ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅವ್ಯವಹಾರಗಳ ಕುರಿತು ಯಾವುದೇ ದೂರುಗಳು ದಾಖಲಾಗಿರುವುದಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಎಂ. ನಾಗರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅವ್ಯವಹಾರಗಳು ನಡೆದಿರುವ ಬಗ್ಗೆ ಇಲ್ಲಿಯ ವರೆಗೂ ಯಾವುದೇ ದೂರುಗಳು ದಾಖಲಾಗಿರುವುದಿಲ್ಲ. ದೂರುಗಳನ್ನು ಬಂದಲ್ಲಿ ಪರಿಶೀಲಿಸಿ ವರದಿಯನ್ನು ನೀಡಲು ಈಗಾಗಲೇ ಸಮಿತಿಯನ್ನು ಸಹ ರಚಿಸಲಾಗಿದೆ.
ಸ್ಮಾರ್ಟ್ ಸಿಟಿ ಅಭಿಯಾನದಡಿ ರಾಜ್ಯದ 07 ನಗರಗಳಾದ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ – ಧಾರವಾಡ, ಮಂಗಳೂರು, ಶಿವಮೊಗ್ಗ, ತುಮಕೂರು ಮತ್ತು ಬೆಂಗಳೂರು ನಗರಗಳು ಆಯ್ಕೆಯಾಗಿರುತ್ತದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಇಲ್ಲಿಯವರೆಗೂ ಬಿಡುಗಡೆಯಾದ ರೂ. 6854.5 ಕೋಟಿ ಅನುದಾನದಲ್ಲಿ ರೂ. 6472.08 ಕೋಟಿಗಳನ್ನು ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.





