ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ: ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್

Untitled design 2025 12 20T081901.003

ಬೆಂಗಳೂರು: ರಾಜ್ಯ ಸರ್ಕಾರದ (Government of Karnataka) ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದೆ. ಬಡವರ ಆಹಾರ ಭದ್ರತೆಗೆಂದು ಜಾರಿಗೆ ತಂದಿರುವ ಈ ಯೋಜನೆಯಲ್ಲಿ ಭಾರೀ ಅಕ್ರಮಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಇದೀಗ ಬೆಂಗಳೂರಿನ ಯಲಚೇನಹಳ್ಳಿ ಪ್ರದೇಶದಲ್ಲಿ ನಡೆದಿರುವ ಅನ್ನಭಾಗ್ಯ ಅಕ್ಕಿ ಕಾಳಸಂತೆ ದಂಧೆ ಪ್ರಕರಣ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರಿನ ಯಲಚೇನಹಳ್ಳಿಯ ಕಾಂಗ್ರೆಸ್ ಮುಖಂಡ ಅಲೀಮ್ ಎಂಬಾತ, ಬಿಪಿಎಲ್ (BPL) ಕಾರ್ಡ್ ಹೊಂದಿರುವ ಫಲಾನುಭವಿಗಳಿಂದ ಕಡಿಮೆ ಬೆಲೆಗೆ ಅನ್ನಭಾಗ್ಯ ಅಕ್ಕಿಯನ್ನು ಖರೀದಿಸಿ, ಅದನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಆರೋಪವನ್ನು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಮುಖಂಡರು ಸಾರ್ವಜನಿಕವಾಗಿ ಬಯಲಿಗೆಳೆದಿದ್ದಾರೆ.

ಕೆಆರ್‌ಎಸ್ ಪಕ್ಷದ ಆರೋಪದ ಪ್ರಕಾರ, ಯಲಚೇನಹಳ್ಳಿ, ಇಲಿಯಾಸ್ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಲೀಮ್ ಮತ್ತು ಅವನ ಸಹಚರರು ಸಂಘಟಿತವಾಗಿ ಅನ್ನಭಾಗ್ಯ ಅಕ್ಕಿ ದಂಧೆಯನ್ನು ನಡೆಸುತ್ತಿದ್ದರು. ಸರ್ಕಾರ ಉಚಿತವಾಗಿ ಅಥವಾ ಅತಿ ಕಡಿಮೆ ದರದಲ್ಲಿ ವಿತರಿಸುವ ಅಕ್ಕಿಯನ್ನು ಫಲಾನುಭವಿಗಳಿಂದ ಹಣ ನೀಡಿ ಖರೀದಿಸಿ, ಅದನ್ನು ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಮೂಲಕ ಲಕ್ಷಾಂತರ ರೂಪಾಯಿ ಲಾಭ ಪಡೆಯಲಾಗುತ್ತಿತ್ತು ಎನ್ನಲಾಗಿದೆ.

ಈ ಅಕ್ರಮದ ಬಗ್ಗೆ ಕಳೆದ ಹಲವು ದಿನಗಳಿಂದಲೂ ಸ್ಥಳೀಯವಾಗಿ ತಕರಾರು ನಡೆಯುತ್ತಿದ್ದು, ಕೆಆರ್‌ಎಸ್ ಮುಖಂಡರು ಅಕ್ಕಿ ದಂಧೆಯ ಬಗ್ಗೆ ಸಾಕ್ಷ್ಯ ಸಮೇತ ಆರೋಪ ಮಾಡಿದ ಬಳಿಕ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಅನ್ನಭಾಗ್ಯ ಅಕ್ಕಿ ಮಾರಾಟದ ಜಾಲವನ್ನು ಬಹಿರಂಗಪಡಿಸಿದ ನಂತರ ಎರಡು ಗುಂಪುಗಳ ನಡುವೆ ಜಟಾಪಟಿ ಸಂಭವಿಸಿದೆ. ಸ್ಥಳೀಯರು ಹಾಗೂ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ, ಗಲಾಟೆ ನಡೆದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.

ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡ ಅಲೀಮ್ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅನ್ನಭಾಗ್ಯ ಅಕ್ಕಿಯ ಅಕ್ರಮ ಸಂಗ್ರಹ, ಕಾಳಸಂತೆಯಲ್ಲಿ ಮಾರಾಟ, ಸರ್ಕಾರಿ ಯೋಜನೆಯ ದುರುಪಯೋಗ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

Exit mobile version