾಗೂ ಪ್ರಸಾದ್‌ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಪ್ರಬಲವಾಗಿದೆ. ಈ ಮೂವರು ಹೆಸರುಗಳು ಈಗಾಗಲೇ ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆದಿವೆ ಎಂಬ ಚರ್ಚೆಯೂ ಜೋರಾಗಿದೆ.

ಇದರ ಜೊತೆಗೆ ಮಹಿಳಾ ಪ್ರತಿನಿಧಿತ್ವಕ್ಕೂ ವಿಶೇಷ ಆದ್ಯತೆ ನೀಡುವ ಸಾಧ್ಯತೆ ಇದೆ.  ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ.

ಮತ್ತೊಂದು ಮಹಿಳಾ ಕೋಟಾದ ಸ್ಥಾನಕ್ಕಾಗಿ ವಿಧಾನ ಪರಿಷತ್ ಸದಸ್ಯರಾದ ಆರತಿ ಕೃಷ್ಣ ಹಾಗೂ ಉಮಾಶ್ರೀ ನಡುವೆ ಪೈಪೋಟಿ ಮುಂದುವರಿದಿದೆ. ಅಂತಿಮ ನಿರ್ಧಾರವನ್ನು ಹೈಕಮಾಂಡ್‌ ಸಭೆಯಲ್ಲೇ ಕೈಗೊಳ್ಳುವ ಸಾಧ್ಯತೆ ಇದೆ.

ಕಾಂಗ್ರೆಸ್‌ ಪಕ್ಷದಿಂದ ಈವರೆಗೆ ಸಚಿವರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಅಂತಿಮ ನಿರ್ಧಾರ ದೆಹಲಿಯ ಹೈಕಮಾಂಡ್‌ ಸಭೆಯ ಬಳಿಕವೇ ಸ್ಪಷ್ಟವಾಗಲಿದ್ದು, ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆ ಭಾರೀ ಚರ್ಚೆಗೆ ಕಾರಣವಾಗಿದೆ.

Exit mobile version