ಬಾಗಲಕೋಟೆ: ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆಯ ವೇಳೆ ನಡೆದ ಕಲ್ಲು ಮತ್ತು ಚಪ್ಪಲಿ ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಆದರೆ, ಈ ತನಿಖೆಯ ಭಾಗವಾಗಿ ಹಿಂದೂ ಯುವಕನೊಬ್ಬನನ್ನು ಬಂಧಿಸಲು ಹೋದ ಪೊಲೀಸರಿಗೆ ಸ್ಥಳೀಯ ಮಹಿಳೆಯರು ಅಡ್ಡಗಟ್ಟಿ ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ.
ನಗರದ ಕಿಲ್ಲಾ ಓಣಿಯಲ್ಲಿ ವಾಸವಾಗಿರುವ ಮುತ್ತು ಮಾಗಿ ಎಂಬ ಯುವಕನನ್ನು ವಿಚಾರಣೆಗಾಗಿ ಕರೆದೊಯ್ಯಲು ಪೊಲೀಸರು ಆಗಮಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆಯೇ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಸ್ಥಳೀಯ ಮಹಿಳೆಯರು ಪೊಲೀಸರ ವಾಹನಕ್ಕೆ ಅಡ್ಡಲಾಗಿ ನಿಂತರು. ತಪ್ಪಿತಸ್ಥರನ್ನು ಬಿಟ್ಟು ಅಮಾಯಕ ಹಿಂದೂ ಯುವಕರನ್ನು ಗುರಿ ಮಾಡುತ್ತಿದ್ದೀರಿ ಎಂದು ಮಹಿಳೆಯರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ತೀವ್ರ ಮಾತಿನ ಚಕಮಕಿ ನಡೆದು, ಸ್ಥಳದಲ್ಲಿ ಹೈಡ್ರಾಮಾ ಸೃಷ್ಟಿಯಾಯಿತು.
ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದವರನ್ನು ಪತ್ತೆ ಹಚ್ಚುವ ಬದಲು, ಶಾಂತಿಯುತವಾಗಿ ಮೆರವಣಿಗೆಯಲ್ಲಿ ಭಾಗವಹಿಸಿದವರ ಮೇಲೆ ಪೊಲೀಸರು ದೌರ್ಜನ್ಯ ಎಸಗುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ನಮ್ಮ ಯುವಕರು ಯಾವುದೇ ತಪ್ಪು ಮಾಡಿಲ್ಲ, ಅವರನ್ನು ಕರೆದೊಯ್ಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದ ಮಹಿಳೆಯರು ಪೊಲೀಸರಿಗೆ ಅವಾಜ್ ಹಾಕಿದರು.
ಮಾಜಿ ಶಾಸಕ ವೀರಣ್ಣ ಚರಂತಿಮಠ ಭೇಟಿ
ಘಟನಾ ಸ್ಥಳಕ್ಕೆ ಬಾಗಲಕೋಟೆಯ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಆಕ್ರೋಶಗೊಂಡಿದ್ದ ಜನರನ್ನು ಸಮಾಧಾನಪಡಿಸಿದ ಅವರು, ಪೊಲೀಸರೊಂದಿಗೆ ಚರ್ಚೆ ನಡೆಸಿದರು. ಯಾವುದೇ ಕಾರಣಕ್ಕೂ ಅಮಾಯಕರಿಗೆ ತೊಂದರೆಯಾಗಬಾರದು. ನೈಜ ಆರೋಪಿಗಳನ್ನು ಬಂಧಿಸಲಿ, ಅದನ್ನು ಬಿಟ್ಟು ಒಂದು ಸಮುದಾಯವನ್ನು ಗುರಿ ಮಾಡುವುದು ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಶಿವಾಜಿ ಜಯಂತಿ ಮೆರವಣಿಗೆಯ ಘಟನೆಯ ನಂತರ ಬಾಗಲಕೋಟೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ. ಸದ್ಯಕ್ಕೆ ನಗರದಾದ್ಯಂತ ಶಾಂತಿ ಕಾಯ್ದುಕೊಳ್ಳಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಆದರೆ, ಈ ಬಂಧನದ ಪ್ರಕ್ರಿಯೆಗಳು ಜನರಲ್ಲಿ ಮತ್ತಷ್ಟು ಅಸಮಾಧಾನ ಮೂಡಿಸುತ್ತಿದ್ದು, ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.