ಧರ್ಮಸ್ಥಳ ಪ್ರಕರಣ ತನಿಖೆ ಎನ್‌ಐಎಗೆ: ಸ್ವಾಮೀಜಿಗಳ ನಿಯೋಗದಿಂದ ಅಮಿತ್‌ ಶಾಗೆ ಮನವಿ

ಬೈಕ್, ಕಾರು, ಟಿವಿ, (5)

ನವದೆಹಲಿ: ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಮತ್ತು ಷಡ್ಯಂತ್ರದ ಕುರಿತು ಗಂಭೀರ ಆತಂಕ ವ್ಯಕ್ತಪಡಿಸಿರುವ ಕರ್ನಾಟಕದ ಸನಾತನ ಸಂತರ ನಿಯೋಗವು, ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಗತ್ಯ ಬಿದ್ದರೆ ತನಿಖೆಯನ್ನು ಎನ್‌ಐಎಗೆ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪಂಚಮಸಾಲಿ ಲಿಂಗಾಯತ ಮಠದ ಶ್ವಾಸಗುರು ಶ್ರೀ ವಚನಾನಂದ ಸ್ವಾಮೀಜಿ ನೇತೃತ್ವದ ಈ ನಿಯೋಗದಲ್ಲಿ, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸೇರಿದಂತೆ ಒಟ್ಟು ಎಂಟು ಸ್ವಾಮೀಜಿಗಳು ಭಾಗವಹಿಸಿದ್ದರು. ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ, ಅಪಪ್ರಚಾರ ಮತ್ತು ಬಾಹುಬಲಿ ಬೆಟ್ಟದಲ್ಲಿ ನಡೆದ ಉತ್ಖನನ ಕಾರ್ಯದ ಬಗ್ಗೆ ಸಂತರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯ ಬಗ್ಗೆ ಸ್ವಾಮೀಜಿಗಳಿಗೆ ಯಾವುದೇ ಆಕ್ಷೇಪವಿಲ್ಲ. ಆದರೆ, ಈ ಪ್ರಕರಣವನ್ನು ಎನ್‌ಐಎಗೆ ವಹಿಸಿದರೆ ತನಿಖೆಯು ಹೆಚ್ಚು ಸಮಗ್ರವಾಗಿ ನಡೆಯಲಿದೆ ಎಂದು ನಿಯೋಗವು ಒತ್ತಾಯಿಸಿದೆ. ಈ ಪ್ರಕರಣದ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂದು ಆರೋಪಿಸಿರುವ ಸ್ವಾಮೀಜಿಗಳು, ಇದರ ಸತ್ಯಾಂಶವನ್ನು ಬಯಲಿಗೆ ತರಬೇಕೆಂದು ಕೋರಿದ್ದಾರೆ.

ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಚರ್ಚೆಯಲ್ಲಿ, ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಯೋಜಿತ ಅಪಪ್ರಚಾರದ ಕುರಿತು ಸ್ವಾಮೀಜಿಗಳು ವಿವರವಾಗಿ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳವು ಲಕ್ಷಾಂತರ ಭಕ್ತರ ಆಧ್ಯಾತ್ಮಿಕ ಕೇಂದ್ರವಾಗಿದ್ದು, ಇದನ್ನು ಶಬರಿಮಲೆ ಮತ್ತು ತಿರುಪತಿಯಂತಹ ಇತರ ಧಾರ್ಮಿಕ ಕ್ಷೇತ್ರಗಳಂತೆ ಗುರಿಯಾಗಿಸಲಾಗಿದೆ ಎಂದು ಅವರು ಹೇಳಿದ್ದಾರೆ. “ಹಿಂದೂ ಧರ್ಮ ಕ್ಷೇತ್ರಗಳನ್ನು ಸಂಶಯದಿಂದ ಕಾಣುವಂತೆ ಮಾಡುವ ಷಡ್ಯಂತ್ರವಿದೆ. ಜನರು ದೇವಸ್ಥಾನಗಳಿಗೆ ಹೋಗದಂತೆ ತಡೆಯುವ ದುರುದ್ದೇಶ ಇದರ ಹಿಂದಿದೆ,” ಎಂದು ಸ್ವಾಮೀಜಿಗಳು ಹೇಳಿದ್ದಾರೆ. ಈ ಆರೋಪಗಳ ಹಿಂದೆ ರಾಷ್ಟ್ರವಿರೋಧಿ ಶಕ್ತಿಗಳ ಕೈವಾಡವಿದೆ ಎಂದು ಆರೋಪಿಸಿರುವ ನಿಯೋಗವು, ಎನ್‌ಐಎ ತನಿಖೆಯ ಮೂಲಕ ಸತ್ಯ ಬಯಲಿಗೆ ಬರಬೇಕೆಂದು ಒತ್ತಾಯಿಸಿದೆ.

ಅಮಿತ್ ಶಾ ಅವರು, “ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ,” ಎಂದು ಭರವಸೆ ನೀಡಿದ್ದಾರೆ. ಕೇಂದ್ರ ಸರ್ಕಾರವು ಈ ವಿಷಯದಲ್ಲಿ ಗಂಭೀರ ಕ್ರಮ ಕೈಗೊಳ್ಳಲಿದೆ ಎಂದು ಅವರು ಸೂಚಿಸಿದ್ದಾರೆ.

Exit mobile version