ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌..!

Untitled design 2025 10 16t225741.743

ಬೆಂಗಳೂರು: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ದೀಪಾವಳಿ ಉಡುಗೊರೆ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತಲಾ 2 ಸೀರೆಗಳಂತೆ ಒಟ್ಟು 2,79,688 ಸೀರೆಗಳನ್ನು ರೂ.13.98 ಕೋಟಿ ವೆಚ್ಚದಲ್ಲಿ ಖರೀದಿಸಿ ವಿತರಿಸಲು ನಿರ್ಧರಿಸಲಾಗಿದೆ.

ಇದರ ಜೊತೆಗೆ ಸಚಿವ ಸಂಪುಟ ಸಭೆಯಲ್ಲಿ ಹಲವಾರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ರಾಜ್ಯದ 69,922 ಅಂಗನವಾಡಿ ಕೇಂದ್ರಗಳಿಗೆ ರೂ.10.49 ಕೋಟಿ ವೆಚ್ಚದಲ್ಲಿ ಔಷಧ ಕಿಟ್‌ಗಳನ್ನು ಖರೀದಿಸಿ ಒದಗಿಸಲು ತೀರ್ಮಾನಿಸಲಾಗಿದೆ. ಈ ನಿರ್ಣಯದಿಂದ ಅಂಗನವಾಡಿ ಕೇಂದ್ರಗಳಲ್ಲಿ ಚಿಕಿತ್ಸಾ ಸೌಲಭ್ಯಗಳು ಉತ್ತಮವಾಗಲು ನೆರವಾಗಿವೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದ 75 ಎಕರೆ ಜಮೀನಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಮತ್ತು ಕ್ರೀಡಾ ಸಂಕೀರ್ಣವನ್ನು ರೂ. 2,350 ಕೋಟಿ ವೆಚ್ಚದಲ್ಲಿ ನಿರ್ಮಿಸಲು ತಾತ್ವಿಕ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ ರಾಜ್ಯದಲ್ಲಿ ಕ್ರಿಕೆಟ್ ಸೌಲಭ್ಯಗಳು ಹೆಚ್ಚಾಗುವುದರ ಜೊತೆಗೆ ಅಂತರರಾಷ್ಟ್ರೀಯ ಮಟ್ಟದ ಪಂದ್ಯಗಳನ್ನು ನಡೆಸಲು ಸಹಾಯಕವಾಗುವುದು.

ವಿಜಯಪುರ ಜಿಲ್ಲಾಸ್ಪತ್ರೆಯ ಆವರಣದಲ್ಲಿ 100 ಹಾಸಿಗೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅವಶ್ಯವಿರುವ ವೈದ್ಯಕೀಯ ಉಪಕರಣಗಳನ್ನು ರೂ.54.92 ಕೋಟಿ ಅಂದಾಜು ಮೊತ್ತದಲ್ಲಿ ಖರೀದಿಸಲು ತೀರ್ಮಾನಿಸಲಾಗಿದೆ. ಇದೇ ರೀತಿ ಸಂಜಯ್ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸೆ ಸಂಸ್ಥೆಗೆ ಅವಶ್ಯವಿರುವ ವೈದ್ಯಕೀಯ ಉಪಕರಣಗಳನ್ನು ರೂ.26.09 ಕೋಟಿ ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಮೈಸೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು ತಲಾ ರೂ.100 ಕೋಟಿಗಳ ಅನುದಾನದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ ಮಾನಸಿಕ ಆರೋಗ್ಯ ಸೇವೆಗಳು ರಾಜ್ಯದಾದ್ಯಂತ ವಿಸ್ತರಿಸಲು ಸಹಾಯಕವಾಗುವುದು.

ವೃಷಭಾವತಿ ವ್ಯಾಲಿ ಸಂಸ್ಕರಣಾ ಘಟಕದ ಮರುಬಳಕೆ ನೀರನ್ನು ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಕೆರೆಗಳಿಗೆ ತುಂಬಿಸುವ ರೂ.650 ಕೋಟಿ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನೀರಿನ ಪೂರೈಕೆ ಸಮಸ್ಯೆಗೆ ಭಾಗಶಃ ಪರಿಹಾರ ಸಿಗುವುದು.

Exit mobile version